ಚಿತ್ರದುರ್ಗ : ವಲಸಿಗರ ವಿರುದ್ಧ ದಲಿತ ಸಂಘಟನೆಗಳ ಆಕ್ರೋಶ
ಚಿತ್ರದುರ್ಗ, ಫೆಬ್ರವರಿ 20 : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಲಾಗಿದೆ. ವಲಸಿಗರಿಗೆ ಟಿಕೆಟ್ ನೀಡುವುದರಿಂದ ಕ್ಷೇತ್ರದ ಅಭಿವೃದ್ಧಿಯಾಗುತ್ತಿಲ್ಲ ಎಂದು ಆರೋಪಿಸಲಾಗಿದೆ.
ಮಾದಿಗ ಯುವ ಸೇನೆ ಮತ್ತು ಇತರ ದಲಿತ ಸಂಘಟನೆಗಳು ಮಂಗಳವಾರ ಚಿತ್ರದುರ್ಗದಲ್ಲಿ ಸಭೆ ನಡೆಸಿದವು. ಸ್ಥಳೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವಂತೆ ರಾಜಕೀಯ ಪಕ್ಷಗಳನ್ನು ಒತ್ತಾಯಿಸಲು ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.
ಪ್ರತಿ ಬಾರಿಯ ಚುನಾವಣೆಯಲ್ಲಿಯೂ ಹೊರಗಿನವರಿಗೆ ಟಿಕೆಟ್ ನೀಡಲಾಗುತ್ತಿದೆ. ಇದರಿಂದಾಗಿ ಚಿತ್ರದುರ್ಗ ಕ್ಷೇತ್ರದ ಅಭಿವೃದ್ಧಿಯಾಗುತ್ತಿಲ್ಲ ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಮಾದಿಗ ಮಹಾಸಭಾದ ರಾಜ್ಯಾಧ್ಯಕ್ಷ ಗಂಗಾಧರಯ್ಯ ಅವರು ಮಾತನಾಡಿ, 'ಹಿಂದುಳಿದ ವರ್ಗಗಳನ್ನು ರಾಜಕೀಯ ಪಕ್ಷಗಳು ವೋಟ್ ಬ್ಯಾಂಕ್ನಂತೆ ಬಳಸಿಕೊಳ್ಳುತ್ತಿವೆ. ಹೊರಗಿನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತವೆ' ಎಂದು ಆರೋಪಿಸಿದರು.
ಈಗ ಸರಿಯಾದ ಸಮಯ ಬಂದಿದೆ. ಇದೇ ಜಿಲ್ಲೆಯ ಯುವ ನಾಯಕನಿಗೆ ಟಿಕೆಟ್ ನೀಡುವಂತೆ ಎಲ್ಲರೂ ಒತ್ತಾಯಿಸೋಣ. ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುವ, ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚಿಂತಿಸುವ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದು ಸಭೆಯಲ್ಲಿ ಚರ್ಚಿಸಲಾಯಿತು.
'ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ವಲಸಿಗ ಅಭ್ಯರ್ಥಿಯನ್ನು ಕಣಕ್ಕಿಳಿಸಿತು. ಈ ಬಾರಿ ಯಾವುದೇ ಪಕ್ಷದಿಂದ ವಲಸಿಗ ಅಭ್ಯರ್ಥಿ ಕಣಕ್ಕಿಳಿಯದಂತೆ ನೋಡಿಕೊಳ್ಳಬೇಕು' ಎಂದು ದಲಿತ ನಾಯಕ ಮಹಾಲಿಂಗಪ್ಪ ಹೇಳಿದರು.
ದಲಿತ ಸಂಘಟನೆಗಳು ಸಭೆಯ ಬಳಿಕ ಬಿಜೆಪಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರಿಗೆ ಮನವಿಯನ್ನು ಸಲ್ಲಿಸಿದರು. ನಮ್ಮ ಆಗ್ರಹವನ್ನು ಪಕ್ಷದ ನಾಯಕರಿಗೆ ತಿಳಿಸುವಂತೆ ಮನವಿ ಮಾಡಿದರು.












Click it and Unblock the Notifications