ಹಿರಿಯೂರು ಕ್ಷೇತ್ರದಿಂದ ಜನಾರ್ದನ ರೆಡ್ಡಿ ಚುನಾವಣೆಗೆ ಸ್ಪರ್ಧೆ?
ಚಿತ್ರದುರ್ಗ, ಮಾರ್ಚ್ 03: ಕರ್ನಾಟಕದ ರಾಜಕೀಯದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಹೆಸರು ಮತ್ತೊಮ್ಮೆ ಕೇಳಿ ಬಂದಿದೆ. 2023ರ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಸ್ಪರ್ಧಿಸಲಿದ್ದಾರೆ ಎಂಬ ಸುಳಿವನ್ನು ಮಾಜಿ ನಗರಸಭಾ ಸದಸ್ಯರೊಬ್ಬರು ನೀಡಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು. ಬಳ್ಳಾರಿಗೆ ಭೇಟಿ ನೀಡದಂತೆ ಷರತ್ತು ಹಾಕಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದಿಂದ ಜನಾರ್ದನ ರೆಡ್ಡಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬುದು ಹರಿದಾಡುತ್ತಿರುವ ಸುದ್ದಿ.
ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೂ ಮುನ್ನ ಚಿತ್ರದುರ್ಗ ರಾಜಕೀಯದಲ್ಲಿ ಈ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿದೆ. ಹಿರಿಯೂರು ಕ್ಷೇತ್ರ ಸದ್ಯ ಬಿಜೆಪಿ ವಶದಲ್ಲಿಯೇ ಇದೆ. ಪ್ರಸ್ತುತ ಪೂರ್ಣಿಮಾ ಶ್ರೀನಿವಾಸ್ ಕ್ಷೇತ್ರದ ಶಾಸಕಿ.
ಜನಾರ್ದನ ರೆಡ್ಡಿ ಸ್ಪರ್ಧೆ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ಜನಾರ್ದನ ರೆಡ್ಡಿ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಪದೇ ಪದೇ ಬಂದು ಹೋಗುತ್ತಿರುವುದು, ಹಿರಿಯೂರಿನ ತೋಟದ ಮನೆಯೊಂದರಲ್ಲಿ ಸ್ಥಳೀಯ ಬಿಜೆಪಿ ಸದಸ್ಯರನ್ನು ಹಾಗೂ ಮುಖಂಡರ ಗೌಪ್ಯ ಸಭೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಭೆ ನಡೆಸುವ ವಿಡಿಯೋ ವೈರಲ್
ಮಾಜಿ ಸಚಿವ ಜನಾರ್ದನ ರೆಡ್ಡಿ ಹಿರಿಯೂರು ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಮಾಜಿ, ಹಾಲಿ ನಗರಸಭಾ ಸದಸ್ಯರೊಂದಿಗೆ ಚರ್ಚೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದರೆ ಸೋಲು ಗೆಲುವಿನ ಲೆಕ್ಕಚಾರ ಏನಿರಬಹುದು ಎಂದು ಸಮೀಕ್ಷೆಯನ್ನು ಕೂಡಾ ಮಾಡಿಸಲಾಗುತ್ತಿದೆ ಎಂದು ಸ್ಥಳೀಯ ಮುಖಂಡರು ಹೇಳುತ್ತಿದ್ದಾರೆ.

ವಿಶೇಷ ಪೂಜೆ, ಕ್ರಿಕೆಟ್ ಟೂರ್ನಿ
ಮುಂದಿನ ರಾಜಕೀಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಜನಾರ್ದನ ರೆಡ್ಡಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡುತ್ತಿದ್ದಾರೆ. ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ. ದಾನಗಳನ್ನು ನೀಡುತ್ತಿದ್ದಾರೆ. ಈ ಮೂಲಕ ಸ್ಥಳೀಯ ಕಾರ್ಯಕರ್ತರನ್ನು ಒಟ್ಟುಗೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಬಳ್ಳಾರಿ ಜಿಲ್ಲೆ ವಿಭಜನೆ ಬಳಿಕ ರೆಡ್ಡಿ ಚಿತ್ರದುರ್ಗದ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

ಸುಳುವುಕೊಟ್ಟ ನಗರಸಭಾ ಸದಸ್ಯ
ಮಾಜಿ ನಗರಸಭಾ ಸದಸ್ಯ ಜಿ. ಪ್ರೇಮ್ ಕುಮಾರ್ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. "2008 ರಿಂದ ಇಲ್ಲಿಯವರೆಗೆ ಚುನಾವಣೆಯ ಹೇಗೆ ನಡೆಯಿತು?, ಯಾವಾಗಲೂ ಹೊರಗಿನವರೇ ಬಂದು ಹಿರಿಯೂರಿನಲ್ಲಿ ಅಧಿಕಾರ ಹಿಡಿಯುತ್ತಾರೆ. ಇಲ್ಲಿನ ಅಭಿವೃದ್ಧಿ ಕೆಲಸಗಳೇನು?, ಜನರು ಯಾವ ರೀತಿ ಹೊರಗಿನವರಿಗೆ ಸ್ಪಂದಿಸುತ್ತಾರೆ ಎನ್ನುವುದರ ಬಗ್ಗೆ ಮಾಹಿತಿ ಪಡೆದುಕೊಂಡರು. ಅವರ ಗುಟ್ಟು ಬಿಟ್ಟು ಕೊಟ್ಟಿಲ್ಲ. ಬಹುತೇಕ ಪಕ್ಷ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ" ಎಂದರು.
Recommended Video

ಆಪ್ತಮಿತ್ರನ ಹಾದಿಯಲ್ಲಿ ರೆಡ್ಡಿ
ಜನಾರ್ದನ ರೆಡ್ಡಿ ಆಪ್ತ ಸ್ನೇಹಿತ ಬಿ. ಶ್ರೀರಾಮುಲು ಅವರು ಬಳ್ಳಾರಿ ಬಿಟ್ಟು ಬಂದಿದ್ದಾರೆ. ಪ್ರಸ್ತುತ ಅವರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಶಾಸಕರು. ಇದೇ ಮಾದರಿಯಲ್ಲಿ ಜನಾರ್ದನ ರೆಡ್ಡಿ ಕೋಟೆ ನಾಡಿಗೆ ಪ್ರವೇಶ ಮಾಡಬಹುದು ಎಂಬ ಸುದ್ದಿಗಳು ಹಬ್ಬಿವೆ. ಈ ಬೆಳವಣಿಗೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಲ್ಲಿ ತಳಮಳ ಉಂಟು ಮಾಡಿದೆ.












Click it and Unblock the Notifications