Breaking: ಲೈಂಗಿಕ ಕಿರುಕುಳ ಆರೋಪ: ಮುರುಘಾ ಶರಣರ ನ್ಯಾಯಾಂಗ ಬಂಧನ ವಿಸ್ತರಣೆ
ಚಿತ್ರದುರ್ಗ ಅಕ್ಟೋಬರ್ 21 : ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಮತ್ತು ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ ಮಾಡಿ ಚಿತ್ರದುರ್ಗ ನ್ಯಾಯಾಲಯ ಆದೇಶ ಹೊರಡಿಸಿದೆ.
ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ಕೋರ್ಟ್ಗೆ ಮುರುಘಾ ಶ್ರೀಗಳನ್ನು ಪೊಲೀಸರು ಹಾಜರು ಪಡಿಸಿದ್ದರು. ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 3ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಇನ್ನು ಮುರುಘಾ ಶ್ರೀಗಳ ಜೊತೆಗೆ ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನ ಅವಧಿಯನ್ನು ಸಹ ವಿಸ್ತರಿಸಿ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಇನ್ನು ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಅಕ್ಟೋಬರ್ 13ರಂದು ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಶರಣರ ವಿರುದ್ಧ ಮೂರನೇ ಎಫ್ಐಆರ್:
ಇನ್ನು ಬಾಲ ನ್ಯಾಯ ಕಾಯ್ದೆ 2015ನ್ನು ಉಲ್ಲಂಘಿಸಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಶ್ರೀಗಳ ವಿರುದ್ಧ 3ನೇ ಎಫ್ಐಆರ್ ದಾಖಲಾಗಿತ್ತು. ನಾಲ್ಕೂವರೆ ವರ್ಷದ ಬಾಲಕಿ ಹಾಗೂ 16 ವರ್ಷದ ಮತ್ತೋರ್ವ ಬಾಲಕಿ, ಇಬ್ಬರು ಬಾಲಕಿಯರ ಬಗ್ಗೆ ಮಡಿಲು ಯೋಜನೆಗೆ ಮಾಹಿತಿ ನೀಡಿಲ್ಲ. ಮಹಿಳಾ-ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ರಕ್ಷಣಾ ಘಟಕಕ್ಕೂ ತಿಳಿಸಿಲ್ಲ. ಇದು ಬಾಲ ನ್ಯಾಯ ಕಾಯ್ದೆಯ ಉಲ್ಲಂಘನೆ ಎಂಬ ಆರೋಪ ಮಾಡಿದ್ದು, ಶಿವಮೂರ್ತಿ ಶರಣರ ವಿರುದ್ಧ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಗ್ರಾಮೀಣ ಪೊಲೀಸರು ಶ್ರೀಗಳ ವಿರುದ್ಧ ಮೂರನೇ ಎಫ್ಐಆರ್ ದಾಖಲಿಸಿಕೊಂಡಿದ್ದರು.












Click it and Unblock the Notifications