Get Updates
Get notified of breaking news, exclusive insights, and must-see stories!

Flower show 2024: ಫೆಬ್ರವರಿ 2ರಿಂದ ಚಿತ್ರದುರ್ಗದಲ್ಲಿ ಫಲಪುಷ್ಪ ಪ್ರದರ್ಶನ, ಈ ಬಾರಿಯ ವಿಶೇಷತೆ ಏನು?

ಚಿತ್ರದುರ್ಗ, ಜನವರಿ, 31: ನಗರದ ಜಿಲ್ಲಾ ತೋಟಗಾರಿಕೆ ಕಚೇರಿ ಆವರಣದಲ್ಲಿ ಫೆಬ್ರವರಿ 2ರಿಂದ 4ರವರೆಗೆ 31ನೇ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಭಾರತ ಸಂವಿಧಾನದ ಬಗ್ಗೆ ಕಲಾಕೃತಿ, ಚಂದ್ರಯಾನ-3, ಐತಿಹಾಸಿಕ ಚಿತ್ರದುರ್ಗ ಕೋಟೆಯಲ್ಲಿ ಮಳೆ ನೀರು ಕೊಯ್ಲು ಘಟಕಗಳು ಫಲಪುಷ್ಪ ಪ್ರದರ್ಶನದ ವಿಶೇಷ ಆಕರ್ಷಣೆಯಾಗಿರಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು.

ನಗರದ ಜಿಲ್ಲಾ ತೋಟಗಾರಿಕೆ ಕಚೇರಿಯಲ್ಲಿ ಬುಧವಾರ 31ನೇ ಫಲಪುಷ್ಪ ಪ್ರದರ್ಶನದ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

Flower show at Chitradurga from February 2, 2024 Know details

ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ ಇವರ ಸಂಯುಕ್ತಾಶ್ರಯದಲ್ಲಿ 31ನೇ ಫಲಪುಷ್ಪ ಪ್ರದರ್ಶನ ಆಯೋಜಿಸಿದ್ದು, ಫೆಬ್ರವರಿ 2ರಂದು ಸಂಜೆ 6ಕ್ಕೆ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಫಲಪುಷ್ಪ ಪ್ರದರ್ಶನ ಉದ್ಘಾಟನೆ ನೆರವೇರಿಸುವರು. ಫಲಪುಷ್ಪ ಪ್ರದರ್ಶನಕ್ಕೆ ಎಲ್ಲ ಸಾರ್ವಜನಿಕರಿಗೂ ಉಚಿತ ಪ್ರವೇಶವಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಫಲಪುಷ್ಪ ಪ್ರದರ್ಶನ ವೀಕ್ಷಿಸಬೇಕು ಎಂದು ಮನವಿ ಮಾಡಿದರು.

ಚಿತ್ರದುರ್ಗ ಜಿಲ್ಲಾ ಫಲಪುಷ್ಪ ಪ್ರದರ್ಶನವನ್ನು ಪ್ರತಿ ವರ್ಷವೂ ಆಯೋಜಿಸುತ್ತಿದ್ದು, ವಿವಿಧ ಜಾತಿಯ ಹೂಗಳು, ಹಣ್ಣುಗಳು, ತರಕಾರಿಗಳು, ಮತ್ತು ಹಲವು ವಿಶೇಷ ಬಗೆಯ ಅಲಂಕಾರಿಕಾ ಗಿಡಗಳನ್ನು ಬೆಳೆಸಿ ಪ್ರದರ್ಶಿಸಲಾಗುತ್ತಿದೆ.

ಫಲಪುಷ್ಪ ಪ್ರದರ್ಶನದಲ್ಲಿ ಹೂವಿನ ಗಿಡಗಳ ಬೃಹತ್ ಪ್ರದರ್ಶನ, ಇಕೆಬಾನ, ಕುಬ್ಜ ಮರ (ಬೊನ್ಸಾಯ್) ಗಿಡಗಳು, ತರಕಾರಿ ಕೆತ್ತನೆ, ಅಲಂಕಾರಿಕಾ ಗಿಡಗಳ ಜೋಡಣೆ ಹಾಗೂ ಜಿಲ್ಲೆಯ ರೈತರು ಬೆಳೆದಿರುವ ಹಣ್ಣು ಮತ್ತು ತರಕಾರಿಗಳ ಪ್ರದರ್ಶನ ಏರ್ಪಡಿಸಿ, ವಿವಿಧ ಸ್ಪರ್ಧೆಗಳನ್ನು ಸಹ ಹಮ್ಮಿಕೊಳ್ಳಲಾಗುವುದು. ಜೊತೆಗೆ ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳ ಕುರಿತು ಪ್ರದರ್ಶನ ಮಳಿಗೆ, ಸ್ತ್ರೀಶಕ್ತಿ ಸಂಘಗಳ ಸ್ಥಳೀಯ ಉತ್ಪನ್ನಗಳ ಮಾರಾಟಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದರು.

31ನೇ ಫಲಪುಷ್ಪ ಪ್ರದರ್ಶನದ ವಿಶೇಷ ಆಕರ್ಷಣೆಗಳು: ಭಾರತ ಸಂವಿಧಾನದ ಬಗ್ಗೆ ಕಲಾ ಕೃತಿ, ಚಂದ್ರಯಾನ-3, ಐತಿಹಾಸಿಕ ಚಿತ್ರದುರ್ಗ ಕೋಟೆಯಲ್ಲಿ ಮಳೆ ನೀರು ಕೊಯ್ಲು ಘಟಕಗಳು ಈ ಬಾರಿಯ ಫಲಪುಷ್ಪ ಪ್ರದರ್ಶನದ ವಿಶೇಷ ಆಕರ್ಷಣೆಗಳಾಗಿವೆ ಎಂದು ತಿಳಿಸಿದರು.

ಭಾರತದ ಸಂವಿಧಾನದ ಬಗ್ಗೆ ಕಲಾ ಕೃತಿ: ಸಂವಿಧಾನದ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಕರಡು ರಚನಾ ಸಮಿತಿ ಅಧ್ಯಕ್ಷರಾಗಿ ಸಂವಿಧಾನದ ಅಂತಿಮ ಪ್ರತಿಯನ್ನು ಸಾಂವಿಧಾನಿಕ ಸಭೆಯ ಅಧ್ಯಕ್ಷರಾದಂತಹ ಡಾ.ರಾಜೇಂದ್ರ ಪ್ರಸಾದ್ ಅವರಿಗೆ ದಿನಾಂಕ 25.11.1949ರಂದು ಸಲ್ಲಿಸಿದ್ದು, ಆ ಕ್ಷಣದ ಕಲಾಕೃತಿಯನ್ನು ರಚಿಸಿ ವಿವಿಧ ಹೂಗಳಿಂದ ಅಲಂಕರಿಸಲಾಗುವುದು ಎಂದರು.

ಕೋಟೆಯಲ್ಲಿನ ಮಳೆ ನೀರು ಕೊಯ್ಲು ಘಟಕಗಳು: ಐತಿಹಾಸಿಕ ಚಿತ್ರದುರ್ಗ ಕೋಟೆಯಲ್ಲಿ ಅಂದಿನ ಕಾಲದಲ್ಲಿ ಅತ್ಯುತ್ತಮ ಮಳೆ ನೀರು ಕೊಯ್ಲು ಮಾಡಿ ಜನ, ಜಾನುವಾರುಗಳಿಗೆ ಹಾಗೂ ಕೃಷಿಗೆ ಈ ನೀರನ್ನು ಬಳಸಲಾಗುತ್ತಿತ್ತು. ಪ್ರಸ್ತುತ ಮಳೆ ನೀರು ಕೊಯ್ಲು ಮಾಡುವುದು ಜಿಲ್ಲೆಯ ಕೃಷಿಗೆ ಅವಶ್ಯಕವಾಗಿರುತ್ತದೆ. ಆದ್ದಾರಿಂದ, ಸದರಿ ಗೋಪಾಲಸ್ವಾಮಿ ಹೊಂಡ, ಅಕ್ಕತಂಗಿ ಹೊಂಡ, ಸಿಹಿನೀರು ಹೊಂಡ ಹಾಗೂ ಸಂತೆಹೊಂಡಗಳು ಒಂದಕ್ಕೊಂದು ಸಂಪರ್ಕಿಸಿರುವ ಮಾದರಿಗಳನ್ನು ಪ್ರದರ್ಶಿಸಲಾಗುವುದು ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ ಕಲಾಕೃತಿ: ಜಲವೇ ಜೀವನ ಎಂಬುದನ್ನು ಅರಿತು ನಮ್ಮ ನಾಡಿನ ಬೆನ್ನೆಲುಬಾದ ಕೃಷಿಗೆ ಖುಷಿಯಿಂದ ನೀರುಣಿಸಬೇಕೆಂಬ ಕನಸಿನೊಂದಿಗೆ ಬರದ ನಾಡಾದ ಚಿತ್ರದುರ್ಗ ಜಿಲ್ಲೆಯಲ್ಲಿ 1907ರಲ್ಲಿ 'ವಾಣಿ ವಿಲಾಸ ಸಾಗರ' (ಮಾರಿ ಕಣಿವೆ) ಅಣೆಕಟ್ಟು ಕಟ್ಟಿ ಇಂದಿಗೂ ಜನರ ದಾಹವನ್ನು ತಣಿಸುತ್ತಿದೆ.

ಅಲ್ಕದೆ ಚಿತ್ರದುರ್ಗ ಚಿಕ್ಕಜಾಜೂರು ರೈಲ್ವೆ ಮಾರ್ಗ ಮತ್ತು ಚಿತ್ರದುರ್ಗದಿಂದ ಬೆಂಗಳೂರಿಗೆ 220 ಮೈಲಿ ರಸ್ತೆ ಮಾರ್ಗವನ್ನು ಕಲ್ಪಿಸಿ ಸಾರಿಗೆ ಸಂಪರ್ಕವನ್ನು ಸ್ಥಿರಗೊಳಿಸಿದ ಮಹಾಚೇತನ ಈ ಎಲ್ಲಾ ಕೊಡುಗೆಗಳಿಂದ ಚಿತ್ರದುರ್ಗದ ಜನತೆ ಒಡೆಯರನ್ನು ಸದಾಕಾಲ ಸ್ಮರಿಸುತ್ತಾ ಜಿಲ್ಲೆಯ ಜನತೆ ನಿಮಗೆ ಚಿರಋಣಿಯಾಗಿರುತ್ತವೆ ಎನ್ನುವ ಆಶಯದೊಂದಿಗೆ ನಾಲ್ವಡಿ ಕೃಷ್ಣರಾಜ ಒಡೆಯರ ಕೃತಿ ಪ್ರದರ್ಶಿಸಲಾಗುವುದು ಎಂದರು.

ವಿವಿಧ ಪುಷ್ಪ ಜೋಡಣೆಗಳಿಗೆ ಹಲವು ಬಗೆಯ ವಿಶೇಷ ಹೂಗಳನ್ನು ಬಳಸುತ್ತಿರುವುದರ ಜೊತೆಗೆ ಕುಂಡದಲ್ಲಿ ಬೆಳೆದ ಚಿತ್ತಾಕರ್ಷಕ ವರ್ಣಗಳಿಂದ ಕೂಡಿದ ಸುಮಾರು 50ಕ್ಕೂ ಹೆಚ್ಚು ಬಗೆಯ ವಿವಿಧ ಜಾತಿಯ ಹೂಗಳು ಗಮನ ಸೆಳೆಯಲಿವೆ.

ಆರ್ಕಿಡ್ಸ್, ಕಾರ್ನೇಶನ್, ಕಾಕ್ಸ್ ಕೂಂಬ್, ಸೆಲೋಶಿಯಾ, ಪ್ಲಾಕ್ಸ್, ಗಾಕ್ಸೀನಿಯ, ಕಲಂಚಾ, ಲಿಲ್ಲಿಸ್, ಇಂಪೇಷನ್ಸ್ (ಮಿಕ್ಸ್‍ಡ್), ಡೇಲಿಯಾ (ಡ್ವಾರ್ಫ್), ಸಾಲ್ವಿಯಾ (ಕೆಂಪು, ನೀಲಿ ಕೇಸರಿ, ಬಿಳಿ) ಚೆಂಡು ಹೂ, ಚಿಂತಾಮಣಿ ಚೆಂಡು ಹೂ, ಜಿನಿಯಾ, ಪೆಟೂನಿಯಾ, ಕಾಸ್‍ಮಾಸ್, ಬಾಲ್ಸಂ, ಜಿರೇನಿಯಂ, ಹಾಲಿಹಾಕ್, ಆಂಟಿರಿನಮ್, ಡಯಾಂತಸ್, ಕ್ಯಾಲೊಂಡೋಲಾ, ಸೇವಂತಿಗೆ, ಪೆಂಟಾಸ್, ಫ್ಯಾನ್ಸಿ, ಇಪೋರ್ಬಿಯ ಮಿಲ್ಲಿ, ಫಾಯಿನ್‍ಸಿಟಿಯಾ, ಬಿಗೋನಿಯಾ, ವಿಂಕಾ, ಆಂತೋರಿಯಂ ಇತ್ಯಾದಿ ವಿವಿಧ ಪುಷ್ಪ ಸಸಿಗಳು, ನೂರಕ್ಕೂ ಹೆಚ್ಚು ಬಗೆಯ ತಳಿಗಳು ಇರಲಿವೆ ಎಂದು ತಿಳಿಸಿದರು.

ಕನ್ನಡಕ್ಕೆ 9 ಜ್ಞಾನಪೀಠ ಪ್ರಶಸ್ತಿಗಳನ್ನು ತಂದುಕೊಟ್ಟು, ಕನ್ನಡ ಸಾರಸ್ವತಲೋಕವನ್ನು ಶ್ರೀಮಂತಗೊಳಿಸಿದ ಮಹಾನೀಯರ ಕಲಾಕೃತಿಗಳನ್ನು ಹಣ್ಣು ಮತ್ತು ತರಕಾರಿ ಕೆತ್ತನೆಯಲ್ಲಿ ಪ್ರದರ್ಶಿಸಲಾಗುವುದು. ತೆಂಗಿನ ಚಿಪ್ಪಿನಲ್ಲಿ ವಿವಿಧ ರೀತಿಯ ಕಲಾಕೃತಿಗಳನ್ನು ಕೆತ್ತೆನೆ ಮಾಡಿದ ಪ್ರದರ್ಶಿಕೆಗಳನ್ನು ಪ್ರದರ್ಶಿಸಿಲಾಗುವುದು.

ನೀರು ಹರಿಯುವಂತೆ ಇರುವ ಜಲಪಾತಗಳನ್ನು ಫಲಪುಷ್ಪ ಪ್ರದರ್ಶನದಲ್ಲಿ ಮಾದರಿ ಪ್ರದರ್ಶಿಸಲಾಗುವುದು. ಪ್ರದರ್ಶನದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಿಂದ ತಮ್ಮ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ ನೀಡುವುದರಿಂದ ಒಂದೇ ಸೂರಿನಡಿ ಎಲ್ಲಾ ಇಲಾಖೆಗಳಲ್ಲಿ ಸಿಗುವ ಸೌಲಭ್ಯಗಳ ಮಾಹಿತಿ ರೈತರಿಗೆ ಹಾಗೂ ಆಸಕ್ತ ಸಾರ್ವಜನಿಕರಿಗೆ ದೊರೆಯುತ್ತದೆ ಎಂದರು.

ಇನ್ನು ನಗರದ ಶಾಲಾ ಮಕ್ಕಳಿಗೆ ಜಾನಪದ ಹಾಗೂ ಭಾವಗೀತೆ ಸ್ಪರ್ಧೆ, ಚಿತ್ರಕಲಾ ಸ್ಟರ್ಧೆ, ಪ್ರಬಂಧ ಸ್ಪರ್ದೆ, ಹಣ್ಣು ಮತ್ತು ಹೂ ತರಕಾರಿಗಳನ್ನು ಬಳಸಿ ಪ್ಯಾನ್ಸಿ ಡ್ರೆಸ್ಸ್ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಚಿಕ್ಕ ಮಕ್ಕಳಿಗೆ ಹಣ್ಣು ಮತ್ತು ತರಕಾರಿಗಳ ಗುರುತಿಸುವ ಸ್ಪರ್ಧೆ, ತರಕಾರಿ ಕೆತ್ತನೆ, ಹೂ ಜೋಡಣೆ ಸ್ಪರ್ಧೆ, ಬೋನ್ಸಯ್ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ. ಈ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಆಕರ್ಷಕ ಬಹುಮಾನ, ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ನೀಡಿ ಪ್ರೋತ್ಸಾಹಿಸಲಾಗುವುದು ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+