ಶಾಸಕಿ ಕೆ.ಪೂರ್ಣಿಮಾ ಕಾಂಗ್ರೆಸ್ ಸೇರಲ್ಲ, ಅವರು ಬಿಜೆಪಿಯಲ್ಲೇ ಇರುತ್ತಾರೆ: ಬಿ.ಎಸ್.ಯಡಿಯೂರಪ್ಪ
ಬಿಜೆಪಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಸೇರುವುದಿಲ್ಲ, ಅವರು ನಮ್ಮ ಜೊತೆಗೆ ಇದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಚಿತ್ರದುರ್ಗ, ಮಾರ್ಚ್, 20: ಬಿಜೆಪಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಸೇರುವುದಿಲ್ಲ. ಅವರು ನಮ್ಮ ಜೊತೆಗೆ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಿರಿಯೂರಿನಲ್ಲಿ ಹೇಳಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ಣಿಮಾ ಅವರು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎಂದು ಪೂರ್ಣಿಮಾ ಹೆಗಲ ಮೇಲೆ ಕೈಹಾಕಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಇನ್ನು ರಾಜ್ಯದಲ್ಲಿ ನಮ್ಮ ನಿರೀಕ್ಷೆ ಮೀರಿ ಉತ್ತಮ ವಾತಾವರಣ ಸೃಷ್ಟಿಯಾಗುತ್ತಿದೆ. ಹಿರಿಯೂರಲ್ಲಿ ರೋಡ್ ಶೋ, ಚಿತ್ರದುರ್ಗದಲ್ಲಿ ಸಂಜೆ ಬಹಿರಂಗ ಸಭೆಯಿದೆ. ಈ ಸಭೆಯಲ್ಲಿ 40 ಸಾವಿರಕ್ಕೂ ಅಧಿಕ ಜನ ಸೇರುತ್ತಾರೆ ಎಂದರು.

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ BJP ಗೆಲ್ಲಲಿದೆ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾವೇ ಸಿಎಂ ಎಂದು ಕೆಲವರು ಬೊಬ್ಬೆ ಹೊಡೆಯುತ್ತಿದ್ದಾರೆ. ಕೆಲವರು ಮುಂದಿನ ಸಿಎಂ ನಾವೇ ಎನ್ನುವುದರಲ್ಲಿ ಅರ್ಥವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.
ಅದ್ಭುತ ಕಾರ್ಯಕ್ರಮ ನಡೆಯಲಿದೆ
ಇದೇ ತಿಂಗಳಲ್ಲಿ ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿಯವರು ಬರಲಿದ್ದು, ಅಂದು ಅದ್ಭುತ ಕಾರ್ಯಕ್ರಮ ನಡೆಯಲಿದೆ. ಮೋದಿಯವರಿಗೆ ರಾಹುಲ್ ಗಾಂಧಿ ಸರಿಸಮ ಅಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಸಿಎಂ ಯಾರೆಂಬುದು ಪಕ್ಷ ತೀರ್ಮಾನಿಸುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ಸೇರಲಿದ್ದಾರೆಂದು ಸದ್ದು
ಕೋಟೆ ನೋಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷಕ್ಕೆ ಮರಳಲಿದ್ದಾರೆ ಎನ್ನುವ ಮಾತುಗಳು ಇತ್ತೀಚೆಗಷ್ಟೇ ಕೇಳಿಬಂದಿದ್ದವು. ಕೆ.ಪೂರ್ಣಿಮಾ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳುವಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಂತ್ರಗಾರಿಕೆ ರೂಪಿಸಿದ್ದಾರೆ ಎನ್ನಲಾಗಿತ್ತು. ಯಾಕೆಂದರೆ ಬಾದಾಮಿಯಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು ಇದೀಗ ಕೋಲಾರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು.
ಕೋಲಾರದಲ್ಲಿನ ಮತದಾರರ ವಿವರ
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 15 ಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿವೆ. ಇದಲ್ಲದೆ ಚಿತ್ರದುರ್ಗ ಜಿಲ್ಲೆ ಹಾಗೂ ತುಮಕೂರು ಜಿಲ್ಲೆ ಒಳಗೊಂಡಂತೆ ಜಗಳೂರು, ಕೂಡ್ಲಿಗಿ, ಅರಸೀಕೆರೆ, ಹಾಸನ, ರಾಮನಗರ, ಮಾಗಡಿ, ಚಿಂತಾಮಣಿ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಸೇರಿದಂತೆ ಕೆಲವು ಉತ್ತರ ಕರ್ನಾಟಕ ಭಾಗದಲ್ಲಿ ಸಹ ಗೊಲ್ಲ ಸಮುದಾಯದ ಮತಗಳು ಅಭ್ಯರ್ಥಿ ಗೆಲುವಿಗೆ ನಿರ್ಣಾಯಕ ಪಾತ್ರ ವಹಿಸಲಿವೆ.
ಈ ನಿಟ್ಟಿನಲ್ಲಿ ಸುಮಾರು 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೊಲ್ಲ ಸಮುದಾಯದ ಮತಗಳು ಅಧಿಕವಾಗಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪಕ್ಷ ಕೆ. ಪೂರ್ಣಿಮಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತಿದ್ದಾರೆ ಎನ್ನಲಾಗಿತ್ತು.
ಈ ಹಿನ್ನೆಲೆ ಸಿದ್ದರಾಮಯ್ಯ ಅವರು ನನ್ನ ಗೆಲುವಿಗೆ ಹಾಗೂ ಇತರ ಕ್ಷೇತ್ರದ ಅಭ್ಯರ್ಥಿ ಗೆಲುವಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ ಎನ್ನುವ ದೃಷ್ಟಿಯಿಂದ ಪೂರ್ಣಿಮಾ ಅವರನ್ನು ಮರಳಿ ಕಾಂಗ್ರೆಸ್ ಪಕ್ಷಕ್ಕೆ ತರುವಲ್ಲಿ ಯಶಸ್ವಿಯಾಗುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು.
ಈಗಾಗಲೇ ಹಿರಿಯೂರು ಕ್ಷೇತ್ರದಲ್ಲಿ ಪೂರ್ಣಿಮಾ ಕಾಂಗ್ರೆಸ್ಗೆ ಎನ್ನುವ ಸುದ್ದಿ ಹರಿದಾಡಿತ್ತು. ಪೂರ್ಣಿಮಾ ಅವರು ಒಂದು ವಾರದ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವಿಚಾರ ಎಲ್ಲೆಡೆಯೂ ಹರಿದಾಡಿತ್ತು. ಇದೀಗ ಇದಕ್ಕೆ ಹಿರಿಯೂರಿನಲ್ಲಿ ಪ್ರತಿಕ್ರಿಯಿಸಿದ ಬಿ.ಎಸ್.ವೈ, ಪೂರ್ಣಿಮಾ ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್ಗೆ ಹೋಗುವುದಿಲ್ಲ ಎಂದು ಹೆಳಿದ್ದಾರೆ.












Click it and Unblock the Notifications