ಕಾಡುಗೊಲ್ಲರ ಅಭಿವೃದ್ಧಿ ನಿಗಮ ಯಥಾಸ್ಥಿತಿ ಇರಲಿ - ಸಚಿವ ಡಿ ಸುಧಾಕರ್
ಚಿತ್ರದುರ್ಗ, ಜುಲೈ 12: ಹಿಂದಿನ ಬಿಜೆಪಿ ಸರ್ಕಾರ ಶಿರಾ ಉಪಚುನಾವಣೆಯಲ್ಲಿ ಸಂದರ್ಭದಲ್ಲಿ ಘೋಷಿಸಿ, ಸ್ಥಾಪಿಸಿದ್ದ ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು ಬದಲಾವಣೆ ಮಾಡದಂತೆ ಯಥಾಸ್ಥಿತಿ ಮುಂದುವರಿಸುವಂತೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಸಮಾಜ ಕಲ್ಯಾಣ ಸಚಿವರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕ ರಾಜ್ಯ ಯಾದವ ಸಂಘ ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು ಬದಲಾವಣೆ ಮಾಡಿ ಗೊಲ್ಲ ಅಭಿವೃದ್ಧಿ ನಿಗಮ ಎಂದು ಸ್ಥಾಪಿಸಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕಾಡುಗೊಲ್ಲ ಸಮುದಾಯದ ಅಭಿವೃದ್ಧಿಗಾಗಿ ಸ್ಥಾಪಿಸಿರುವ ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿ ಬದಲಾವಣೆ ಮಾಡುವುದು ಸರಿಯಲ್ಲ ಎಂದು ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

ಸಚಿವ ಡಿ.ಸುಧಾಕರ್ ಅವರ ಉಸ್ತುವಾರಿ ಜಿಲ್ಲೆಯಾದ ಚಿತ್ರದುರ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಬುಡಕಟ್ಟು ಕಾಡುಗೊಲ್ಲ ಸಮುದಾಯದ ಜನಾಂಗ ಕಂಡುಬರುತ್ತದೆ. ಅದರಲ್ಲೂ ವಿಶೇಷವಾಗಿ ಹಿರಿಯೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಸುಧಾಕರ್ ಅವರನ್ನು ಕೆಲ ತಿಂಗಳ ಹಿಂದಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಡುಗೊಲ್ಲರು ಕೈ ಹಿಡಿದಿದ್ದರು. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಕಾಡುಗೊಲ್ಲರು ಇರುವುದು ಕೂಲಂಕಷವಾಗಿ ಮನಗಂಡಿರುವ ಸಚಿವರು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿರುವ ಶಿವರಾಜ್ ಎಸ್ ತಂಗಡಗಿ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಏನಿದೆ?
ಕರ್ನಾಟಕ ರಾಜ್ಯ ಸರ್ಕಾರ ಈಗಾಗಲೇ ಕಾಡುಗಲ್ಲ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು, ಪ್ರಸ್ತುತ ಇದು ಕಾರ್ಯರೂಪದಲ್ಲಿರುತ್ತದೆ. ಸದರಿ ಅಭಿವೃದ್ಧಿ ನಿಗಮ ಹೆಸರನ್ನು ಗೊಲ್ಲ ಮತ್ತು ಕಾಡು ಗೊಲ್ಲ ಅಭಿವೃದ್ಧಿ ನಿಗಮವೆಂದು ಮರು ನಾಮಕರಣ ಮಾಡಲು ಚಿಂತಿಸುತ್ತಿರುವುದಾಗಿ ತಿಳಿದು ಬಂದಿರುತ್ತದೆ. ಆದ್ದರಿಂದ ಸದರಿ ಅಭಿವೃದ್ಧಿ ನಿಗಮದ ಹೆಸರನ್ನು ಬದಲಾವಣೆ ಮಾಡದೆ, ಹಾಲಿ ಇರುವ ಕಾಡುಗೊಲ್ಲ ಅಭಿವೃದ್ಧಿ ನಿಗಮವೆಂದು ಮುಂದುವರಿಸಲು ತಮ್ಮನ್ನ ಕೋರುತ್ತೇನೆ ಎಂದು ಸಚಿವರು ತಮ್ಮ ಸಹಿ ಮಾಡಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಈ ಬಗ್ಗೆ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಸಿ ಬಾಲಕೃಷ್ಣ ಸಹ ಪತ್ರ ಬರೆದಿದ್ದಾರೆ. ಈಗಾಗಲೇ ಕಾಡುಗೊಲ್ಲ ಅಭಿವೃದ್ಧಿ ನಿಗಮನ್ನು ಸ್ಥಾಪಿಸಿದ್ದು, ಕಾರ್ಯರೂಪದಲ್ಲಿರುತ್ತದೆ. ಆದರೆ ಈಗ ಸದರಿ ಅಭಿವೃದ್ಧಿ ನಿಗಮದ ಹೆಸರನ್ನು ಗೊಲ್ಲ, ಕಾಡುಗೊಲ್ಲ ಅಭಿವೃದ್ಧಿ ನಿಗಮವೆಂದು ಮರು ನಾಮಕರಣ ಮಾಡುತ್ತಿರುವುದಾಗಿ ತಿಳಿದುಬಂದಿರುತ್ತದೆ. ಸದರಿ ಅಭಿವೃದ್ಧಿ ನಿಗಮದ ಹೆಸರನ್ನು ಬದಲಾವಣೆ ಮಾಡದೆ ಹಾಲಿ ಇರುವ ಕಾಡುಗೊಲ್ಲ ಅಭಿವೃದ್ಧಿ ನಿಗಮವೆಂದೆ ಹೆಸರನ್ನು ಮುಂದುವರೆಸಲು ಕೋರುತ್ತೇನೆ ಎಂದಿದ್ದಾರೆ.
ಒಟ್ಟಾರೆಯಾಗಿ ಗೊಲ್ಲ ಸಮುದಾಯದಲ್ಲಿ ಬರುವ ಕಾಡುಗೊಲ್ಲರು ಬುಡಕಟ್ಟು ಲಕ್ಷಣಗಳನ್ನು ಹೊಂದಿದ್ದು, ತನ್ನದೇ ಆದ ಆಚಾರ ವಿಚಾರ, ಪದ್ಧತಿಗಳನ್ನು ಅನುಸರಿಸಿಕೊಂಡು ಬಂದಿರುವ ಕಾಡುಗೊಲ್ಲರು ಪ್ರತ್ಯೇಕವಾಗಿ ಗುರುತಿಸಿಕೊಂಡಿದ್ದಾರೆ. ಅತ್ಯಂತ ಹಿಂದುಳಿದ ಜನಾಂಗದಲ್ಲಿ ಗುರುತಿಸಿಕೊಂಡಿರುವ ಕಾಡುಗೊಲ್ಲರು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿದ್ದು, ಸಮುದಾಯದ ಅಭಿವೃದ್ಧಿಗೊಸ್ಕರ ಮೀಸಲಾತಿಗಾಗಿ ದಶಕಗಳಿಂದ ಹೋರಾಟ ನಡೆಸುತ್ತಾ ಬಂದಿದ್ದಾರೆ.
ಆದರೆ ಕಾಡುಗೊಲ್ಲರನ್ನು ಯಾವುದೇ ಕಾರಣಕ್ಕೂ ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಾಡಬಾರದು, ಎಸ್ಟಿ ಮೀಸಲಾತಿ ಸಿಗಬಾರದು ಎಂದು ರಾಜ್ಯ ಯಾದವ ಸಂಘದ ಸದಸ್ಯರು, ಅದರಲ್ಲೂ ಗೋವಿಂದರಾಜು ಮತ್ತು ಮಾಜಿ ಶಾಸಕಿ ಪತಿ ಡಿ.ಟಿ ಶ್ರೀನಿವಾಸ್ ಅವರು ಕಾಡುಗೊಲ್ಲರಿಗೆ ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.












Click it and Unblock the Notifications