ಚಿತ್ರದುರ್ಗ: ಸತತ ತುಂತುರು ಮಳೆ ಹಿನ್ನೆಲೆ, ಹೊಸದುರ್ಗ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ
ಚಿತ್ರದುರ್ಗ, ಜುಲೈ 18: ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಲ್ಲಿ ಸೋಮವಾರ ಮುಂಜಾನೆಯಿಂದಲೂ ಮಳೆಯ ಆರ್ಭಟ ಮುಂದುವರೆದಿದ್ದು ಹೊಸದುರ್ಗ ತಾಲ್ಲೂಕಿನಲ್ಲಿ ಜಿಲ್ಲಾಡಳಿತ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಈ ಕುರಿತು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ವಾರಗಳಿಂದ ಸುರಿಯುತ್ತಿದ್ದ ತುಂತುರು ಮಳೆ ಸೋಮವಾರ ಮುಂಜಾನೆಯಿಂದ ಬಿರುಸು ಪಡೆದು ಎಡೆಬಿಡದೆ ಸುರಿಯುತ್ತಿದ್ದು, ಜನ-ಜೀವನ, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಶಾಲೆಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಮಳೆಯಿಂದ ತೊಂದರೆಗೆ ಸಿಲುಕಿದ್ದಾರೆ.
ಮಳೆಯ ಪರಿಸ್ಥಿತಿಯಲ್ಲಿ ಶಾಲೆಗಳಿಗೆ ರಜೆ ನೀಡಬೇಕೆಂದು ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ಮುನ್ನೆಚ್ಚರಿಕೆ ಕ್ರಮದಿಂದ ಹೊಸದುರ್ಗ ಬಿಇಓ ರವಿಶಂಕರ್ ರೆಡ್ಡಿಯಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.

ಹೊಸದುರ್ಗ ಅಲ್ಲದೆ ಚಿತ್ರದುರ್ಗ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದ್ದು, ಕೆಲೆವೆಡೆ ಎಡಬಿಡದೆ ಮಳೆ ಸುರಿಯುತ್ತಿದೆ. ಇನ್ನು ಹಿರಿಯೂರು, ಚಳ್ಳಕೆರೆ ಸೇರಿದಂತೆ ಮತ್ತಿತರರ ಭಾಗಗಳಲ್ಲಿ ಮಳೆ ಸುರಿಯುತ್ತಿದೆ. ಕೆಲಸಕ್ಕೆ ತೆರಳಲು ಸಾರ್ವಜನಿಕರು ಹರಸಾಹಸ ಪಡಬೇಕಾಯಿತು.
ವಿವಿ ಸಾಗರಕ್ಕೆ ಒಳಹರಿವು ಚಿತ್ರದುರ್ಗದ ಏಕೈಕ ಜೀವನಾಡಿಯಾಗಿರುವ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯಕ್ಕೆ ಇಂದಿನ ವರದಿಯಲ್ಲಿ 2545 ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 121.75 ಅಡಿ ಸಂಗ್ರಹವಾಗಿದೆ. ಜಲಾಶಯದ ಒಟ್ಟು ನೀರಿನ ಮಟ್ಟ 130 ಅಡಿ ಇದ್ದು, 30 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದೆ. ಸುಮಾರು 8 ಅಡಿ ನೀರು ಜಲಾಶಯಕ್ಕೆ ಹರಿದು ಬಂದರೆ ಸುಮಾರು 100 ವರ್ಷಗಳ ನಂತರ ಕೊಡಿ ಬೀಳುವ ಸಾಧ್ಯತೆ ಇದೆ.
ಆದೇಶಿಸಿ ತಡೆ ಹಿಡಿದ ಸರ್ಕಾರ ಜೂಲೈ 15 ರಿಂದ ಅಕ್ಟೋಬರ್ 15 ರವರೆಗೆ ಭದ್ರಾ ಮೇಲ್ದಂಡೆ ಯೋಜನೆ ಜಲಾಶಯದಿಂದ ವಾಣಿ ವಿಲಾಸ ಜಲಾಶಯಕ್ಕೆ ನೀರು ಹರಿಸಲು ಸರ್ಕಾರದ ಆದೇಶ ಹೊರಡಿಸಿತ್ತು. ಇದೀಗ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂದು ತಿಳಿದು ಬಂದಿದೆ. ಆಗಸ್ಟ್ ಒಂದರಿಂದ ನೀರು ಹರಿಸುವ ಸಾಧ್ಯತೆ ಇದೆ ಎನ್ನಬಹುದು.












Click it and Unblock the Notifications