ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಶಿಕ್ಷಕರ ಪ್ರತಿಭಟನೆ
ಚಿತ್ರದುರ್ಗ, ಜುಲೈ 9: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಇಂದು ಸರ್ಕಾರಿ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
ಸರ್ಕಾರಿ ಶಿಕ್ಷಕರು ಚಳ್ಳಕೆರೆಯಿಂದ ಚಿತ್ರದುರ್ಗದವರೆಗೂ ಸುಮಾರು 30 ಕಿ.ಮೀ. ಪಾದಯಾತ್ರೆ ಮಾಡುವ ಮೂಲಕ ಪ್ರತಿಭಟನೆ ಕೈಗೊಂಡರು. ಉಳಿದಂತೆ ಹಿರಿಯೂರಿನಿಂದ ಚಿತ್ರದುರ್ಗದವರೆಗೂ ಬೈಕ್ ರಾಲಿ ನಡೆಸಿದರು. ಹೊಸದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ತಾಲ್ಲೂಕಿನಿಂದಲೂ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರು 1 ರಿಂದ 5ನೇ ತರಗತಿಗಳಿಗೆ ಮಾತ್ರ ಬೋಧಿಸಬೇಕು ಎಂದು ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು, ನೂತನ ಪಿಂಚಣಿ ಯೋಜನೆ ಮುಂದುವರಿಸಬೇಕು, ಸರ್ಕಾರ ಹೊಸದಾಗಿ ಇಂಗ್ಲಿಷ್ ಮಾಧ್ಯಮ ಆರಂಭಿಸಿರುವುದರಿಂದ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಾಗಿದ್ದು, ಈ ಕಾರಣದಿಂದ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಬೇಕು, ಶಿಕ್ಷಕರ ವರ್ಗಾವಣೆ ಆಗದಿರುವುದರಿಂದ ಅಕ್ಟೋಬರ್ ತಿಂಗಳಲ್ಲಿ ಮರು ವರ್ಗಾವಣೆ ಕೋರಿಕೆ ಪಕ್ರಿಯೆ ನಡೆಸಬೇಕು, ಶಿಕ್ಷಕರ ಹೆಚ್ಚುವರಿ ಪಕ್ರಿಯೆ ನ್ಯೂನತೆ ಸರಿಪಡಿಸಬೇಕು, ಮಕ್ಕಳಿಗೆ ಬೋಧನೆ ಮಾಡಲು ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ನೇಮಿಸಬೇಕು ಎಂಬ ಬೇಡಿಕೆಗಳನ್ನು ಈಡೇಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪ್ತಿ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟಿಸಲಾಗುವುದೆಂದು ಎಚ್ಚರಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ. ಶಿವಾನಂದ್, ಮಹಾಂತೇಶ್, ಮಂಜುನಾಥ್, ಚಳ್ಳಕೆರೆ ತಿಪ್ಪೇಸ್ವಾಮಿ ಸೇರಿದಂತೆ ಸಾವಿರಾರು ಶಿಕ್ಷಕರು ಪ್ರತಿಭಟನೆಯಲ್ಲಿ ಪಾಲ್ಗೋಂಡಿದ್ದರು.












Click it and Unblock the Notifications