ಚಿತ್ರದುರ್ಗದಲ್ಲಿ ಪರಿಷತ್ ಫೈಟ್; ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳ ನಾಮಪತ್ರ
ಚಿತ್ರದುರ್ಗ, ನವೆಂಬರ್ 23; ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ವಿಧಾನಪರಿಷತ್ ಸ್ಥಾನಕ್ಕೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಮಂಗಳವಾರ ಚುನಾವಣಾಧಿಕಾರಿಯೂ ಆಗಿರುವ ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್. ಮಣ್ಣಿಕೇರಿಗೆ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿಯಾಗಿ ಮೂರನೇ ಬಾರಿಗೆ ಕೆ. ಎಸ್. ನವೀನ್ ಪರಿಷತ್ ಚುನಾವಣೆಗೆ ಸ್ಪರ್ಧಿಸಿದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ. ಸೋಮಶೇಖರ್ ಅಖಾಡಕ್ಕೆ ಇಳಿದಿದ್ದಾರೆ. ಬಿಜೆಪಿ ಅಭ್ಯರ್ಥಿ ನಗರದ ನೀಲಕಂಠೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ, ನಗರದ ಪ್ರಮುಖ ರಸ್ತೆಗಳಲ್ಲಿ ತೆರೆದ ವಾಹನದಲ್ಲಿ ನೂರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಪರಿಷತ್ ಚುನಾವಣೆ: ಮೈಸೂರಿನಿಂದ ಕಣಕ್ಕಿಳಿದ ಮೂರು ಪಕ್ಷಗಳ ಅಭ್ಯರ್ಥಿಗಳಿವರು!
ಈ ಸಂದರ್ಭದಲ್ಲಿ ಚಿತ್ರದುರ್ಗದ ಸಂಸದ, ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ರಾಜ್ಯ ಖಾತೆ ಸಚಿವ ಎ. ನಾರಾಯಣಸ್ವಾಮಿ, ದಾವಣಗೆರೆ ಸಂಸದ ಜಿ. ಎಂ. ಸಿದ್ದೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು, ಜಿಲ್ಲಾಧ್ಯಕ್ಷರಾದ ಎ. ಮುರಳಿ, ಜಿಲ್ಲೆಯ ಶಾಸಕರಾದ ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ಹೊಳಲ್ಕೆರೆ ಚಂದ್ರಪ್ಪ, ನಗರಸಭಾ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
Breaking; ಪರಿಷತ್ ಚುನಾವಣೆ, ಕಾಂಗ್ರೆಸ್ ಅಭ್ಯರ್ಥಿಗಳು ಘೋಷಣೆ
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವಿಧಾನಪರಿಷತ್ ಚುನಾವಣೆಗೆ ಬಿ. ಸೋಮಶೇಖರ್ ದೇವರಿಗೆ ಪೂಜೆ ನೆರವೇರಿಸಿ, ಅಪಾರ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಟಿ. ರಘುಮೂರ್ತಿ, ಮಾಜಿ ಸಚಿವರಾದ ಎಚ್. ಆಂಜನೇಯ, ಡಿ. ಸುಧಾಕರ್, ಮಾಜಿ ಶಾಸಕರಾದ ಬಿ. ಜಿ. ಗೋವಿಂದಪ್ಪ, ಎವಿ ಉಮಾಪತಿ, ಮಾಜಿ ಸಂಸದ ಬಿ. ಎನ್. ಚಂದ್ರಪ್ಪ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು; ಎಚ್. ಆಂಜನೇಯ
ಜೆಡಿಎಸ್ ಅಭ್ಯರ್ಥಿ ಇಲ್ಲ: ದಾವಣಗೆರೆ-ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಿಲ್ಲ. ಹಾಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ಬಿಜೆಪಿ ಅಭ್ಯರ್ಥಿ ಕೆ. ಎಸ್. ನವೀನ್ ಎರಡು ಬಾರಿ ಸೋತಿದ್ದರು. ಮೂರನೇ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇನ್ನೂ ಕಾಂಗ್ರೆಸ್ ಅಭ್ಯರ್ಥಿ ಕೂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿಕರು ಎಂಬ ಸುದ್ದಿ ಇದೆ. ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇನ್ನೂ ಜೆಡಿಎಸ್ ಅಭ್ಯರ್ಥಿ ಇಲ್ಲದ ಕಾರಣ ಪಕ್ಷ ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸಲಿದೆ ಎನ್ನುವ ಮಾತು ಕೇಳಿ ಬರುತ್ತಿದೆ.
ಡಿಸೆಂಬರ್ 14 ರಂದು ಫಲಿತಾಂಶ; ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಂಗಳವಾರ ಕೊನೆಯ ದಿನ. ಡಿಸೆಂಬರ್ 10ರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14 ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.
ಒಟ್ಟು 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮೈಸೂರು, ವಿಜಯಪುರ, ಬೆಳಗಾವಿ, ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿ ಎರಡು ಸ್ಥಾನಗಳಲ್ಲಿ ಚುನಾವಣೆ ನಡೆಯಲಿದೆ. ರಾಯಚೂರು, ಚಿತ್ರದುರ್ಗ, ಕಲಬುರಗಿ, ಉತ್ತರ ಕನ್ನಡ, ಬಳ್ಳಾರಿ, ಹಾಸನ, ಮಂಡ್ಯ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೊಡಗು, ಕೋಲಾರ, ಚಿಕ್ಕಮಗಳೂರು, ಬೆಂಗಳೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಸಚಿವ ಶ್ರೀರಾಮುಲು ಹೇಳಿಕೆ; ಚಿತ್ರದುರ್ಗದಲ್ಲಿ ಮಾತನಾಡಿದ ಸಚಿವ ಶ್ರೀ ರಾಮುಲು, "ಜನರ ಉತ್ಸಾಹ ನೋಡಿದರೆ ಬಿಜೆಪಿಗೆ ಬಹುಮತ ಬರಲಿದೆ. 25 ಸ್ಥಾನಗಳಲ್ಲಿ 14 ಸ್ಥಾನ ಬಿಜೆಪಿ ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್ ನಾಯಕರು ಹತಾಶರಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ" ಎಂದರು.
"ಸತ್ಯಕ್ಕೆ ದೂರವಾದ ವಿಚಾರ ಮಾತನಾಡಬಾರದು. ಸುಳ್ಳನ್ನು ಸತ್ಯ ಮಾಡಲು ಕೈ ನಾಯಕರು ನಿಂತಿದ್ದಾರೆ. ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ಕುರುಡು ಕುದುರೆಗಳಿದ್ದಂತೆ. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಕುರುಡು ಕುದುರೆಗಳು ಒಬ್ಬರಿಗೊಬ್ಬರು ನೋಡಿದರೆ ಸರಿಯಾಗಲ್ಲ. ಕುರುಡು ಕುದುರೆಗಳಲ್ಲೂ ಮುಂದಿನ ಸಿಎಂ ಯಾರು? ಅಂತ ಪೈಪೋಟಿ ಇದೆ" ಎಂದು ಟೀಕಿಸಿದರು.
"2023ಕ್ಕೆ ಕಾಂಗ್ರೆಸ್ ಸರ್ಕಾರ ಅಂತ ಹೇಳಿಕೊಳ್ಳುತ್ತಿದ್ದಾರೆ. ಈ ಚುನಾವಣೆಯಲ್ಲಿ ಗೆಲ್ಲಲಿ, ಭವಿಷ್ಯದ ಚುನಾವಣೆ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ. ಬಿಜೆಪಿ ಅಭ್ಯರ್ಥಿಯಾಗಿ ಕೆ. ಎಸ್. ನವೀನ್ ನಾಮಪತ್ರ ಸಲ್ಲಿಸಿದ್ದಾರೆ. ನವೀನ್ ಎರಡು ಬಾರಿ ಸೋತಿದ್ದೂ, ಅನುಕಂಪದ ಅಲೆಯಿಂದ ಈ ಬಾರಿ ಗೆಲ್ಲುತ್ತಾರೆ" ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.