ಚಿತ್ರದುರ್ಗ: SSLC ಪರೀಕ್ಷೆಯಲ್ಲಿ ನಕಲು ಮಾಡಿಸಿದ ನಾಲ್ವರು ಶಿಕ್ಷಕರು ಸಸ್ಪೆಂಡ್
ಚಿತ್ರದುರ್ಗ, ಮಾರ್ಚ್, 30: 2023-24ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಡೆದಿದ್ದು, ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ ನಾಲ್ವರು ಶಿಕ್ಷಕರನ್ನು ಅಮಾನತು ಮಾಡಿ ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ಆದೇಶಿಸಿದ್ದಾರೆ.
ಚಳ್ಳಕೆರೆ ತಾಲೂಕಿನ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ರೇವಣ್ಣ, ಗೋಸಿಕೆರೆಯ ರಾಧಾಕೃಷ್ಣ ಗ್ರಾಮಾಂತರ ಪ್ರೌಢಶಾಲೆಯ ಸಹ ಶಿಕ್ಷಕ ರಾಘವೇಂದ್ರ, ಪಿ.ಓಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಚಂದ್ರಶೇಖರ ಹಾಗೂ ಕೊರ್ಲಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರಕಾಶ್ ಅವರು ಅಮಾನತುಗೊಂಡಿದ್ದಾರೆ.

ಇಂದು (ಮಾರ್ಚ್ 30) ಪರುಶುರಾಮಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆ ನಡೆಯುತ್ತಿದ್ದು, ಇವರೆಲ್ಲರೂ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದರು. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ವಿಧ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸುತ್ತಿರುವುದು ಕಂಡು ಬಂದಿದೆ.
ನಕಲು ಮಾಡುವುದನ್ನು ತಡೆಯದೇ ಪರೀಕ್ಷಾ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತೆ, ಬೇಜವಾಬ್ದಾರಿತನ ಮತ್ತು ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಸಹ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ಡಿಡಿಪಿಐ ರವಿಶಂಕರ್ ರೆಡ್ಡಿ ಆದೇಶದಲ್ಲಿ ತಿಳಿಸಿದ್ದಾರೆ.












Click it and Unblock the Notifications