ಚಿತ್ರದುರ್ಗದಲ್ಲಿ ಜಿಲ್ಲಾಡಳಿತದ ವಿರುದ್ಧ ಗರಂ ಆದ ಮಾಜಿ ಸಚಿವ ಆಂಜನೇಯ
ಚಿತ್ರದುರ್ಗ, ಜೂನ್ 22: ಬಿಜೆಪಿ ಸರ್ಕಾರ ಹಾಗೂ ಜಿಲ್ಲಾಡಳಿತ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂಬ ರೀತಿ ವರ್ತಿಸುತ್ತಿದೆ ಎಂದು ಮಾಜಿ ಸಚಿವ ಎಚ್. ಆಂಜನೇಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
"ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘನೆ ಮಾಡಿದ್ದರು. ಅವರ ವಿರುದ್ಧ ಮೊದಲು ಪ್ರಕರಣ ದಾಖಲಿಸಿ" ಎಂದು ಜಿಲ್ಲಾಧಿಕಾರಿಗೆ ಮಾಜಿ ಸಚಿವ ಆಂಜನೇಯ ತರಾಟೆ ತೆಗೆದುಕೊಂಡರು.
ಚಿತ್ರದುರ್ಗ: ''ಸಚಿವರಿಗೊಂದು ನ್ಯಾಯ, ನಮಗೊಂದು ನ್ಯಾಯನಾ?''
ಮೇ 30ರಂದು ಹೊಸದುರ್ಗದ ಮನೆ ಮುಂದೆ ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಮಗನ ಮದುವೆ ಮಾಡಿದ್ದರು. ಅಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಮದುವೆ ಮಾಡಿದ್ದರು. ಆದರೆ ಪೊಲೀಸರು ಹಾಗೂ ಜಿಲ್ಲಾಡಳಿತ ಪ್ರಕರಣ ದಾಖಲಿಸಿದೆ. ಕೆಲವು ದಿನಗಳ ಹಿಂದೆ ಚಳ್ಳಕೆರೆ ತಾಲೂಕಿನ ಪರುಶುರಾಂಪುರದಲ್ಲಿ ಬಾಗಿನ ಅರ್ಪಿಸುವ ವೇಳೆ ಸಾವಿರಾರು ಜನರನ್ನು ಸೇರಿಸಿಕೊಂಡು ದೊಡ್ಡ ಅದ್ಧೂರಿ ಕಾರ್ಯಕ್ರಮ ಮಾಡಿದ್ದಾರೆ. ಅದು ನಿಮ್ಮ ಕಣ್ಣಿಗೆ ಕಾಣಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಆಗ ಅವರ ಮೇಲೆ ಪ್ರಕರಣ ದಾಖಲಿಸಲಿಲ್ಲ. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವ ರೀತಿ ಮಾಡಿದ್ದೀರಿ. ಇದು ಸರಿಯೇ? ಎಂದು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
"ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಾ ಬಂದಿದೆ. ಹಾಗೆಯೇ ಚಿತ್ರದುರ್ಗದಲ್ಲಿಯೂ ಆಗಿದೆ. ಇವರು ಜನತಂತ್ರ ವ್ಯವಸ್ಥೆ ವಿರುದ್ಧ ನಡೆದುಕೊಳ್ಳುತ್ತಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಕುಮ್ಮಕ್ಕು ನೀಡುತ್ತಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಚೇರಿ ಎದುರು ಈ ಸಂಬಂಧ ಪ್ರತಿಭಟನೆ ನಡೆಸಿದ್ದು, ಶಾಸಕ ಟಿ. ರಘುಮೂರ್ತಿ, ಮಾಜಿ ಶಾಸಕರಾದ ಡಿ.ಸುಧಾಕರ್, ಬಿ.ಜಿ ಗೋವಿಂದಪ್ಪ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಹಾಜರಿದ್ದರು.