"ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ಆರಂಭಿಸದಿದ್ದರೆ ಬಜೆಟ್ ಅಧಿವೇಶನಕ್ಕೆ ಗೈರು''
ಚಿತ್ರದುರ್ಗ, ಫೆಬ್ರವರಿ 13: ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಮುಖ್ಯಮಂತ್ರಿಗಳು ಶೀಘ್ರ ಅನುದಾನ ಬಿಡುಗಡೆ ಮಾಡದಿದ್ದರೆ, ಬರುವ ಬಜೆಟ್ ಅಧಿವೇಶನಕ್ಕೆ ಚಿತ್ರದುರ್ಗದ ಶಾಸಕರು ಗೈರಾಗುವುದಾಗಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಎಚ್ಚರಿಕೆ ನೀಡಿದರು.
ಚಿತ್ರದುರ್ಗ ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆದಷ್ಟು ಬೇಗ ಅನುದಾನ ನೀಡಿ ಕಾಮಗಾರಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಹಿರಿಯೂರಿನಲ್ಲಿ ಫೆ.18 ರಂದು ಉದ್ಯೋಗ ಮೇಳ: ನೀವೂ ಭಾಗವಹಿಸಿ
ಮೆಡಿಕಲ್ ಕಾಲೇಜು ಪ್ರಾರಂಭಿಸಲು ನಾವೆಲ್ಲರೂ ಸತತ ಪ್ರಯತ್ನ ಮಾಡುತ್ತಿದ್ದೇವೆ. ಮುಂದಿನ ವಾರ ಕೋರ್ ಕಮಿಟಿ ಸದಸ್ಯರು ಸೇರಿ ಸಿಎಂ ಅವರನ್ನು ಭೇಟಿ ಮಾಡುತ್ತೇವೆ. ಒಂದು ವೇಳೆ ಸಿಎಂ ನಮ್ಮ ಮನವಿ ನಿರಾಕರಿಸಿದರೆ, ಬಜೆಟ್ ಅಧಿವೇಶನದಲ್ಲಿ ಭಾಗವಹಿಸುವುದಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಶಾಸಕ ತಿಪ್ಪಾರೆಡ್ಡಿ ಖಡಕ್ ಸಂದೇಶ ರವಾನಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಮಾತನಾಡಿ, ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಸರ್ಕಾರ ಕಂಕಣ ಬದ್ಧವಾಗಿದೆ. ಈ ಬಾರಿಯ ಬಜೆಟ್ನಲ್ಲಿ ಸಿಎಂ ಯಡಿಯೂರಪ್ಪ ಅವರು ಸೇರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಚಿತ್ರದುರ್ಗಕ್ಕೆ ಮೆಡಿಕಲ್ ಕೊಟ್ಟು ವಾಪಸ್ ಕಿತ್ತುಕೊಂಡಿರುವ ರಾಜ್ಯ ಸರ್ಕಾರ. ಮತ್ತೆ ದುರ್ಗದ ಜನತೆಯ ಒತ್ತಡಕ್ಕೆ ಮಣಿಯುತ್ತಾ ಕಾದು ನೋಡಬೇಕಿದೆ.