ಸರ್ಕಾರದ ಬಗ್ಗೆ ಅಸಮಾಧಾನ ಹೊರಹಾಕಿದ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ
ಚಿತ್ರದುರ್ಗ, ಮೇ 29: ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಕೆಲವು ಶಾಸಕರಲ್ಲಿ ಅಸಮಾಧಾನ ಇರುವುದಾಗಿ ಪಕ್ಷದ ಹಿರಿಯ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅವರು ಒಪ್ಪಿಕೊಂಡಿದ್ದಾರೆ.
ಚಿತ್ರದುರ್ಗದಲ್ಲಿ ಈ ಕುರಿತು ಇಂದು ಮಾತನಾಡಿದ ಅವರು, "ನನ್ನನ್ನೂ ಸೇರಿಸಿದಂತೆ ಹಲವು ಶಾಸಕರಿಗೆ ಅಸಮಾಧಾನ ಆಗಿರುವುದು ಸತ್ಯ. ಪಕ್ಷದ ಹೈಕಮಾಂಡ್ ಅಸಮಾಧಾನವನ್ನು ಸರಿಪಡಿಸುವ ಅಗತ್ಯವಿದೆ. ಹೈಕಮಾಂಡ್ ತೀರ್ಮಾನವನ್ನು ಎದುರು ನೋಡುತ್ತಿದ್ದೇವೆ" ಎಂದಿದ್ದಾರೆ. ಸರ್ಕಾರದ ಕಾರ್ಯವೈಖರಿ ಹೀಗೇ ಮುಂದುವರೆದರೆ ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಅನುಮಾನ. ಸರ್ಕಾರದಿಂದ ಯಾವುದೇ ಜಿಲ್ಲೆಗಳ ಅಭಿವೃದ್ಧಿ ಆಗುತ್ತಿಲ್ಲ, ಹಿಂದುಳಿದ ಜಿಲ್ಲೆ ಚಿತ್ರದುರ್ಗಕ್ಕೆ ಅನ್ಯಾಯ ಆಗಿದೆ. ಭದ್ರಾ ಮೇಲ್ದಂಡೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಬಜೆಟ್ ನಲ್ಲಿ ಚಿತ್ರದುರ್ಗ ಜಿಲ್ಲೆಗೆ ಯಾವುದೇ ಅನುದಾನ ಮೀಸಲಿಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕಠಿಣ ಪರಿಸ್ಥಿತಿ ಎದುರಿಸಲು ಸಜ್ಜಾಗಿ: ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ
"ಪಕ್ಷದಲ್ಲಿ ಹಿರಿಯ ಶಾಸಕರನ್ನು ಕಡೆಗಣಿಸಲಾಗುತ್ತಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೆ ಸಚಿವರಾಗಿದ್ದವರೇ ಸಚಿವರಾಗುತ್ತಿದ್ದಾರೆ. ಅವರನ್ನು ಕೈಬಿಟ್ಟು ಐದಾರು ಬಾರಿ ಗೆದ್ದಿರುವ ಹಿರಿಯ ಶಾಸಕರಿಗೆ ಅವಕಾಶ ನೀಡಬೇಕು" ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಬಗ್ಗೆ ಕೂಡ ಬೇಸರ ವ್ಯಕ್ತಪಡಿಸಿರುವ ತಿಪ್ಪಾರೆಡ್ಡಿ, ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಹೊರಗಿನವರೇ ಈ ಜಿಲ್ಲೆಗೆ ಸಚಿವರಾಗಿ ಬರುತ್ತಾರೆ. ಆರು ತಿಂಗಳಿಗೆ ಒಮ್ಮೆ ಬಂದು ಹೋಗುವ ಉಸ್ತುವಾರಿ ಮಂತ್ರಿಗಳು ಕೇವಲ ಆಗಸ್ಟ್ 15, ಜನವರಿ 26ರಂದು ಬಾವುಟ ಹಾರಿಸುವುದಕ್ಕೇ ಸೀಮಿತರಾಗಿದ್ದಾರೆ. ನಮ್ಮ ಜಿಲ್ಲೆಯವರೇ ಮಂತ್ರಿಯಾದರೆ ಜಿಲ್ಲೆಯನ್ನು ಅಭಿವೃದ್ಧಿ ಮಾಡಲು ಸಾಧ್ಯ, ಹೀಗಾಗಿ ಪಕ್ಷದ ಹಿರಿಯ ಮುಖಂಡರು ಅಸಮಾಧಾನ ಸರಿಪಡಿಸದಿದ್ದರೆ ವ್ಯತಿರಿಕ್ತ ಪರಿಣಾಮ ಆಗಬಹುದು" ಎಂದು ಹೇಳಿದ್ದಾರೆ.