ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಮಾದಾರ ಚನ್ನಯ್ಯ ಸ್ವಾಮೀಜಿ?
ಚಿತ್ರದುರ್ಗ, ಆಗಸ್ಟ್ 30 : ಮಾದರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಮುಂದಿನ ವಿಧಾನಸಭೆ ಅಥವ ಲೋಕಸಭೆ ಚುನಾವಣೆಗೆ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸ್ವಾಮೀಜಿಗೆ ಕೋರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಯಡಿಯೂರಪ್ಪ ನಿವಾಸದಲ್ಲಿ ಸೋಮವಾರ ದಲಿತ ಕುಟುಂಬಗಳಿಗೆ ಔತಣ ಏರ್ಪಡಿಸಲಾಗಿತ್ತು. ಆಗ ಸ್ವಾಮೀಜಿಯವರು ಉಪಸ್ಥಿತರಿದ್ದರು.

ಮಾದಾರ ಚನ್ನಯ್ಯ ಸ್ವಾಮೀಜಿ ಒಪ್ಪಿಗೆ ನೀಡಿದರೆ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರ ಕ್ಷೇತ್ರವಾದ ಹೊಳಲ್ಕೆರೆ ಕ್ಷೇತ್ರದಿಂದ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದಾಗಿದೆ. ಇಲ್ಲವೇ 2019ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.
ಕರ್ನಾಟಕ ಬಿಜೆಪಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹಲವು ಹೊಸ ಮುಖಗಳಿಗೆ ಟಿಕೆಟ್ ಕೊಡಲು ತಂತ್ರ ರೂಪಿಸಿದೆ. ಇದರ ಭಾಗವಾಗಿಯೇ ಸ್ವಾಮೀಜಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಮಾದರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸೋಮವಾರ ಬೆಂಗಳೂರಿಗೆ ತೆರಳಿದ್ದರು. ಆದರೆ, ಅವರು ಬಿಜೆಪಿ ಸೇರುವ ಕುರಿತು, ಚುನಾವಣೆಗೆ ಸ್ಪರ್ಧಿಸುವ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.












Click it and Unblock the Notifications