ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ
ಚಿತ್ರದುರ್ಗ, ಮೇ 16: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಆಯ್ಕೆ ಚರ್ಚೆ ಜೋರಾಗಿದೆ. ಇತ್ತ ಕೋಟೆ ನಾಡು ಚಿತ್ರದುರ್ಗದ ನೂತನ ಶಾಸಕರೊಬ್ಬರು, ಆಯ್ಕೆಗೊಂಡ ಮೂರು ದಿನಗಳ ಬೆನ್ನಲ್ಲೇ ದಿಢೀರ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೂತನವಾಗಿ ಆಯ್ಕೆಯಾಗಿರುವ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಚಿತ್ರಣವನ್ನು ಸೂಕ್ಷ್ಮವಾಗಿ ಗಮನಿಸಿದ್ದಾರೆ. ಆಸ್ಪತ್ರೆಯ ಏಡ್ಸ್ ಚಿಕಿತ್ಸಾ ವಿಭಾಗ, ಹೆರಿಗೆ ವಿಭಾಗ, ಅಪರೇಷನ್ ವಿಭಾಗ ಸೇರಿದಂತೆ ವಿವಿಧ ವಾರ್ಡ್ ಗಳಿಗೆ ಭೇಟಿ ನೀಡಿದರು.

ಯಾವ ಯಾವ ವಿಭಾಗದಲ್ಲಿ ಎಷ್ಟೆಷ್ಟು ರೋಗಿಗಳಿದ್ದಾರೆ ಎಂಬುದನ್ನು ತಿಳಿದುಕೊಂಡು, ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಉತ್ತಮ ಚಿಕಿತ್ಸೆ ನೀಡಲು ಸೂಚಿಸಿದರು. ಇದಲ್ಲದೆ ಆಸ್ಪತ್ರೆಯಲ್ಲಿ ಸಿಬ್ಬಂದಿ ಮತ್ತು ಡಾಕ್ಟರ್ಗಳು ಹೇಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎನ್ನುವುದರ ಬಗ್ಗೆ ಮಾಹಿತಿ ಪಡೆದುಕೊಂಡರು.
ಅಲ್ಲದೇ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಶೌಚಾಲಯ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವಂತೆ ಆಸ್ಪತ್ರೆ ಸಿಬ್ಬಂದಿಗೆ ತಿಳಿಸಿದರು. ನಂತರ ವಾರ್ಡ್ಗಳಲ್ಲಿನ ರೋಗಿಗಳ ಬಳಿ ಹೋಗಿ ಆರೋಗ್ಯವನ್ನು ವಿಚಾರಿಸಿದ್ದಾರೆ. ಸೂಕ್ತ ಸಮಯದಲ್ಲಿ ನಿಮಗೆ ಚಿಕಿತ್ಸೆ ಸಿಗುತ್ತದೆಯೇ ಹೇಗೆ ಎಂದು ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ರೋಗಿಗಳ ಜೊತೆ ಚರ್ಚಿಸಿದರು.

ಒಟ್ಟಾರೆಯಾಗಿ ನೂತನವಾಗಿ ಆಯ್ಕೆಯಾಗಿರುವ ಕೆಲವು ಶಾಸಕರು ಸಚಿವ ಸ್ಥಾನದ ಲಾಬಿಗಾಗಿ ಕಸರತ್ತು ನಡೆಸುತ್ತಿದ್ದರೆ ಚಿತ್ರದುರ್ಗದ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಜನಸೇವೆಯೇ ನನ್ನ ಗುರಿ ಎಂದುಕೊಂಡು ಕ್ಷೇತ್ರದಲ್ಲಿರುವ ಸುತ್ತಾಟ ನಡೆಸಿ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿದ್ದಾರೆ ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.
ಇತ್ತೀಚೆಗಷ್ಟೇ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಕೆ.ಸಿ ವೀರೇಂದ್ರ ಪಪ್ಪಿ ಅವರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಜಿಹೆಚ್ ತಿಪ್ಪಾರೆಡ್ಡಿ ಅವರ ವಿರುದ್ಧ ಸುಮಾರು 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಸೋತಿದ್ದ ಪಪ್ಪಿ ಈ ಬಾರಿ ಕಾಂಗ್ರೆಸ್ ನಿಂದ ಜಯಗಳಿಸಿದ್ದಾರೆ.












Click it and Unblock the Notifications