ಈ ಎರಡು ಕ್ಷೇತ್ರಗಳಲ್ಲಿ ಕಾಡುಗೊಲ್ಲರ ಮತ ಪಡೆಯಲು ಕೈ, ಕಮಲ ಪ್ಲಾನ್ ಏನು?-ಇಲ್ಲಿದೆ ಮಾಹಿತಿ
ಚಿತ್ರದುರ್ಗ, ಏಪ್ರಿಲ್, 24: ಲೋಕಸಭಾ ಚುನಾವಣೆಯ ಮತದಾನಕ್ಕೆ ಒಂದೇ ಒಂದು ದಿನ ಬಾಕಿಯಿದ್ದು, ಇತ್ತ ಚಿತ್ರದುರ್ಗ ಮತ್ತು ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಮತ ಸೆಳೆಯಲು ಮೀಸಲಾತಿ ಅಸ್ತ್ರವನ್ನು ಪ್ರಯೋಗಿಸುತ್ತಿದ್ದಾರೆ ಎನ್ನುವ ಕೂಗುಗುಗಳು ಕೇಳಿಬರುತ್ತಿವೆ.
ಹೌದು ಚಿತ್ರದುರ್ಗ ಮತ್ತು ತುಮಕೂರು ಎರಡು ಜಿಲ್ಲೆಗಳಲ್ಲಿ ಕಾಡುಗೊಲ್ಲ ಸಮುದಾಯ ನಿರ್ಣಾಯಕ ಪಾತ್ರ ವಹಿಸುತ್ತದೆ. ಹಾಗಾಗಿ ಕಾಂಗ್ರೆಸ್ ಮತ್ತು ಮೈತ್ರಿ ಪಕ್ಷಗಳು ಕಾಡುಗೊಲ್ಲ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿದ್ದಾರೆ. ಅಂದ ಹಾಗೆ ಪಕ್ಷ ಅಧಿಕಾರಕ್ಕೆ ಬಂದರೆ, ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗುವುದು ಎಂದು ಮೀಸಲಾತಿ ಅಸ್ತ್ರ ಉಪಯೋಗಿಸಿದ್ದಾರೆ. ಮತ ಪಡೆಯಲು ಮುಂದಾಗಿದ್ದು, ಸಮುದಾಯವನ್ನು ಕೇವಲ ಮತಬ್ಯಾಂಕ್ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆಂದು ಪಕ್ಷಗಳ ವಿರುದ್ಧ ಸಮುದಾಯದ ಮುಖಂಡರು ಕಿಡಿಕಾರಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು ಮೂರು ಲಕ್ಷಕ್ಕೂ ಅಧಿಕ ಕಾಡುಗೊಲ್ಲ ಮತಗಳಿದ್ದು, ಅಭ್ಯರ್ಥಿ ಗೆಲುವಿಗೆ ಇವುಗಳು ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಅಭ್ಯರ್ಥಿ ಗೆಲ್ಲಲ್ಲಿ ಮೀಸಲಾತಿ ಅಸ್ತ್ರದ ಬಾಣ ಬಿಟ್ಟಿದ್ದಾರೆ.
ಇದಕ್ಕೆ ಪುಷ್ಟಿ ನೀಡುವಂತೆ ಮಂಗಳವಾರವಷ್ಟೇ ಚಿತ್ರದುರ್ಗ ನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ನ್ಯಾಯ ಸಂಕಲ್ಪ ರ್ಯಾಲಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಪ್ರಿಯಾಂಕ ಗಾಂಧಿ ಭರವಸೆ ವ್ಯಕ್ತಪಡಿಸಿದರು. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕಾಡುಗೊಲ್ಲ ಜನಾಂಗಕ್ಕೆ ಎಸ್ಟಿ ಸದಸ್ಯತ್ವ ನೀಡಲು ಭರವಸೆ ನೀಡಿದರು.
ವಿಪರ್ಯಾಸವೆಂದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಿಲ್ಲ. ಜೊತೆಗೆ ಕಾಡುಗೊಲ್ಲರನ್ನು ಅಲೆಮಾರಿ ಹಾಗೂ ಅರೆ ಅಲೆಮಾರಿ ಪಟ್ಟಿಗೆ ಸೇರಿಸಲಿಲ್ಲ, ಬಿಸಿಎಂ ಎ ಪಟ್ಟಿಗೆ ಸೇರಿಸಲಿಲ್ಲ. ಜೊತೆಗೆ ಕಾಡುಗೊಲ್ಲರನ್ನು ಕೇಂದ್ರ ಓಬಿಸಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಿಲ್ಲ. ಮೊದಲು ರಾಜ್ಯ ಕಾಂಗ್ರೆಸ್ ಈ ನಾಲ್ಕು ಅಂಶಗಳನ್ನು ಪೂರೈಸಬೇಕು. ಇದನ್ನು ಬಿಟ್ಟು ನಾನು ಸಿಎಂ ಆಗಿದ್ದಾಗ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕುಲ ಶಾಸ್ತ್ರೀಯ ಅಧ್ಯಯನ ಮಾಡಿಸಲಾಯಿತು.
ಕೇಂದ್ರಕ್ಕೆ ಪ್ರಸ್ತಾವನೆ ಮಾಡಿ ಶಿಪಾರಸ್ಸು ಮಾಡಲಾಯಿತು ಎಂದು ಹೇಳಿದ್ದೆ ಹೇಳಿಕೊಂಡು ಬಂದಿದ್ದಾಯಷ್ಟೇ. ಇದನ್ನು ಬಿಟ್ಟರೆ, ಕೇಂದ್ರಕ್ಕೆ ನಿಯೋಗ ಕರೆದುಕೊಂಡು ಹೋಗಿ ಒತ್ತಡ ತರಲಿಲ್ಲ. ಅಥವಾ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಕಡೆಯಿಂದ ವಿಶೇಷ ಪ್ರಸ್ತಾಪ ಮಾಡಿಸಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಒಂದು ಪತ್ರವನ್ನು ಬರೆಯಲಿಲ್ಲ. ಇದೀಗ ಮತ ಸೆಳೆಯಲು ಎಸ್ಟಿ ಸದಸ್ಯತ್ವ ಕೊಡುತ್ತೇವೆ ಅಂತಾ ಕಾಂಗ್ರೆಸ್ ಮುಂದಾಗಿದೆ ಎಂದರು.
ಕಳೆದ ಆರೇಳು ತಿಂಗಳಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಕಾಡು ಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಶತಾಯಗತಾಯವಾಗಿ ಪ್ರಯತ್ನಿಸುತ್ತಿದ್ದಾರೆ. ಕಾಡುಗೊಲ್ಲರನ್ನು ಎಸ್ಟಿಗೆ ಸೇರಿಸಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಹಾಗೂ ಕೇಂದ್ರ ಬುಡಕಟ್ಟು ಸಚಿವ ಅರ್ಜುನ್ ಮುಂಡಾ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಉತ್ತರವೂ ಸಿಕ್ಕಿತು.
ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಎಳೆ ಎಳೆಯಾಗಿ ಬಿಡಿಸಿ ಭಾಷಣ ಮಾಡಿದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಸಚಿವ ಎ.ನಾರಾಯಣಸ್ವಾಮಿ ಕೂಡ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಪ್ರಯತ್ನ ನಡೆಸಿದರು. ಇನ್ನೇನು ಕಾಡುಗೊಲ್ಲ ಸಮುದಾಯ ಎಸ್ಟಿ ಸದಸ್ಯತ್ವ ಪಡೆಯಲಿದೆ ಎನ್ನುವಷ್ಟರಲ್ಲಿ ಕಾರಣಾಂತರಗಳಿಂದ ಸ್ಥಗಿತಗೊಂಡಿತು.
ಇನ್ನು ಕಾಲ ಮಿಂಚಿಲ್ಲ ಸಮಯ ಇದೆ. ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಮೀಸಲಾತಿ ಕೊಡಿಸುವ ಜವಾಬ್ದಾರಿ ನಮ್ಮದು ಎಂದು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಪುತ್ರ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಮುದಾಯಕ್ಕೆ ಜೀವ ತುಂಬುತ್ತಿದ್ದಾರೆ. ಇದರ ಜೊತೆಗೆ ಬಿಜೆಪಿಯ ಸಮುದಾಯದ ಮುಖಂಡರು ಎರಡು ಜಿಲ್ಲೆಗಳ ಮೈತ್ರಿ ಅಭ್ಯರ್ಥಿ ಗೆಲುವಿಗೆ ಮತ ನೀಡಿ, ನಮಗೆ ನ್ಯಾಯ ಸಿಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮತ್ತೊಂದು ಕಡೆ ಕಾಂಗ್ರೆಸ್ ಕಾಡುಗೊಲ್ಲ ಮುಖಂಡರು ಸುದ್ದಿಗೋಷ್ಠಿ ನಡೆಸಿ, ಮೀಸಲಾತಿ ನೀಡುವಲ್ಲಿ ಬಿಜೆಪಿ ವಿಫಲವಾಗಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಒಟ್ಟಾರೆಯಾಗಿ ಈಗಾಗಲೇ ಅನೇಕ ಮಾಧ್ಯಮಗಳ ಸರ್ವೇ ಪ್ರಕಾರ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ. ಈ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಗೋವಿಂದ ಕಾರಜೋಳ ಹಾಗೂ ತುಮಕೂರು ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಅವರನ್ನು ಗೆಲ್ಲಿಸಿದರೆ, ಕಾಡುಗೊಲ್ಲರನ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಎಲ್ಲಾ ಪ್ರಯತ್ನಗಳು ಸುಲಭವಾಗಲಿದೆ ಎಂದು ಬಿಜೆಪಿ ನಾಯಕರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
ಅದರಲ್ಲೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಗೆದ್ದರೆ, ಅನುಭವಿ ಹಾಗೂ ಹಿರಿಯ ಸ್ಥಾನದಲ್ಲಿ ಕೇಂದ್ರದಲ್ಲಿ ಮಂತ್ರಿಯಾಗುವ ಸಾಧ್ಯತೆ ಇದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸಾಲಿನಲ್ಲಿ ಕುರಲಿದ್ದಾರೆ. ಈ ನಿಟ್ಟಿನಲ್ಲಿ ಸಮುದಾಯದ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಕೆಲವು ಬಿಜೆಪಿ ಮುಖಂಡರ ಅಭಿಪ್ರಾಯವಾಗಿದೆ. ಒಟ್ಟಾರೆಯಾಗಿ ಎರಡು ಜಿಲ್ಲೆಗಳಲ್ಲಿ ಸಮುದಾಯದ ಮತಗಳು ನಿರ್ಣಾಯಕ ಪಾತ್ರ ವಹಿಸಲಿದ್ದು, ಸಮುದಾಯದ ಬೆಂಬಲ ಯಾರಿಗೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.












Click it and Unblock the Notifications