ಹಿರಿಯೂರು: ಕುಡಿಯುವ ನೀರಿಗಾಗಿ ಪಂಚಾಯಿತಿಗೆ ಬೀಗ ಜಡಿದ ದಿಂಡವಾರ ಗ್ರಾಮಸ್ಥರು-ಮುಂದಾಗಿದ್ದೇನು?
ಹಿರಿಯೂರು, ಫೆಬ್ರವರಿ, 26: ಬೇಸಿಗೆ ಆರಂಭವಾಗಿದ್ದು ತಾಲ್ಲೂಕಿನಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇತ್ತ ದಿಂಡವಾರ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದ್ದು, ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಬೀಗ ಜಡಿದು, ಮುಂಭಾಗದಲ್ಲಿ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು.
ಬೇಸಿಗೆ ಹಿನ್ನೆಲೆ ಗ್ರಾಮದಲ್ಲಿ ಕುಡಿಯುವ ನೀರು ಸಮಸ್ಯೆ ಉಲ್ಬಣಿಸಿದೆ. ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. ದಿಂಡವಾರ ಗ್ರಾಮದಲ್ಲಿ ಸುಮಾರು 10ರಿಂದ 15 ಕುಡಿಯುವ ನೀರಿನ ಬೋರ್ವೆಲ್ಗಳಿದ್ದು, ಯಾವುದರಲ್ಲೂ ನೀರು ಬರುತ್ತಿಲ್ಲ.

ಕಳೆದ ಒಂದು ತಿಂಗಳಿನಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಗಮನಕ್ಕೆ ತಂದರೂ ಪ್ರಯೋಜನ ಆಗಲಿಲ್ಲ. ಈ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಕೇಳಿಕೊಂಡರೆ ಪಂಚಾಯಿತಿ ಅಧ್ಯಕ್ಷ ಸ್ಪಂದಿಸುತ್ತಿಲ್ಲವಂತೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಸಹಾಯಕ ಇಂಜಿನಿಯರ್ ಭಾಷಾ ಭೇಟಿ ನೀಡಿ, ಟ್ಯಾಂಕರ್ ಮೂಲಕ ನೀರು ಪೂರೈಸಲಾಗುವುದು ಎಂದು ಪ್ರತಿಭಟನಾಕಾರರಿಗೆ ಭರವಸೆ ನೀಡಿದಾಗ ಪ್ರತಿಭಟನೆ ಹಿಂಪಡೆಯಲಾಯಿತು.
ಈ ಸಂದರ್ಭದಲ್ಲಿ ಚಂದ್ರಗಿರಿ , ವಿರುಪಾಕ್ಷ, ಸಣ್ಣ ತಿಮ್ಮಣ್ಣ, ಸಿದ್ದಪ್ಪ, ನಿಂಗಪ್ಪ, ಭಾಗ್ಯಮ್ಮ, ಪಾಂಡಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
19 ಗ್ರಾಮಗಳಲ್ಲಿ ಅಂತರ್ಜಲ ಕುಸಿತ: ಈ ವರ್ಷ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ಆಗಸ್ಟ್ ತಿಂಗಳಲ್ಲಿ ಶೇಕಡಾ 90ರಷ್ಟು ಮಳೆ ಕೊರತೆ ಎದುರಿಸಲಾಗಿದೆ. ಇದರಿಂದ ಅಂತರ್ಜಲ ಮಟ್ಟ ಗಣನೀಯವಾಗಿ ಇಳಿಕೆಯಾಗಿದ್ದು, ಕೊಳವೆಬಾವಿ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದ 19 ಗ್ರಾಮಗಳಲ್ಲಿ ಅಂತರ್ಜಲ ಕುಸಿತದಿಂದ ಖಾಸಗಿ ಬೋರ್ವೆಲ್ ಬಾಡಿಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತೀವ್ರ ಬಿಸಿಲು ಇರುವುದರಿಂದ ಮುಂದೆ ಸಮಸ್ಯೆಯಾಗಲಿರುವ 126 ಗ್ರಾಮಗಳ ಪಟ್ಟಿಯನ್ನು ಸಿದ್ದಪಡಿಸಿಕೊಂಡಿದ್ದು, ಇಲ್ಲಿ ಖಾಸಗಿ ಕೊಳವೆಬಾವಿ ಗುರುತಿಸಿಟ್ಟುಕೊಳ್ಳಲಾಗಿದೆ. ಅವುಗಳು ಲಭ್ಯವಾಗದಲಿದ್ದಲ್ಲಿ ಸಮಸ್ಯೆಯಾದ 24 ಗಂಟೆಯೊಳಗೆ ಟ್ಯಾಂಕರ್ಗಳ ಮೂಲಕ ನೀರು ಒದಗಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಪೂರೈಕೆಯಾಗುತ್ತಿರುವ ಗ್ರಾಮಗಳಿಗೆ ನೀರಿನ ಸಮಸ್ಯೆ ಇರುವುದಿಲ್ಲ. ಭದ್ರಾ ಜಲಾಶಯದ ಮೂಲಕ ತುಂಗಭದ್ರಾ ನದಿಗೆ ಹಾಗೂ ಕಾಲುವೆಗಳಿಗೆ ನೀರು ಬಿಡಿಸಲಾಗಿದೆ. ಶಾಂತಿಸಾಗರದಿಂದ ಹಲವು ಗ್ರಾಮಗಳಿಗೆ ನೀರು ಪೂರೈಕೆಯಾಗುತ್ತಿದ್ದು, ಕಾಲುವೆ ಮೂಲಕ ಶಾಂತಿಸಾಗರಕ್ಕೆ ನೀರು ಬಿಡಿಸಲಾಗಿದೆ ಎಂದರು.
ಕಾಲುವೆಯ ಕೊನೆ ಭಾಗದ ರೈತರಿಗೂ ನೀರು ತಲುಪಿಸುವ ಉದ್ದೇಶದಿಂದ ನಾಲೆಗೆ ಅಕ್ರಮವಾಗಿ ಅಳವಡಿಸಲಾಗಿದ್ದ ಪಂಪ್ಸೆಟ್ಗಳ ತೆರವಿಗೆ ತಂಡಗಳನ್ನು ರಚಿಸಿ ಕ್ರಮ ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ಕಾನೂನಾತ್ಮಕ ಸಮಸ್ಯೆ ಎದುರಾಗುತ್ತದೆಯೋ ಅಂತಹ ಭಾಗದಲ್ಲಿ 144 ಸೆಕ್ಷನ್ ಜಾರಿಗೊಳಿಸಲು ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಕೊಳವೆಬಾವಿ ಕೊರೆಸಲು ಅನುಮತಿ ಬೇಕು: ಅಂತರ್ಜಲ ಮಟ್ಟ ಕಡಿಮೆಯಾಗಿದ್ದರಿಂದ ಕೊಳವೆಬಾವಿ ಕೊರೆಯಲು ನಿರ್ಬಂಧವಿದೆ. ಕೊಳವೆಬಾವಿ ಕೊರೆಯಲು ರಿಗ್ ಮಾಲಿಕರು ನಮೂನೆ-7ರಲ್ಲಿ ಅನುಮತಿ ಪಡೆಯಬೇಕಾಗಿರುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಮಾತನಾಡಿ, ಬೇಸಿಗೆ ಎದುರಾಗಿದ್ದು, ಈಗಾಗಲೇ 19 ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಮಸ್ಯೆಯಾಗಬಹುದಾದ 18 ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ ಮೂಲಕ ನೀರು ಪೂರೈಕೆ ಮಾಡಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.












Click it and Unblock the Notifications