ವದ್ದೀಕೆರೆ ಕಾಲಭೈರವೇಶ್ವರ ಯಾನೆ ಸಿದ್ದೇಶ್ವರಸ್ವಾಮಿ ಜಾತ್ರೆ ರದ್ದು
ಚಿತ್ರದುರ್ಗ, ಏಪ್ರಿಲ್ 21: ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ಧಾರ್ಮಿಕ ಹಾಗೂ ಇತಿಹಾಸ ಪ್ರಸಿದ್ಧ ಕ್ಷೇತ್ರ ವದ್ದೀಕೆರೆ ಸಿದ್ದೇಶ್ವರನ ಜಾತ್ರೆಯನ್ನು ತಾಲ್ಲೂಕು ಆಡಳಿತ ರದ್ದು ಮಾಡಿ ಆದೇಶ ಹೊರಡಿಸಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಜ್ಯ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಬೆಂಗಳೂರು ಇವರ ಆದೇಶದಂತೆ ಧಾರ್ಮಿಕ ಆಚರಣೆಗಳನ್ನು ನಿಷೇಧಿಸಲಾಗಿದೆ. ರಾಜ್ಯ ಮತ್ತು ಜಿಲ್ಲೆಯಲ್ಲಿ ಈಗಿನ ಸನ್ನಿವೇಶದಲ್ಲಿ ಕೋವಿಡ್ -19 ರೂಪಾಂತರ ಕೊರೊನಾ ವೈರಸ್ ಎರಡನೇ ಅಲೆ ಹಿರಿಯೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ದಿನೇ ದಿನೇ ವ್ಯಾಪಕವಾಗಿ ಹೆಚ್ಚುತ್ತಿದ್ದು, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಏ.26 ರಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯಬೇಕಿದ್ದ ಜಾತ್ರೆಯನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ.

ಬೇರೆ ಬೇರೆ ಊರು, ಜಿಲ್ಲೆ, ರಾಜ್ಯಗಳಿಂದ ಭಕ್ತಾದಿಗಳು ದೇವಸ್ಥಾನಕ್ಕೆ ಬರಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಸಾರ್ವಜನಿಕರು, ಜಾತ್ರೆಗೆ ಬರದೇ ತಮ್ಮ ತಮ್ಮ ಭಕ್ತಿಯನ್ನು ಮನೆಯಲ್ಲಿ ಪೂಜೆ ಮಾಡಿ ಪ್ರಾರ್ಥನೆ ಮಾಡಿಕೊಳ್ಳುವುದರ ಮೂಲಕ ದೇವರ ಆಶೀರ್ವಾದ ಪಡೆದುಕೊಳ್ಳಲು ತಿಳಿಸಿದೆ.
ರಾಜ್ಯ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಹರಡುತ್ತಿರುವ ಕೊರೊನಾ ವೈರಸ್ ಸೋಂಕು ಅದಷ್ಟು ಶೀಘ್ರವಾಗಿ ಮುಕ್ತವಾಗಲೆಂದು ಆ ದೇವರಲ್ಲಿ ಪ್ರಾರ್ಥಿಸುತ್ತಾ, ತಾವೆಲ್ಲರೂ ತಾಲ್ಲೂಕು ಆಡಳಿತಕ್ಕೆ ಸಂಪೂರ್ಣ ಸಹಕಾರ ನೀಡಲು ಕೋರಿದೆ.

ವಿಶೇಷ ಸೂಚನೆ
ಭಕ್ತಾಧಿಗಳು ಹಾಗೂ ಸಾರ್ವಜನಿಕರು ಸದರಿ ಆದೇಶವನ್ನು ಮೀರಿ ಜಾತ್ರೆಗೆ ಬರಲು ಪ್ರಯತ್ನ ಮಾಡಿದ್ದಲ್ಲಿ, ಪೊಲೀಸ್ ಸಿಬ್ಬಂದಿಗಳು
ದೇವಸ್ಥಾನಕ್ಕೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ಕಣ್ಣು ತಪ್ಪಿಸಿ ದೇವಸ್ಥಾನದೊಳಗೆ ಪ್ರವೇಶಿಸಿದರೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.












Click it and Unblock the Notifications