ಕೋವಿಡ್-19 : ಪಾನ್ ಮಸಾಲ, ತಂಬಾಕು ಉತ್ಪನ್ನಗಳ ಮಾರಾಟ,ನಿಷೇಧ
ಚಿತ್ರದುರ್ಗ, ಮೇ10: ಕೋವಿಡ್-19 ವೈರಸ್ನಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಪಾನ್ಮಾಸಾಲ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ತಂಬಾಕು ಉತ್ಪನ್ನಗಳಾದ ಜರ್ದಾ, ಖೈನಿ, ಪಾನ್ಮಸಾಲ ಇತ್ಯಾದಿ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದು. ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೋವಿಡ್-19 ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು.
ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರ ಭಾಗಗಳಿಗೂ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು.
ಕೋವಿಡ್-19 ಸೋಂಕಿತರು ಜಗಿಯುವ ಪಾನ್ ಮಸಾಲ, ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಬಳಸಿ ಉಗುಳುವುದರಿಂದ ಒಬ್ಬರಿಂದ ಇನ್ನೋಬ್ಬರಿಗೆ ಕೋವಿಡ್-19 ವೈರಸ್ ಹರಡುವ ಭೀತಿ ಇರುತ್ತದೆ. ಆದ್ದರಿಂದ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್-19 ಹತೋಟಿಗೆ ಬರುವವರೆಗೂ, ಮುಂದಿನ ಆದೇಶದವರೆಗೂ ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಚಿತ್ರದುರ್ಗ ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ.
Recommended Video
ಒಂದು ವೇಳೆ ಉಲ್ಲಂಘನೆಯಾದಲ್ಲಿ ಸಾಂಕ್ರಾಮಿಕ ರೋಗಗಳ ಕಾಯಿದೆ-1897, ವಿಪತ್ತು ನಿರ್ವಹಣಾ ಕಾಯಿದೆ-2005, ಐಪಿಸಿ-1860, ಸಿಆರ್ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.