ಕಲುಷಿತ ನೀರು ಸೇವನೆ ಪ್ರಕರಣ: ಕವಾಡಿಗರಹಟ್ಟಿಗೆ ಭೇಟಿ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿ
ಚಿತ್ರದುರ್ಗ, ಆಗಸ್ಟ್, 11: ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಮಹಿಳೆಗೆ ಗರ್ಭಪಾತ ಸೇರಿದಂತೆ 6 ಮಂದಿ ಮೃತಮಟ್ಟ ಘಟನೆ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಇಂದು ಕವಾಡಿಗರ ಹಟ್ಟಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಅಲ್ಲದೆ ಕಾಲರಾಗೆ ತುತ್ತಾದ ಮಂಜುಳಾ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಮನೆಯ ಸ್ಥಿತಿ, ಅನೈರ್ಮಲ್ಯದ ವಾತಾವರಣ ಕಂಡು ಶೌಚಾಲಯದ ಬಗ್ಗೆ ಪ್ರಶ್ನಿಸಿದರು. ಆಗ ಕುಟುಂಬದವರು ಬಯಲು ಬಹಿರ್ದೆಸೆಗೆ ತೆರಳುತ್ತಿರುವುದಾಗಿ ಮಾಹಿತಿ ನೀಡಿದರು. ಸ್ಥಳದಲ್ಲೇ ಇದ್ದ ನಗರಸಭೆ ಪೌರಾಯುಕ್ತ ಶ್ರೀನಿವಾಸ್ ಅವರನ್ನು ಕರೆಸಿ ತರಾಟೆ ತೆಗೆದುಕೊಂಡರು.

ನಗರದಲ್ಲಿರುವ ಸಾರ್ವಜನಿಕ ಆಸ್ಪತ್ರೆಗೂ ಭೇಟಿ ನೀಡಿದ ಲೋಕಾಯುಕ್ತರು, ಅಲ್ಲಿನ ವೈದ್ಯರು ಇರದೆ, ಶುಶ್ರೂಷಕರು ಮಾತ್ರ ಇರುವುದನ್ನು ಕಂಡು ಗರಂ ಆದರು. ಇದಕ್ಕೂ ಮುನ್ನ ಬೆಳಗ್ಗೆ ನಗರದ ವಿವಿಧ ಭಾಗಗಳಲ್ಲಿ ಸಂಚರಿಸಿದ ನ್ಯಾಯಮೂರ್ತಿಗಳು, ಕಸದ ರಾಶಿ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗದುಕೊಂಡರು. ಜಿಲ್ಲಾಸ್ಪತ್ರೆ ಹಾಗೂ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿ ಕಲುಷಿತ ನೀರು ಕುಡಿದು ಅಸ್ವಸ್ಥರಾದವರ ಆರೋಗ್ಯ ವಿಚಾರಿಸಿದರು.












Click it and Unblock the Notifications