ಚಿತ್ರದುರ್ಗ ಕಿರು ಮೃಗಾಲಯಕ್ಕೆ ಒಂದು ವಾರ ರಜೆ ಘೋಷಣೆ
ಚಿತ್ರದುರ್ಗ, ಮಾರ್ಚ್ 15: ಕೋಟೆನಾಡು ಚಿತ್ರದುರ್ಗದಲ್ಲಿ ಕೊರೊನಾ ವೈರಸ್ ಸೋಂಕು ತಗುಲದಂತೆ ಜಿಲ್ಲಾದ್ಯಂತ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದ್ದು, ಚಿತ್ರದುರ್ಗ ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೂ ಕೊರೊನಾ ಭೀತಿ ಎದುರಾಗಿದ್ದು, ಇಂದಿನಿಂದ ಏಳು ದಿನಗಳ ಕಾಲ ಮೃಗಾಲಯಕ್ಕೆ ರಜೆ ಘೋಷಿಸಲಾಗಿದೆ.
ಕೊರೊನಾ ವೈರಸ್ ಕುರಿತ ಅರಿವು ಮೂಡಿಸಲು ಆರೋಗ್ಯ ಇಲಾಖೆ ಸಜ್ಜಾಗಿದ್ದು, ಚಿತ್ರದುರ್ಗದ ಐತಿಹಾಸಿಕ ಕಲ್ಲಿನ ಕೋಟೆ, ಚಂದ್ರವಳ್ಳಿ, ಮುರುಘಾ ಮಠ, ಹಿರಿಯೂರು ತಾಲೂಕಿನ ವಿವಿ ಸಾಗರ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಲ್ಲಿ ತರಬೇತಿ ಪಡೆದ ಆರೋಗ್ಯ ಇಲಾಖೆ ಸಿಬ್ಬಂದಿಗಳ ತಂಡ ಅಲರ್ಟ್ ಆಗಿದೆ.
ಜಿಲ್ಲಾಸ್ಪತ್ರೆ, ಬಸವೇಶ್ವರ ಮೆಡಿಕಲ್ ಕಾಲೇಜು ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಐಸೋಲೇಷನ್ ವಾರ್ಡ್ ಗಳನ್ನು ತೆರೆಯಲಾಗಿದ್ದು, ಯಾರಿಗಾದರೂ ಕೊರೊನಾ ವೈರಸ್ ಸೋಂಕು ತಗಲಿರುವುದು ಕಂಡು ಬಂದರೆ ತಕ್ಷಣ ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಈವರೆಗೆ ಜಿಲ್ಲೆಯಲ್ಲಿ ಯಾವುದೇ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ, ಚಿತ್ರದುರ್ಗ ಜಿಲ್ಲೆಯಲ್ಲಿ ಉಷ್ಣಾಂಶ 38° ಸೆಲ್ಸಿಯಸ್ ಇರುವುದರಿಂದ ಈ ಭಾಗದಲ್ಲಿ ಕೊರೊನಾ ವೈರಸ್ ಸೋಂಕು ಹರಡಲು ಸಾಧ್ಯವಿಲ್ಲ. ನೆಗಡಿ, ಕೆಮ್ಮು, ಜ್ವರ ಬಂದ ಮಾತ್ರಕ್ಕೆ ಅದು ಕೊರೊನಾ ಸೋಂಕಾಗಿರುವುದಿಲ್ಲ, ಹೀಗಾಗಿ ಜಿಲ್ಲೆಯ ಜನ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಾಲಾಕ್ಷ ಹೇಳಿಕೆ ನೀಡಿದ್ದಾರೆ.












Click it and Unblock the Notifications