ವಿರೋಧದ ನಡುವೆಯೂ ಮತ್ತೊಮ್ಮೆ ಕಾಲೇಜು ಸ್ಥಳಾಂತರದ ಆದೇಶ
ಹಿರಿಯೂರು, ಜೂನ್ 26: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆಸ್ತೂರಿಗೆ ಸ್ಥಳಾಂತರಿಸಲು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಕೆಸ್ತೂರಿಗೆ ಹುದ್ದೆ ಸಮೇತ ಸ್ಥಳಾಂತರಿಸಿರುವುದಾಗಿ ಹೇಳಲಾಗಿದೆ. ಈಗಾಗಲೇ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5 ಜನ ಸಹಾಯಕ ಪ್ರಾಧ್ಯಾಪಕರು, 1 ಗ್ರಂಥಪಾಲಕ, 1 ದೈಹಿಕ ಶಿಕ್ಷಕ, ಉಳಿದ 4 ಜನ ಬೋಧಕೇತರರನ್ನು ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಕಾಲೇಜಿನಲ್ಲಿ ಅನ್ಯ ಕಾರ್ಯ ನಿರ್ವಹಿಸುತ್ತಿರುವ ಕೆ.ಚಂದ್ರಶೇಖರ್ ಅವರನ್ನು ಕೆಸ್ತೂರಿನಲ್ಲಿ ಅನ್ಯ ಕಾರ್ಯ ನಿಮಿತ್ತ ಪ್ರಭಾರ ಪ್ರಂಶುಪಾಲರಾಗಿ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ.
ಜೆಜಿಹಳ್ಳಿ ಕಾಲೇಜು ಸ್ಥಳಾಂತರ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಜೂನ್ 10ರಂದು ಹಳೇ ವಿದ್ಯಾರ್ಥಿಗಳು ಹಾಗೂ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಕಾಲೇಜು ಆವರಣದಲ್ಲಿ ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ ಕಾಲೇಜು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಜೊತೆ ಸೇರಿ ಧರಣಿ ನಡೆಸಿದ್ದರು. ಯಾವುದೇ ಕಾರಣಕ್ಕೂ ಕಾಲೇಜನ್ನು ಸ್ಥಳಾಂತರಿಸಲು ಬಿಡುವುದಿಲ್ಲ, ನಮ್ಮ ಮನವಿಗೆ ಸ್ಪಂದಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆಂದು ಹೇಳಿ ಕಾಲೇಜು ಉಳಿಸಿಕೊಳ್ಳುವ ಭರವಸೆ ನೀಡಿದ್ದರು ಮತ್ತು ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು, ಭೇಟಿ ಮಾಡಿ ಚರ್ಚೆ ಕೂಡ ನಡೆಸಿದ್ದರು. ಕಾಲೇಜು ಉಳಿಸಿಕೊಳ್ಳಲು ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ಯಶೋಧರ, ಮಾಜಿ ಸಚಿವ ಡಿ. ಸುಧಾಕರ್ ಕೂಡ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದರು. ಈ ಆದೇಶ ರದ್ದುಪಡಿಸಿ ನಮ್ಮ ಭವಿಷ್ಯದ ಹಾದಿಗೆ ದಾರಿ ಮಾಡಿಕೊಡಿ ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು. ಆದರೂ ಮತ್ತೊಮ್ಮೆ ಸ್ಥಳಾಂತರಕ್ಕೆ ಅಧೀಕೃತ ಆದೇಶ ಹೊರಡಿಸಲಾಗಿದೆ.
ಈ ಕುರಿತು ಸುದ್ದಿಗಾರರ ಜೊತೆ ದೂರವಾಣಿ ಮೂಲಕ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ಯಶೋಧರ, ಕಾಲೇಜು ಉಳಿವಿಗಾಗಿ ಪಕ್ಷಾತೀತವಾಗಿ ಹೋರಾಟ ನಡೆದಿದ್ದು, ಜೆಜಿ ಹಳ್ಳಿ ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ್ದೇನೆ ಹಾಗೂ ಮಾಜಿ ಪ್ರಧಾನಿ ದೇವೇಗೌಡರನ್ನು ಸಂಪರ್ಕಿಸಿ, ಸ್ಥಳಾಂತರದ ಆದೇಶವನ್ನು ರದ್ದುಪಡಿಸುವಂತೆ ಕೋರಿದ್ದೇನೆ. ಕಾಲೇಜು ಜೆಜಿ ಹಳ್ಳಿಯಲ್ಲೇ ಮುಂದುವರಿಯುವ ಸಾಧ್ಯತೆ ಇದೆ. ಈ ನಂಬಿಕೆ ನನಗಿದೆ ಎಂದು ತಿಳಿಸಿದರು.