ಉಪಸಭಾಪತಿ ರುದ್ರಪ್ಪ ಲಮಾಣಿಗೆ ಬೈಕ್ ಡಿಕ್ಕಿ; ಆಸ್ಪತ್ರೆಗೆ ದಾಖಲು
ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಅಪರಿಚಿತ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಗ್ರಾಮದ ಜೆಜಿ ಹಳ್ಳಿ ಸಮೀಪ ಶುಕ್ರವಾರ ಸಂಜೆ ನಡೆದಿದೆ.
ಶಾಸಕ, ಉಪಸಭಾಪತಿ ರುದ್ರಪ್ಪ ಲಮಾಣಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪ ಸಭಾಪತಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪಸಭಾಪತಿಗಳ ಕಾರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಯಾವುದೇ ಸಿಗ್ನಲ್ ಹಾಕದೆ ನಿಲ್ಲಿಸಿ, ಮೂತ್ರ ವಿಸರ್ಜನೆಗೆ ತೆರಳಿದ್ದರು ಎಂದು ವರದಿಯಾಗಿದೆ. ಇನ್ನೂ ಕೆಲವು ವರದಿಗಳ ಪ್ರಕಾರ ಅವರು ಎಳನೀರು ಕುಡಿಯಲು ನಿಲ್ಲಿಸಿದ್ದರು ಎನ್ನಲಾಗಿದೆ.

ಬೈಕ್ ಸವಾರ ಇದನ್ನು ಗಮನಿಸದೆ ಬಂದು ರುದ್ರಪ್ಪ ಲಮಾಣಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಅವರು ರಸ್ತೆಗೆ ಬಿದ್ದಿದ್ದರಿಂದ ಸಣ್ಣಪುಟ್ಟ ಗಾಯಗಳಾಗಿದೆ. ತಕ್ಷಣ ಅವರನ್ನು ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿರಿಯೂರು ಡಿವೈಎಸ್ಪಿ ಶಿವಕುಮಾರ್ ಮತ್ತು ಹಿರಿಯೂರು ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಅವರು ಸೇರಿ ಉಪ ಸಭಾಪತಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಬೈಕ್ ಸವಾರನನ್ನು ವಶಕ್ಕೆ ಪಡೆದಿದ್ದಾರೆ.












Click it and Unblock the Notifications