PM Narendra Modi: ಬಡವರ ಹಾಸಿಗೆ, ದಿಂಬಿನಲ್ಲಿಯೂ ಹಗರಣ: ಕೋಟೆ ನಾಡಿನಲ್ಲಿ "ಕೈ" ವಿರುದ್ಧ "ನಮೋ" ಗುಡುಗು
ಚಿತ್ರದುರ್ಗ, ಮೇ, 02: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೋಟೆ ನಾಡು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಬಡವರ ಹಾಸಿಗೆ, ದಿಂಬಿನಲ್ಲೂ ಕಾಂಗ್ರೆಸ್ ಹಗರಣ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ಚಿತ್ರದುರ್ಗದಲ್ಲಿ ನಡೆದ ಬಿಜೆಪಿ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಹತ್ತು ವರ್ಷಗಳ ಕಾಲ ಮಾಡ್ಡಿದ್ದಕಿಂತ ನಾವು ಅತಿ ಹೆಚ್ಚು ಮೆಡಿಕಲ್ ಕಾಲೇಜುಗಳನ್ನು ಆರಂಭಿಸಿದ್ದೇವೆ. ರಾಜ್ಯದಲ್ಲಿ ಅನೇಕ ನರ್ಸಿಂಗ್ ಕಾಲೇಜುಗಳನ್ನು ಆರಂಭಿಸಿದ್ದೇವೆ. ಚಿತ್ರದುರ್ಗದಲ್ಲೂ ಒಂದು ಕಾಲೇಜು ಆರಂಭಿಸಿದ್ದೇವೆ. ಇದರಿಂದ ಬಡವರ ಮಕ್ಕಳು ಮೆಡಿಕಲ್ ಓದಲು ಅವಕಾಶ ಸಿಕ್ಕಿದೆ ಎಂದರು.

ಇನ್ನು ಬಡವರ ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶ ಮಾಡಿದ್ದೇವೆ. ರೈತರ ಮಕ್ಕಳ ಅನುಕೂಲಕ್ಕೆ ರೈತ ವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದೇವೆ. ಆದಿವಾಸಿ ಬುಡಕಟ್ಟು ಜನಾಂಗದ ಮಕ್ಕಳಿಗೆ ಏಕಲವ್ಯ ಯೋಜನೆ ಮೂಲಕ ಅನುಕೂಲ ಮಾಡಿಕೊಟ್ಟಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಮತ ನೀಡಬೇಡಿ. ಈ ಎರಡೂ ಪಕ್ಷಗಳು ಬೇರೆ ಬೇರೆ ಇರಬಹುದು, ಆದರೆ ಹೃದಯಗಳು ಮಾತ್ರ ಒಂದೆ ಆಗಿವೆ ಎಂದರು. ಅಲ್ಲದೆ ಭದ್ರಾ ಮೇಲ್ದಂಡೆ ಯೋಜನೆ ನಿರ್ಲಕ್ಷ್ಯವೇ ಅವರ ವೈಫಲ್ಯವನ್ನು ತೋರಿಸುತ್ತಿದೆ. ಆ ಯೋಜನೆ ಪೂರ್ಣಗೊಳಿಸಲು ನಾನು 5,300 ಕೋಟಿ ಅನುದಾನ ನೀಡಿದ್ದೇನೆ. ಅದರಿಂದ ಈ ಭಾಗದ ಜನರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ.
ಕರ್ನಾಟಕದ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಚುನಾವಣೆ ಎದುರಿಸುತ್ತಿದೆ. ಎಲ್ಲಿ ನೋಡಿದರೂ ಲಕ್ಷ ಲಕ್ಷಗಟ್ಟಲೇ ಜನರು ಕಾಣಿಸುತ್ತಿದ್ದಾರೆ. ಕರ್ನಾಟಕದ ಜನರು ಈಗಾಗಲೇ ನಿರ್ಧಾರ ಮಾಡಿದ್ದಾರೆ. ಈ ಬಾರಿಯ ನಿರ್ಧಾರ ಬಹುಮತದ ಸರ್ಕಾರ ಎಂದು ನಿರ್ಧಾರ ಮಾಡಿದ್ದಾರೆ. ಬಿಜೆಪಿಯನ್ನು ಆಶೀರ್ವದಿಸಲು ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
7 ಸುರಕ್ಷಾ ಕೋಟೆ ಯೋಜನೆ ಜಾರಿಗೆ ತಂದಿದ್ದೇವೆ
7 ಸುತ್ತಿನ ಕೋಟೆ ರೀತಿ 7 ಸುರಕ್ಷಾ ಕೋಟೆ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಪಿಎಂ ಆವಾಸ್ ಯೋಜನೆ, ಗ್ಯಾಸ್, ನೀರು, ಪ್ರತಿ ಮನೆಗೂ ರೇಷನ್, ಆಯುಷ್ ಮಾನ್ ಭಾರತ್ ಯೋಜನೆ, ಮುದ್ರಾ ಯೋಜನೆ, ಭೀಮಾ ಯೋಜನೆ, ಮಹಿಳೆಯರ ಸುರಕ್ಷೆ ಹಾಗೂ ಜನಧನ್ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರೈಲು, ರಸ್ತೆ, ಏರ್ ಪೋರ್ಟ್ ನಿರ್ಮಾಣಗಳಿಗೆ ವೇಗ ದೊರೆಯಿತು. ಕರ್ನಾಟಕದಲ್ಲಿ 9 ಕೈಗಾರಿಕಾ ಪ್ರದೇಶ ಸ್ಥಾಪನೆ ಮಾಡಲಾಗುತ್ತಿದೆ. 9 ಕೈಗಾರಿಕಾ ಪ್ರದೇಶದಲ್ಲಿ ಒಂದು ಚಿತ್ರದುರ್ಗದಲ್ಲಿ ಸ್ಥಾಪನೆಯಾಗಲಿದ್ದು, ಇದರಿಂದ ಯುವಜನತೆಗೆ ಉದ್ಯೋಗಾವಕಾಶಗಳು ದೊರೆಯಲಿವೆ ಎಂದರು. ಹಾಗೆಯೆ ಇನ್ನು ಹಿರಿಯೂರು ತಾಲೂಕಿನ ವಾಣಿ ವಿಲಾಸ ಜಲಾಶಯವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ಅಲ್ಲದೆ "ಕೋಟೆ ನಾಡು ಚಿತ್ರದುರ್ಗದ ಜನತೆಗೆ ನನ್ನ ನಮಸ್ಕಾರಗಳು" ಎಂದು ಹೇಳುವ ಮೂಲಕ ಕನ್ನಡದಲ್ಲೇ ಭಾಷಣ ಆರಂಭಿಸಿದರು. ಭಾರತ ದೇಶದಲ್ಲಿ ಕರ್ನಾಟಕ ರಾಜ್ಯವನ್ನು ನಂಬರ್ 1 ಸ್ಥಾನಕ್ಕೇರಿಸಲು ನೀಲನಕ್ಷೆ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.












Click it and Unblock the Notifications