ಕೋವಿಡ್ ನಿರ್ವಹಣೆಯಲ್ಲಿ ಚಿತ್ರದುರ್ಗ ಜಿಲ್ಲಾಡಳಿತ ವಿಫಲ
ಚಿತ್ರದುರ್ಗ, ಮೇ 21; "ಚಿತ್ರದುರ್ಗದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲಾಡಳಿತ ಸಂಪೂರ್ಣವಾಗಿ ವಿಫಲವಾಗಿವೆ" ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಕಳವಳ ವ್ಯಕ್ತಪಡಿಸಿದ್ದಾರೆ.
ಡಾ. ಕೆ. ಸುಧಾಕರ್ ಗುರುವಾರ ಚಿತ್ರದುರ್ಗ ನಗರದ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಬಳಿಕ ಅಧಿಕಾರಿಗಳ ಸಭೆಯಲ್ಲಿ ಸಚಿವರು ಪಾಲ್ಗೊಂಡರು. ಈ ಸಮಯದಲ್ಲಿ ಜಿಲ್ಲಾಡಳಿತ ಕಾರ್ಯ ವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ವಿರುದ್ದ ಆರೋಗ್ಯ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. "ಜಿಲ್ಲಾಡಳಿತ ಸರಿಯಾಗಿ ಕೋವಿಡ್ ಪರಿಸ್ಥಿತಿ ನಿಭಾಯಿಸುತ್ತಿಲ್ಲ. ನಾನು ನೇರವಾಗಿ ಹೇಳುತ್ತೇನೆ, ಚಿತ್ರದುರ್ಗದಲ್ಲಿ ಬಹಳ ಕಷ್ಟವಾಗುತ್ತಿದೆ" ಎಂದು ಸಚಿವರು ಹೇಳಿದರು.
"ನೀವು ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ನೋಡಿ ಕಲಿಯಿರಿ. ಲಾಕ್ ಡೌನ್ಗಿಂತ ಮುನ್ನ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಪ್ರಕರಣ ಇದ್ದವು. ನೀವು ಆ ಜಿಲ್ಲೆಗಳನ್ನು ನೋಡಿ ಫಾಲೋ ಅಪ್ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬಹಳ ಕಷ್ಟವಾಗುತ್ತದೆ" ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಚಿತ್ರದುರ್ಗ ಡಿಎಚ್ಓ ಡಾ. ಪಾಲಾಕ್ಷ, ಡಿಎಸ್ ಡಾ. ಬಸವರಾಜ್ ಕಾರ್ಯ ವೈಖರಿ ಕುರಿತು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದು, ಡಿಎಚ್ಓ, ಜಿಲ್ಲಾ ಸರ್ಜನ್ ನೀವು ಸರಿಯಾಗಿ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ.
"ಎಲ್ಲರೂ ಸೇರಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಇಲ್ಲವಾದರೆ ಕೋವಿಡ್ ನಿಯಂತ್ರಿಸುವುದು ಕಷ್ಟ ಸಾಧ್ಯವಾಗಲಿದೆ. ನಿಮ್ಮ ಕೆಳ ಹಂತದ ಅಧಿಕಾರಿಗಳಿಗೆ ನೀವು ಮಾರ್ಗದರ್ಶನ ಮಾಡಬೇಕು. ತಳಮಟ್ಟದಲ್ಲಿ ಕೆಲಸ ಮಾಡುವವರಿಗೆ ಸಲಹೆ ನೀಡಬೇಕು" ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
Recommended Video
ಮೇ 20ರ ವರದಿಯಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 568 ಹೊಸ ಪ್ರಕರಣ ದಾಖಲಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 22652. ಸಕ್ರಿಯ ಪ್ರಕರಣಗಳು 4249.