ವಿಧಾನಸಭೆ ಚುನಾವಣೆಗೆ ಸ್ಪರ್ಧೆ; ನಟ ಶಶಿಕುಮಾರ್ ಘೋಷಣೆ

ಚಿತ್ರದುರ್ಗ, ಅಕ್ಟೋಬರ್ 25; ಕರ್ನಾಟಕದಲ್ಲಿ 2023ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಸುಮಾರು ಹದಿನೈದು ತಿಂಗಳು ಬಾಕಿ ಇರುವಾಗಲೇ ಚಿತ್ರದುರ್ಗ ಜಿಲ್ಲೆಯಲ್ಲಿ ಚುನಾವಣೆ ಸಿದ್ಧತೆ ಜೋರಾಗಿದೆ.

ಚಳ್ಳಕೆರೆಯ ಕಾಟಪ್ಪನಹಟ್ಟಿ ಪ್ರಕಾಶ್ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ಶಶಿಕುಮಾರ್, "ಜಿಲ್ಲೆಯ ಎಸ್‌ಟಿ ಮೀಸಲು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ" ಎಂದು ಸೋಮವಾರ ಘೋಷಣೆ ಮಾಡಿದರು.

"ಚುನಾವಣೆಗೆ ಸ್ಪರ್ಧಿಸುವುದು ಖಚಿತ. ಆದರೆ ಕ್ಷೇತ್ರ ಅಂತಿಮವಾಗಿಲ್ಲ. ಶೀಘ್ರವೇ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆಂದು ತಿಳಿಸಲಾಗುವುದು" ಎಂದು ಶಶಿಕುಮಾರ್ ಹೇಳಿದರು.

Kannada Actor Shashi Kumar To Contest For 2023 Assembly Elections

ಕಳೆದ ಬಾರಿ ಯಾಕೆ ಸ್ಪರ್ಧಿಸಲಿಲ್ಲ? ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, "ಟಿಕೆಟ್ ಸಿಗದ ಕಾರಣ ಹೊಸದುರ್ಗ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ, ಈ ಬಾರಿ ಚುನಾವಣೆಗೆ ಜಿಲ್ಲೆಯ ಎಸ್ಟಿ ಮೀಸಲು ಕ್ಷೇತ್ರದಿಂದಲೇ ನನ್ನ ಸ್ಪರ್ಧೆ" ಎಂದು ಹೇಳಿದರು.

"ನಾನು ಸಂಸದನಾಗಿದ್ದಾಗ ಕೇವಲ 2 ಕೋಟಿ ಮಾತ್ರ ಅನುದಾನ ಬರುತ್ತಿತ್ತು. ಅದರಲ್ಲಿ ಜನರು ಗುರುತಿಸುವ ಕೆಲಸಗಳನ್ನು ಮಾಡಿದ್ದೇನೆ. ಬಂದ ಅನುದಾನದಲ್ಲಿ ಕ್ಷೇತ್ರದ ಜನರು ಹೇಳಿದ ಹಾಗೆ ಕೆಲಸ ಮಾಡಲಾಗಿದೆ" ಎಂದು ನಟ ಶಶಿಕುಮಾರ್ ತಿಳಿಸಿದರು.

ಮಾಜಿ ಸಂಸದ ಶಶಿಕುಮಾರ್; 1999ರಲ್ಲಿ ನಡೆದ (1999-2004) ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸಂಯುಕ್ತ ಜನತಾದಳದ ಬಾಣದ ಗುರುತಿನಿಂದ ಸ್ಪರ್ಧಿಸಿ, ಹಳ್ಳಿ ಹಳ್ಳಿಗಳಲ್ಲಿ ಹಾಡು ಹೇಳಿಕೊಂಡು, ಡ್ಯಾನ್ಸ್ ಮಾಡಿ ಮತದಾರರನ್ನು ರಂಜಿಸಿ ಮತಪಡೆದು ಅಮೋಘ ಗೆಲುವನ್ನು ಶಶಿಕುಮಾರ್ ಪಡೆದಿದ್ದರು.

ಅದೇ ಹುರುಪಿನಲ್ಲಿಯೂ ಕೆಲಸವನ್ನು ಮಾಡಿದ್ದರು. ಒಂದು ಹಂತದಲ್ಲಿ ತಾನು ಹುಟ್ಟಿ ಬೆಳೆದ ಚಿತ್ರದುರ್ಗದಲ್ಲಿಯೇ ಚುನಾವಣೆಯಲ್ಲಿ ಸ್ವರ್ಧಿಸಿ ಗೆದ್ದ ಮೇಲೆ ಮತದಾರರ ನಿರೀಕ್ಷೆಯಂತೆ ಕೆಲಸ ಮಾಡಲು ಬರುವ ಎರಡು ಕೋಟಿ‌ ಅನುದಾನದಲ್ಲಿ ಸಾಧ್ಯವಾಗದೇ ಹೋದರು ಸಾಕಷ್ಡು ಅಂದರೆ ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ನಗರಸಭೆಗೆ ನೀಡಿದ್ದರು.

ನಗರಗಳಲ್ಲಿ ಬೀದಿ ದೀಪಗಳನ್ನು ನೀಡುವ ಸಲುವಾಗಿ ಸೋಡಿಯಂ ಲೈಟ್‌ಗಳನ್ನು ವಿತರಿಸಿದ್ದರು. ಚಿತ್ರದುರ್ಗ ಜಿಲ್ಲೆಯ ಆರೂ ತಾಲೂಕುಗಳಲ್ಲಿ ಭದ್ರವಾದ ಬಸ್ ನಿಲ್ದಾಣಗಳನ್ನು ನಿರ್ಮಿಸಿದ್ದರು. ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ನಗರಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಕೆ ಮಾಡಲು ಅನುದಾನ ಖರ್ಚು ಮಾಡಿದ್ದರು.

ಚಿತ್ರದುರ್ಗದಲ್ಲಿ ಖಾಸಗಿ ಬಸ್ ನಿಲ್ದಾಣವನ್ನು ಶಶಿಕುಮಾರ್ ಬಸ್ ನಿಲ್ದಾಣ ಎಂದು ಕೂಡ ಕರೆಯುವಷ್ಟು ರೀತಿಯಲ್ಲಿ ಸುಸಜ್ಜಿತವಾಗಿ ನಿರ್ಮಿಸಿದ್ದರು. ಆದರೆ ಅವರ ಅವಧಿ ಮುಗಿದ ಮೇಲೆ ಮತ್ತೆ ಅವರು ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗಲಿಲ್ಲ.

2008ರಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಾಜಿ ಸಚಿವ ತಿಪ್ಪೇಸ್ವಾಮಿ ವಿರುದ್ಧ ಕೂದಲೆಳೆ ಅಂತರದಲ್ಲಿ ಸೋಲುಕಂಡಿದ್ದರು. ಆಗಲೂ ಕೂಡ ಕ್ಷೇತ್ರದಲ್ಲಿ ಜನರ ಜೊತೆ ನಿರಂತರ ಸಂಪರ್ಕವನ್ನಾಗಲಿ ಕ್ಷೇತ್ರದ ಜೊತೆಗೆ ಒಡನಾಟ ವನ್ನಾಗಲಿ ಇಟ್ಟುಕೊಳ್ಳಲಿಲ್ಲ.

ಈ ಕಾರಣದಿಂದ ಅವರಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಹಿಡಿತ ಸಾಧಿಸಲು ಸಾಧ್ಯವಾಗಲಿಲ್ಲ. ಇದರಿಂದ ಅವರು ದೂರದ ಬೆಂಗಳೂರಿನಲ್ಲಿಯೇ ಉಳಿದು ಕ್ಷೇತ್ರವನ್ನು ಸಂಪೂರ್ಣವಾಗಿಯೇ ಮರೆತು ಹೋಗಿದ್ದರು ಎನ್ನಬಹುದು.

ನಂತರದ ಚುನಾವಣೆಯಲ್ಲಿ ಟಿಕೆಟ್ ದೊರೆಯಲಿಲ್ಲ. 2018ರಲ್ಲಿ ಮತ್ತೆ ಚಳ್ಳಕೆರೆ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಟಿಕೆಟ್ ದೊರೆಯದ ಕಾರಣ ಕೊನೆ ಕ್ಷಣದಲ್ಲಿ ಜೆಡಿಎಸ್ ಪಕ್ಷ ಸೇರಿ ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ, ಪ್ರಚಾರ ನಡಸದೇ ಸುಮಾರು 1500 ಹೆಚ್ಚು ಮತಗಳನ್ನು ಪಡೆದು ಹೀನಾಯವಾಗಿ ಸೋತಿದ್ದರು.

ಹೀಗೆ ಶಶಿಕುಮಾರ್ ತಮ್ಮ ರಾಜಕೀಯ ಜೀವನಕ್ಕೆ ಜೀವ ನೀಡಿದ್ದ ಕೋಟೆ ನಾಡನ್ನು ಕಡೆಗಣಿಸಿ ಚುನಾವಣೆ ಬಂದಾಗ ಮಾತ್ರ ಬರುವುದು ಪ್ರಚಾರ ಮಾಡುವುದು ಮಾಡಿದರೂ ಕೂಡ ಜನರ ಪ್ರೀತಿ ಮಾತ್ರ ಕಡಿಮೆ ಆಗಿರಲಿಲ್ಲ. ಆದರೆ ಪ್ರೀತಿ ಮಾತ್ರ ಮತಗಳಾಗಿ ಪರಿವರ್ತನೆಯಾಗಲೇ ಇಲ್ಲ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಶಿಕುಮಾರ್ ಜೆಡಿಎಸ್ ಪಕ್ಷ ಸೇರಿದ್ದಾರೆ. ಮುಂದಿನ ಚುನಾವಣೆಗೆ ಅವರು ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುತ್ತಾರೋ? ಅಥವಾ ಬೇರೊಂದು ಪಕ್ಷದಿಂದ ಚುನಾವಣೆಗೆ ನಿಲ್ಲುತ್ತಾರೋ ತಿಳಿದು ಬಂದಿಲ್ಲ.

ಒಂದು ವೇಳೆ ಚಳ್ಳಕೆರೆ ಮೀಸಲು ಕ್ಷೇತ್ರದಿಂದ ಚುನಾವಣೆಗೆ ನಿಲ್ಲಬೇಕು ಎಂದರೇ ಈಗಾಗಲೇ ಜೆಡಿಎಸ್ ಸಂಭವನೀಯ ಅಭ್ಯರ್ಥಿಯಾಗಿ ರವೀಶ್‌ರನ್ನು ಗುರುತಿಸಲಾಗಿದೆ. ಇಲ್ಲವಾದರೆ ಶಶಿಕುಮಾರ್ ಮೊಳಕಾಲ್ಮೂರು ಕ್ಷೇತ್ರದ ಕಡೆ ಗಮನ ಹರಿಸಬೇಕಾಗುತ್ತದೆ.

ಜಿಲ್ಲೆಯ ಎಸ್‌ಟಿ ಮೀಸಲು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಶಶಿಕುಮಾರ್ ಹೇಳಿದ್ದಾರೆ. ಆದರೆ ಯಾವ ಮೀಸಲು ಕ್ಷೇತ್ರ ಎಂದು ನಿಖರವಾಗಿ ತಿಳಿಸಿಲ್ಲ. ಜಿಲ್ಲೆಯಲ್ಲಿ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ಎರಡು ಎಸ್‌ಟಿ ಮೀಸಲು ಕ್ಷೇತ್ರಗಳಾಗಿವೆ. ಈ ಎರಡರಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೋ? ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+