ಶಾಪ ವಿಮೋಚನೆಗೆ ಕಾದಿರುವ ದುರ್ಗದ ಬಂಡೆಗಳು
ಏಳು ಸುತ್ತಿನ ಕೋಟೆಯ ಖ್ಯಾತಿಯ, ಒನಕೆ ಬೀಸಿ ಹೈದರನ ಸಿಪಾಯಿಗಳ ಕೊಂದ ಓಬವ್ವ, ಮದಕರಿಯ ವೀರಾವೇಶದ ಗತಕಾಲದ ಚರಿತ್ರೆಯ ಹ್ಯಾಂಗೋವರ್ನಲ್ಲಿಯೇ ಸದಾ ತೇಲುಗಣ್ಣು ಮೇಲುಗಣ್ಣು ಮಾಡಿಕೊಂಡು ಕುಡಿವ ನೀರಿಗೆ ಅತ್ತ ಒಂದು ಕಣ್ಣನ್ನು ಹಿರಿಯೂರಿನ ವಾಣಿ ವಿಲಾಸ ಸಾಗರದತ್ತಲೂ ಇನ್ನೊಂದನ್ನು ಸೂಳೆಕೆರೆಯ ಕಡೆಯೂ ಹೊರಳಾಡಿಸುತ್ತಾ ಅರ್ಧಂಬರ್ಧ ಜೀವ ಹಿಡಿದು ಕುಂತಿರುವ ದುರ್ಗವೆಂಬ ಚಿತ್ರದುರ್ಗ ಈಗ ಲೋಕಸಭಾ ಚುನಾವಣೆಯ ಬಿಸಿಗೆ ಮೈಗೊಡವಿಕೊಂಡು ಎದ್ದು ನಿಂತಿದೆ.
ಅಂದಕಾಲತ್ತಿನಿಂದಲೂ ರಾಮನಿಗೆ ಕಾದ ಶಬರಿಯಂತೆ ಯಾರಾದರೂ ಪುಣ್ಯಾತ್ಮ ಬಂದು ಬರಗಾಲದ ದವಡೆಯಿಂದ ತನ್ನ ಪಾರು ಮಾಡಿಯಾನೇ ಎಂದು ಕಾಯುತ್ತಲೇ ಬಿಸಿಲಿಗೆ ಕೆಂಡವಾದದ್ದು ಬಂತೇ ವಿನಾ ಯಾರೊಬ್ಬರ ಸ್ಪರ್ಶದಿಂದ ತಾನು ಪುನೀತನಾಗಲೇ ಇಲ್ಲ. ನಿಜಲಿಂಗಪ್ಪನಂಥವರಿಂದ ಆರಂಭಗೊಂಡ ರಾಜಕೀಯ ನಾಯಕರ ಯಾತ್ರೆ ಜಾಫರ್ಷರೀಪರಿಂದ, ಹನುಮಂತಪ್ಪರನ್ನು ದಾಟಿಕೊಂಡು ಈಗ ಜನಾರ್ದನ ಸ್ವಾಮಿಯೆಂಬ ಕಂಪ್ಯೂಟರ್ ವಿಜ್ಞಾನಿಗೆ ಬಂದು ನಿಂತುಕೊಂಡಿದೆ.
ನೀರು, ರೈಲು, ರಸ್ತೆ, ಶಿಕ್ಷಣ, ಉದ್ಯೋಗ, ಇವು ಚಿತ್ರದುರ್ಗ ಜಿಲ್ಲೆಯ ಅನುಗಾಲದ ಬೇಡಿಕೆಗಳು. ಎಲ್ಲ ಸಂಸದರೂ ನೀರಿನ ಜೊತೆ ಎಳ್ಳನ್ನು, ಹಳಿ ಇಲ್ಲದ ರೈಲನ್ನು ಬಿಟ್ಟರು. ವಾಜಪೇಯಿ ಕೃಪೆಯಿಂದ ಚತುರ್ಪಥ ರಸ್ತೆ ದುರ್ಗದ ಹೃದಯದ ಮೇಲೆ ಹಾದು ಹೋದದ್ದನ್ನು ಬಿಟ್ಟರೆ ಬೇರೆ ಇನ್ನೆನಾಗಿದೆ? ಊರ ತುಂಬಾ ಬಾಯ್ತೆರೆದುಕೊಂಡ ಬೀದಿಗಳು, ಮ್ಯಾನ್ಹೋಲ್ಗಳು, ನೀರಿಲ್ಲದ ನಲ್ಲಿಗಳು, ಧೂಳು ತೂರುತ್ತಿರುವ ಗಣಿ ಲಾರಿಗಳು, ನೋಡು ನೋಡುತ್ತಲೆ ಗಣಿಗಾರಿಕೆ ಮಾಡಿ ಮೇಲೇರಿದವರು ಕೆಲವರು, ಕೆಳಗೆ ಬಿದ್ದವರು ನೂರಾರು, ಊರವರಿಗೆ ಧೂಳಿನ ಸ್ನಾನ ಬಿಟ್ಟರೆ ಇನ್ನೇನೂ ಇಲ್ಲ. ಸಾಕಪ್ಪಾ ಸಾಕು ಎನ್ನುವಾಗ ಬಂದೇ ಬಿಟ್ಟದೆ ಲೋಕಸಭಾ ಚುನಾವಣೆ.
ಕಂಪ್ಯೂಟರ್ ತಜ್ಞ, ಅಭಿವೃದ್ಧಿಯ ಹರಿಕಾರನೆಂದು ಕರೆದುಕೊಳ್ಳುವ ಹಾಲಿ ಸಂಸದ ಬಿ.ಜೆ.ಪಿ.ಯ ಜನಾರ್ದನ ಸ್ವಾಮಿ, ವಿಧಾನಸೌಧದಲ್ಲಿ ಅಂಗಿಬಿಚ್ಚಿ ಹಾರಾಡಿದ ಖ್ಯಾತಿಯ ಗೂಳಿಹಟ್ಟಿ ಶೇಖರ್ (ಜೆ.ಡಿ.ಎಸ್.), ಮೂಡಿಗೆರೆ ಕಡೆಯಿಂದ ವಲಸೆ ಬಂದು ಕಾಂಗ್ರೆಸ್ನಿಂದ ನಿಂತಿರುವ ಚಂದ್ರಪ್ಪ, ತ್ರಿಕೋನ ಸ್ವರ್ಧೆಯ ಕ್ಷೇತ್ರ ರಣಾಂಗಣವಂತೂ ಆಗಿಲ್ಲ. ಜನ ಮೂಕಪ್ರೇಕ್ಷಕರಾಗಿ ಈ ಮೀಸಲು ಕ್ಷೇತ್ರವನ್ನು ಅಳೆದುತೂಗಿ ನೋಡುತ್ತಿದ್ದಾರೆ. ಯಾರು ಬಂದರೂ ಅಷ್ಟೆ -ಎಂಬ ನಿರಾಸಕ್ತಿಯ ಭಾವ ಕ್ಷೇತ್ರದ ತುಂಬಾ ಮನೆ ಮಾಡಿದೆ.
'ನೀರು ಕೊಡರಯ್ಯ' ಎಂದು ಜನ ಅಂಗಲಾಚುತ್ತಾರೆ. ಕುದಾಪುರ ಅರಣ್ಯದ ಸಾವಿರಾರು ಎಕರೆಯಲ್ಲಿ ವಿಜ್ಞಾನ, ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಿದ್ದೇ ಜನಾರ್ದನ ಸ್ವಾಮಿಯವರದ್ದೊಂದು ದೊಡ್ಡ ಸಾಧನೆಯಾದರೆ, ಕುರಿ, ಕೋಣ, ಮೇಕೆಗಳ ಮೇಯುದಾಣವನ್ನು ಕಿತ್ತುಕೊಂಡರೆಂಬ ಆಕ್ರೋಶ ಆ ಭಾಗದಲ್ಲಿ. 'ಅಭಿವೃದ್ಧಿಯ ವಿಚಾರದಲ್ಲಿ ಇದು ಅನಿವಾರ್ಯ' ಎಂದರೆ - ಅದು ಯಾರಿಗೂ ಅರ್ಥವಾಗುತ್ತಿಲ್ಲವಲ್ಲಾ ಎಂದು ಜನಾರ್ದನ ಸ್ವಾಮಿ ತಲೆ ಚಚ್ಚಿಕೊಳ್ಳುತ್ತಿದ್ದಾರೆ. ಈ ಬಾರಿ ಗೆದ್ದರೆ ಪ್ರವಾಸೋದ್ಯಮದ ಮುಖೇನ ದುರ್ಗವನ್ನು ನಂದನವನವನ್ನಾಗಿಸುತ್ತೇನೆ ಎನ್ನುತ್ತಾರೆ. ಹಿಂಬಾಲಕರು ತಲೆ ಅಡಿಸಿದರೆ ಉಳಿದವರು ನಗೆಯಾಡುತ್ತಾರೆ.
"ನಾನು ಗೆದ್ದು ಬಂದರೆ ಕುದಾಪುರ ಅರಣ್ಯ ಖಾಲಿ ಮಾಡಿಸುತ್ತೇನೆ. ಇದು ನನ್ನ ಏಕೈಕ ಹೋರಾಟ" ಎಂದು ಅಂಗಿಯ ಬಟನ್ಗೆ ಕೈಹಾಕಿ ಗೂಳಿಹಟ್ಟಿ ಶೇಖರ್ ಮಾತನಾಡುತ್ತಾರೆ. ಕ್ರೀಡಾ ಸಚಿವನಾಗಿದ್ದಾಗ ದುರ್ಗಕ್ಕೆ ಆತ ಮಾಡಿದ ಕೆಲಸ ಜನರ ನೆನಪಿನಲ್ಲಿದೆ. ಅದು ಚೆಂಡು, ಬ್ಯಾಟು, ಓಡುವವರ ಕೃತಜ್ಞತೆಯ ಮಾತು ಉಳಿದ ಶ್ರೀಸಾಮಾನ್ಯರಿಗೇನು ಬಂತು.
ಚಂದ್ರಪ್ಪನೆಂಬ ಮಲಸಿಗರ ಮಾತೇ ವಿಚಿತ್ರ. 'ನಾನು ಗಂಡನ ಮನೆಗೆ ಬಂದಿರುವೆ ಇದನ್ನು ಸುಂದರವಾಗಿಸುವೆ. ಲಕ್ಕವಳ್ಳಿ ಭಾಗದ ಜನರ ಮನವೊಲಿಸಿ ಅಪ್ಪರ್ ಭದ್ರಾವನ್ನು ದುರ್ಗಕ್ಕೆ ತರುವೆ ಎನ್ನುತ್ತಾರೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಮತಗಳಿರುವ ದಲಿತರನ್ನೇ ಈತ ನಂಬಿಕೊಂಡಿದ್ದರೆ ಉಳಿದಿಬ್ಬರು ಬೋವಿ ಜನಾಂಗದ ಮತಗಳ ಜೊತೆ ಉಳಿದ ಮತದವರ ಮತಗಳ ಮೇಲೆ ಕಣ್ಣಾಕಿದ್ದಾರೆ.
ಸಭ್ಯ, ಭ್ರಷ್ಟನಲ್ಲದ, ಯಾವುದೇ ಹಗರಣಗಳಿಗೆ ಸಿಲುಕದ ಕೆಲಸಗಾರ ಜನಪ್ರತಿನಿಧಿ ಜನಾರ್ದನ ಸ್ವಾಮಿಯವರತ್ತ ಜನರ ಮನಸ್ಸು ವಾಲಿದಂತೆ ತೋರುತ್ತಿದೆ. ಮೋದಿ ಅಲೆಯೂ ಜೊತೆ ಸೇರಿ ಜನಾರ್ದನ ಸ್ವಾಮಿ ದಡ ಸೇರಬಹುದು. ಆದ್ರೆ ಜಿಲ್ಲೆಯ ಜನರು ದಡ ಸೇರಿಯಾರೆ? ನೀರು, ರೈಲು, ಉದ್ಯೋಗದ ಪ್ರಶ್ನೆ ಕೇವಲ ಮರೀಚಿಕೆಯೇ? ಕಾದಿರುವ ಬಂಡೆಗಳು ಕಾದು ನೋಡುತ್ತಿವೆ. ಯಾವ ರಾಮನ ಸ್ಪರ್ಶ ತನಗಾದಿತೆಂದು ಕಾದಿರುವ ಅಹಲ್ಯೆಯಂತೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ













Click it and Unblock the Notifications