ಮುರುಘಾ ಮಠಕ್ಕೆ ನೂತನ ಪೀಠಾಧಿಪತಿ ನೇಮಕಕ್ಕೆ ಲಿಂಗಾಯತ ಮುಖಂಡರ ಸಭೆಯಲ್ಲಿ ನಿರ್ಣಯ
ಚಿತ್ರದುರ್ಗ, ಸೆಪ್ಟೆಂಬರ್ 29 : ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನದಲ್ಲಿ ಇರುವುದರಿಂದ ಮುರುಘಾ ಮಠದ ದೈನಂದಿನ ಧಾರ್ಮಿಕ ಕಾರ್ಯಗಳನ್ನು ಹಾಗೂ ಆಡಳಿತಾತ್ಮಕ ಚಟುವಟಿಕೆಗಳನ್ನು ಮುಂದುವರಿಸಕೊಂಡು ಹೋಗುವುದಕ್ಕೆ ನೂತನ ಸ್ವಾಮೀಜಿ ನೇಮಕ ಮಾಡುವ ಅಗತ್ಯವಿದೆ ಎಂದು ಲಿಂಗಾಯತ ಸಮಾಜದ ಕೆಲ ಮುಖಂಡರು ಸಭೆ ನಡೆಸಿ ತೀರ್ಮಾನ ಕೈಗೊಂಡಿದ್ದಾರೆ.
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಜೈಲುಪಾಲಾಗಿರುವ ಮುರುಘಾ ಮಠದ ಮುರುಘಾ ಶ್ರೀಗಳು ಪೀಠ ತ್ಯಜಿಸಲು ನಿರಾಕರಿಸುತ್ತಿದ್ದಾರೆ. ಈ ಕುರಿತಾಗಿ 'ಮುರುಘಾಮಠ ಪರಂಪರೆ ಉಳಿಸಿ' ಎಂದು ಚಿತ್ರದುರ್ಗ ನಗರದ ಹೊರವಲಯದ ಸೀಬಾರ ಬಳಿ ಇರುವ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಮಾಜಿ ಸಚಿವ ಹೆಚ್. ಏಕಾಂತಯ್ಯ ಅವರ ಅಧ್ಯಕ್ಷತೆಯಲ್ಲಿ ಲಿಂಗಾಯತ ಮುಖಂಡರು ಗುರುವಾರ ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ.
ಚೆಕ್ಗೆ ಸಹಿ: ಮುರುಘಾ ಸ್ವಾಮೀಜಿಯಿಂದ ವಿವರಣೆ ಕೇಳಿದ ಹೈಕೋರ್ಟ್
ಈ ಕುರಿತು ಮಾತನಾಡಿರುವ ಮುಖಂಡ ಸೈಟ್ ಬಾಬು ಅವರು, "ಮುರುಘಾ ಮಠದ ಪರಂಪರೆ, ಸಂಸ್ಕೃತಿ ಉಳಿಯಬೇಕಾದರೆ ಮಠಕ್ಕೆ ಹೊಸ ಸ್ವಾಮೀಜಿ ನೇಮಕ ಆಗಬೇಕು. ಇದರ ಜೊತೆಗೆ ಮಠದಲ್ಲಿ ಈಗಿರುವ ಸಮಿತಿಗಳು ರದ್ದಾಗಬೇಕು. ನಾವೆಲ್ಲಾ ಮಠಕ್ಕೆ ಹೋಗಿ ಮಠದಲ್ಲಿದ್ದವರನ್ನು ಹೊರ ಹಾಕೋಣ" ಎಂದು ಕಿಡಿಕಾರಿದ್ದಾರೆ.
ಸಭೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಎಚ್. ಏಕಾಂತಯ್ಯ ಮಾತನಾಡಿ, "ಮುರುಘಾ ಶರಣರು ಕೂಡಲೇ ಪೀಠತ್ಯಾಗ ಮಾಡಬೇಕು. ಇಲ್ಲವಾದರೆ ಅವರನ್ನು ಪೀಠದಿಂದ ವಜಾ ಮಾಡಬೇಕು. ಈ ಕುರಿತು ರಾಜ್ಯ ಸರಕಾರ ಮಧ್ಯಪ್ರವೇಶ ಮಾಡಬೇಕು," ಎಂದು ಆಗ್ರಹಿಸಿದರು.
ಇದೊಂದು ಸಂದಿಗ್ಧ ಸ್ಥಿತಿ. ಶಿವಮೂರ್ತಿ ಮುರುಘಾ ಶರಣರು ಸೆಪ್ಟೆಂಬರ್ 1ರಿಂದ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇದರಿಂದ ಮಠದ ದೈನಂದಿನ ಚಟುವಟಿಕೆಗೆ ತೊಂದರೆ ಉಂಟಾಗಿದೆ. ಮಠ ಹಾಗೂ ಮುರುಘಾ ಪರಂಪರೆಯ ಉಳಿವಿಗೆ ಹೊಸ ಪೀಠಾಧ್ಯಕ್ಷರ ಅಗತ್ಯವಿದೆ. ಕಾನೂನಾತ್ಮಕ ಹೋರಾಟ ನಡೆಸಲು ಸಿದ್ದರಾಗಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶ್ರೀಗಳು ಲಿಂಗಾಯತರ ಗೌರವ ಕಳೆದಿದ್ದಾರೆ. ಇಂತಹವರ ಹೆಸರು ಬಳಸಬಾರದು. ಮೆಡಿಕಲ್, ಇಂಜಿನಿಯರಿಂಗ್ ಕಾಲೇಜಿನಲ್ಲಿರುವ ಪೋಟೋ ತೆಗೆದುಹಾಕುವಂತೆ ಸಭೆಯಲ್ಲಿ ಆಗ್ರಹ ವ್ಯಕ್ತಪಡಿಸಲಾಗಿದೆ. ಈ ಸಂದರ್ಭದಲ್ಲಿ ನೂರಾರು ವೀರಶೈವ ಸಮುದಾಯದ ಮುಖಂಡರು ಭಾಗವಹಿಸಿದ್ದರು.