ಹಿರಿಯೂರಿನಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬೃಹತ್ ಬಹಿರಂಗ ಸಭೆ: ಜನಾರ್ದನ ರೆಡ್ಡಿ ದಂಪತಿ ಭಾಗಿ
ಬಿಜೆಪಿ ತೊರೆದ ಜನಾರ್ದನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಜನಾರ್ದನ ರೆಡ್ಡಿ ಹಾಗೂ ಅರುಣಾ ಲಕ್ಷ್ಮೀ
ಚಿತ್ರದುರ್ಗ, ಫೆಬ್ರವರಿ 2: ರಾಜ್ಯ ವಿಧಾನಸಭಾ ಚುನಾವಣೆ ದಿನ ಕಳೆದಂತೆ ಚುನಾವಣೆಯ ಕಾವು ರಂಗೇರುತ್ತಿದ್ದು, ವಿವಿಧ ರಾಜಕೀಯ ಪಕ್ಷಗಳು ಸಭೆ ಸಮಾರಂಭಗಳಲ್ಲಿ ತೊಡಗುತ್ತಿವೆ. ಇತ್ತ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ನೆಹರೂ ಮೈದಾನದಲ್ಲಿ ಫೆಬ್ರವರಿ 4 ರಂದು ನಡೆಯಲಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬೃಹತ್ ಬಹಿರಂಗ ಸಮಾವೇಶಕ್ಕೆ ಪಕ್ಷದ ಸಂಸ್ಥಾಪಕರು ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿ ಅರುಣಾ ಲಕ್ಷ್ಮೀ ಜನಾರ್ದನ ರೆಡ್ಡಿ ಕೂಡ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ಒಂದು ಕಾಲದಲ್ಲಿ ಬಿಜೆಪಿ ಸರ್ಕಾರ ರಚನೆಯಲ್ಲಿ ರೆಡ್ಡಿ ಸಹೋದದರು ಬಹಳ ಪ್ರಮುಖ ಪಾತ್ರ ವಹಿಸಿದ್ದರು. ಜನಾರ್ದನ ರೆಡ್ಡಿ ಇತ್ತೀಚಿಗೆ ಬಿಜೆಪಿ ಪಕ್ಷದಿಂದ ದೂರ ಸರಿದು, ನೂತನವಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದಾರೆ. ಇದರಿಂದ ಚುನಾವಣೆಯಲ್ಲಿ ಗೆಲ್ಲುವ ಕ್ಷೇತ್ರಗಳಲ್ಲಿ ಬಹುತೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರೆಡ್ಡಿ ಚಿಂತನೆಯಲ್ಲಿದ್ದಾರೆ.
Meghalaya Assembly Elections 2023: ಮೇಘಾಲಯದಲ್ಲಿ 60 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!
ಅದರಂತೆಯೇ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಕೆಆರ್.ಪಿ ಪಕ್ಷದ ಅಭ್ಯರ್ಥಿಯಾಗಿ ಗನ್ನಾಯಕನಹಳ್ಳಿ ಹೆಚ್ ಮಹೇಶ್ ಅವರಿಗೆ ಟಿಕೆಟ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯೂರು ನಗರದಲ್ಲಿ ಬೃಹತ್ ಬಹಿರಂಗ ಸಮಾವೇಶ ಏರ್ಪಡಿಸಲಾಗಿದೆ. ಈ ಸಭೆಗೆ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹಾಗೂ ಅವರ ಪತ್ನಿ ಅರುಣಾ ಲಕ್ಷ್ಮಿ ಜನಾರ್ದನ ರೆಡ್ಡಿ, ಪಕ್ಷದ ಮುಖಂಡರು ಭಾಗಿಯಾಗಲಿದ್ದಾರೆ.
ಸ್ಥಳೀಯ ಅಭ್ಯರ್ಥಿ ಗನ್ನಾಯಕನಹಳ್ಳಿ ಹೆಚ್ ಮಹೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಈ ಬಹಿರಂಗ ಸಮಾವೇಶಕ್ಕೆ ಮಹಿಳೆಯರು ಕುಂಭಮೇಳ, ವಿವಿಧ ಕಲಾ ತಂಡಗಳು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಪಕ್ಷದ ನಾಯಕರನ್ನು ಸ್ವಾಗತಿಸಲಿದ್ದಾರೆ.
ಈ ಕುರಿತು ಮಾತನಾಡಿರುವ ಸ್ಥಳೀಯ ಅಭ್ಯರ್ಥಿ ಹೆಚ್ ಮಹೇಶ್ "ಹೊರಗಿನವರಿಗೆ ಆದ್ಯತೆ ನೀಡುತ್ತಿದ್ದ ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆ ಹೊಂದಿದ್ದು ಸ್ಥಳೀಯ ಅಭ್ಯರ್ಥಿಗೆ ಮತದಾರರು ಆಶೀರ್ವಾದ ಮಾಡಲಿದ್ದಾರೆ. ನಾನು ಈಗಾಗಲೇ ಕಳೆದ ಆರು ತಿಂಗಳಿಂದ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಮತದಾರರನ್ನು ಭೇಟಿ ಮಾಡಲಾಗಿದೆ. ಉತ್ತಮ ಬೆಂಬಲ ಕೂಡ ವ್ಯಕ್ತವಾಗಿದೆ. ಆಡಳಿತ ನಡೆಸಿರುವ ಸರ್ಕಾರಗಳ ಭ್ರಷ್ಟಾಚಾರ, ಜನ ವಿರೋಧಿ ನೀತಿಗಳು, ಜನಸಾಮಾನ್ಯರ ಬೆಲೆ ಏರಿಕೆ ಇದರಿಂದ ಬೇಸತ್ತ ಮತದಾರರು ಬದಲಾವಣೆ ಬಯಸಿದ್ದಾರೆ" ಎಂದು ಮಹೇಶ್ ತಿಳಿಸಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಇದೀಗ ಈ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಹಾಗೂ ಎಎಪಿ ಅಭ್ಯರ್ಥಿಗಳು ಕಾಂಗ್ರೆಸ್,ಬಿಜೆಪಿ ಮತ್ತು ಜೆಡಿಎಸ್ ಪಕ್ಷಕ್ಕೆ ಪೈಪೋಟಿ ನೀಡಲಿವೆ.
ಹಿರಿಯೂರು ಬೃಹತ್ ಬಹಿರಂಗ ಸಮಾವೇಶದಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರು ಪಕ್ಷ ಹಾಗೂ ಚುನಾವಣೆ ಕುರಿತು ಮಾಹಿತಿ ನೀಡಲಿದ್ದಾರೆ. ಬರುವ ಚುನಾವಣೆಗೆ ಪಕ್ಷವನ್ನು ಅಧಿಕಾರಕ್ಕೆ ತರಲು ಸಂಘಟಿತರಾಗಬೇಕು ಎಂದು ಕರೆ ನೀಡಲಿದ್ದಾರೆ. ಇದರ ಜೊತೆಗೆ ಹಿರಿಯೂರು ಕ್ಷೇತ್ರದಲ್ಲಿ ತಮ್ಮ ಪಕ್ಷದ ಸ್ಥಳೀಯ ಅಭ್ಯರ್ಥಿ ಗನ್ನಾಯಕನಹಳ್ಳಿ ಹೆಚ್ ಮಹೇಶ್ ಅವರನ್ನು ಗೆಲ್ಲಿಸುವಂತೆ ರೆಡ್ಡಿ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.