ಚಿತ್ರದುರ್ಗ:ಕಟ್ಟಡ ಕಾರ್ಮಿಕರ ಆರೋಗ್ಯ ಸೇವೆಗೆ ಸಂಚಾರಿ ಆರೋಗ್ಯ ಕ್ಲಿನಿಕ್
ಚಿತ್ರದುರ್ಗ,ಜು4 : ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಬಿತರ ಆರೋಗ್ಯ ಸೇವೆಗೆ ಸಂಚಾರಿ ಆರೋಗ್ಯ ಕ್ಲಿನಿಕ್ ಅತ್ಯಾಧುನಿಕ ಸವಲತ್ತುಗಳನ್ನು ಹೊಂದಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕಾರ್ಮಿಕರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಶ್ರಮಿಕ್ ಸಂಜೀವಿನಿ-ಸಂಚಾರಿ ಆರೋಗ್ಯ ಕ್ಲಿನಿಕ್ ಸೇವೆಯ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ವಿಡಿಯೋ; ಚಿತ್ರದುರ್ಗದಲ್ಲಿ ಚಾಲಕ ರಹಿತ ಯುದ್ಧ ವಿಮಾನದ ಹಾರಾಟ
ಸಂಚಾರಿ ಆರೋಗ್ಯ ಕ್ಲಿನಿಕ್ ಅತ್ಯಾಧುನಿಕ ಸವಲತ್ತುಗಳನ್ನು ಹೊಂದಿದೆ. ಆಧುನಿಕ ಸ್ಟ್ರೆಚ್ಚರ್, ಬೆಡ್, ಆಕ್ಸಿಜನ್ ಪರಿಕರಗಳು, ವ್ಹೀಲ್ ಚೇರ್, ಪ್ರಯೋಗಾಲಯ ಸಲಕರಣೆಗಳು, ಸಿಬ್ಬಂದಿಗೆ ಆಸನದ ವ್ಯವಸ್ಥೆ, ಅವಶ್ಯಕ ವೈದ್ಯಕೀಯ ಪರಿಕರಗಳನ್ನು ಹೊಂದಿದೆ. ಈ ವಾಹನದಲ್ಲಿ ಓರ್ವ ವೈದ್ಯ, ನರ್ಸ್, ಫಾರ್ಮಸಿಸ್ಟ್, ಲ್ಯಾಬ್ ಟೆಕ್ನಿಷಿಯನ್, ಎಎನ್ಎಮ್, ಚಾಲಕ ಮತ್ತು ಸಹಾಯಕ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಕಟ್ಟಡ ಕಾರ್ಮಿಕರ ಆರೋಗ್ಯ ಕಾಳಜಿಗೆ ಹೆಚ್ಚಿನ ಆದ್ಯತೆ
ಕಟ್ಟಡ ಕಾರ್ಮಿಕರ ಜೀವನ ಸುಧಾರಣೆಗೆ ಅನುಕೂಲವಾಗುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಹತ್ತು ಹಲವು ಯೋಜನೆಗಳನ್ನು ಜಾರಿ ಮಾಡಲಾಗಿದ್ದು, ಅದರಂತೆ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಜೊತೆಗೆ ಅವರಿದ್ದಲ್ಲಿಗೇ ಚಿಕಿತ್ಸಾಲಯವನ್ನು ಕೊಂಡೊಯ್ಯುವ ಮಹತ್ವಕಾಂಕ್ಷಿ ಯೋಜನೆ ಇದಾಗಿದ್ದು, ಕಟ್ಟಡ ಕಾರ್ಮಿಕರ ಆರೋಗ್ಯ ಕಾಳಜಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು. ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನವು ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ 17 ಗ್ರಾಮಗಳಿಗೆ ಕಾರ್ಮಿಕರು ಇರುವಲ್ಲಿಗೆಯೇ ಈ ವಾಹನವು ತೆರಳಿ, ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ನೀಡುವ ಮೂಲಕ ಕಾರ್ಮಿಕರ ಹಿತ ರಕ್ಷಣೆಗೆ ಸರ್ಕಾರವು ಬದ್ಧವಾಗಿದೆ ಎಂದು ತಿಳಿಸಿದರು.
ನಿಗಧಿತ ಪ್ರದೇಶಗಳಿಗೆ ಸಂಚಾರಿ ಕ್ಲಿನಿಕ್
"ಸೋಮವಾರದಿಂದ ಶನಿವಾರದವರೆಗೆ ನಿಗದಿತ ಅವಧಿಯಲ್ಲಿ ನಿಗದಿತ ಪ್ರದೇಶಗಳಿಗೆ ಸಂಚಾರಿ ಕ್ಲಿನಿಕ್ ಜಿಲ್ಲೆಯಲ್ಲಿ ಎರಡು ವರ್ಷಗಳ ಕಾಲ ಭೇಟಿ ನೀಡಲಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ ಸೋಮವಾರ ಬೆಳಗ್ಗೆ ಹೊಸ ಕಲ್ಲಹಳ್ಳಿ, ಹಳೇಕಲ್ಲಹಳ್ಳಿ, ಮಧ್ಯಾಹ್ನ ಲಿಂಗಾವರಹಟ್ಟಿ, ಮಂಗಳವಾರ ಬೆಳಿಗ್ಗೆ ಕಾಸವರಹಟ್ಟಿ, ಮಧ್ಯಾಹ್ನ ಗುಡ್ಡದರಂಗವ್ವನಹಳ್ಳಿ, ಬುಧವಾರ ಬೆಳಿಗ್ಗೆ ಮಲ್ಲಾಪುರ, ದ್ಯಾಮವ್ವನಹಳ್ಳಿ, ಮಧ್ಯಾಹ್ನ ಮದಕರಿಪುರ, ಗುರುವಾರ ಬೆಳಿಗ್ಗೆ ಬಚ್ಚಬೋರನಹಟ್ಟಿ, ಮಧ್ಯಾಹ್ನ ಮಠದಹಟ್ಟಿ, ಕಾವಡಿಗರಹಟ್ಟಿ, ಶುಕ್ರವಾರ ಬೆಳಿಗ್ಗೆ ಇಂಗಳದಾಳ್, ಕ್ಯಾದಿಗೆರೆ, ಮಧ್ಯಾಹ್ನ ದೊಡ್ಡಸಿದ್ದವ್ವನಹಳ್ಳಿ, ಶನಿವಾರ ಬೆಳಗ್ಗೆ ಜಾನುಕೊಂಡ, ಸಿದ್ದಾಪುರ, ಮಧ್ಯಾಹ್ನ ದಂಡಿನಕುರುಬರಹಟ್ಟಿ ಗ್ರಾಮಗಳಿಗೆ ಭೇಟಿ ನೀಡಲಿದೆ ಎಂದರು".