ಹಿರಿಯೂರು; ಸರ್ಕಾರಿ ಆಸ್ಪತ್ರೆ ಕೋವಿಡ್ ಸೆಂಟರ್ ಆಗಿ ಪರಿವರ್ತನೆ
ಚಿತ್ರದುರ್ಗ, ಮೇ 07; ಕೋವಿಡ್ ಸೋಂಕಿನ 2ನೇ ಅಲೆ ರಾಜ್ಯದಲ್ಲಿ ಶರವೇಗದಲ್ಲಿ ಹಬ್ಬುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಸಹ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದೆ. ಅದರಲ್ಲೂ ಹಿರಿಯೂರು ತಾಲೂಕಿನಲ್ಲಿ ಸೋಂಕಿತ ಪ್ರಕರಣಗಳು ಪ್ರತಿನಿತ್ಯ ಹೆಚ್ಚುತ್ತಿದೆ. ಪ್ರತಿದಿನ ಕನಿಷ್ಠ ಅಂದರೂ 10-30 ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿವೆ.
ಸೋಂಕು ತಡೆಗಟ್ಟಲು ಹಾಗೂ ಮುಂಜಾಗ್ರತಾ ಕ್ರಮವಾಗಿ ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ವಾರ್ಡ್ಗಳಾಗಿ ಪರಿವರ್ತಿಸಲಾಗಿದೆ. ಇನ್ನು ದಿನನಿತ್ಯ ಆಸ್ಪತ್ರೆಗೆ ಬರುವ ಹೊರ ರೋಗಿಗಳ ತಪಾಸಣೆ ಮತ್ತು ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲು ತೊಂದರೆಯಾಗದಂತೆ ಆಸ್ಪತ್ರೆ ಪಕ್ಕದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ( ಜೂನಿಯರ್ ಕಾಲೇಜು) ತಾತ್ಕಾಲಿಕವಾಗಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ.
ಧರ್ಮಪುರ ಹಾಗೂ ಮರಡಿಹಳ್ಳಿ ಆಸ್ಪತ್ರೆಗಳನ್ನು ಕೋವಿಡ್ ಸೆಂಟರ್ ಆಗಿ ಗುರುತಿಸಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಸೋಂಕು ಹೆಚ್ಚಳವಾಗದಂತೆ ತಾಲೂಕು ಆಡಳಿತ, ನಗರಸಭೆ ಮತ್ತು ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಶಾಸಕಿ ಕೆ. ಪೂರ್ಣಿಮಾ ಮರಡಿಹಳ್ಳಿ, ಧರ್ಮಪುರ, ಜವನಗೊಂಡನಹಳ್ಳಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಕ್ಸಿಜನ್ ಕೊರತೆ ಆಗಬಾರದು ಎನ್ನುವ ದೃಷ್ಟಿಯಿಂದ ಶಾಸಕರು ವೈಯಕ್ತಿಕವಾಗಿ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಕಲ್ಪಿಸಿದ್ದಾರೆ.
ತಾಲೂಕಿನಲ್ಲಿ ಸೋಂಕಿತ ಪ್ರಮಾಣ ಕಡಿಮೆ ಮಾಡಲು ತಾಲೂಕು ಆಡಳಿತ ಟೊಂಕ ಕಟ್ಟಿ ನಿಂತಿದೆ. ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಅನಾವಶ್ಯಕವಾಗಿ ಹೊರಗಡೆ ತಿರುಗಾಡದಂತೆ ಜಾಗೃತಿ ಮೂಡಿಸುತ್ತಿದ್ದಾರೆ.
ನಿಯಮ ಮೀರಿದವರ ಮೇಲೆ ಹಿರಿಯೂರು ಪೋಲಿಸರು ಹದ್ದಿನ ಕಣ್ಣಿಟ್ಟಿದ್ದಾರೆ. ಡಿವೈಎಸ್ಪಿ ರೋಷನ್ ಜಮೀರ್, ವೃತ್ತ ನಿರೀಕ್ಷಕ ರಾಘವೇಂದ್ರ, ಸಿಪಿಐ ಶಿವಕುಮಾರ್, ಪಿಎಸ್ಐ ಪರಮೇಶ್, ಅನುಸೂಯಮ್ಮ ಕಾಲಿಗೆ ಚಕ್ರ ಕಟ್ಟಿಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ.
ಐಮಂಗಲ ಹಾಗೂ ಅಬ್ಬಿನಹೊಳೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಸಹ ಸೂಕ್ತ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನಗರಸಭೆಯಿಂದ ನಗರದಲ್ಲಿ ಸೋಂಕು ತಡೆಗಟ್ಟಲು ಕ್ರಿಮಿನಾಶಕ ಔಷಧವನ್ನು ಸಿಂಪಡಣೆ ಮಾಡಲಾಗಿದೆ.
ಒಟ್ಟಾರೆಯಾಗಿ ಯಾರೂ ಮನೆಯಿಂದ ಹೊರಗೆ ಬಂದು ಇತರರಿಗೆ ಸೋಂಕು ತಗುಲಿಸಬಾರದು. ತಾಲೂಕಿನಲ್ಲಿ ಸೋಂಕು ಹರಡದಂತೆ ನೋಡಿಕೊಳ್ಳುವುದು ಸಾರ್ವಜನಿಕರ ಕೈಯಲ್ಲಿದೆ ಎನ್ನಬಹುದಾಗಿದೆ.












Click it and Unblock the Notifications