Muda Scam: ಸರ್ಕಾರ ದಬಾಕಿಕೊಳ್ಳುವ ಲಕ್ಷಣಗಳು ಎದ್ದು ಕಾಣುತ್ತಿದೆ: ಸಂಸದ
ಹಿರಿಯೂರು, ಆಗಸ್ಟ್, 17: ಇದೀಗ ರಾಜ್ಯದಲ್ಲಿ ಮುಡಾ ಪ್ರಕರಣದ ಭಾರೀ ಸದ್ದು ಮಾಡುತ್ತಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಇಂದು (ಆಗಸ್ಟ್ 17) ಚಿತ್ರದುರ್ಗದಲ್ಲಿ ಆಗ್ರಹಿಸಿದರು. ಅಲ್ಲದೆ ಇದೇ ವೇಳೆ ಸರ್ಕಾರದ ಅಧಿಕಾರದ ಬಗ್ಗೆಯೂ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಬಂದಾಗಿನಿಂದಲೂ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಬರೀ ಭ್ರಷ್ಟಾಚಾರದಲ್ಲೇ ಮುಳುಗಿದ್ದಾರೆ. ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣಗಳಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಆರೋಪಿಸಿದರು.

ಭೂ ಸ್ವಾಧೀನ ಮಾಡಿಕೊಂಡು ಪರಿಹಾರ ನೀಡಿದ ಮೇಲೂ ಡಿ ನೋಟಿಫಿಕೇಶನ್ ಆಗುವುದಾದರೂ ಹೇಗೆ? ಕೆಲವರಿಗೆ ಸೈಟ್ ಹಂಚಿಕೆಯಾದ ಮೇಲೆ ಮೊದಲು ಅಳಿಯನ ಹೆಸರಿಗೆ, ನಂತರ ಹೆಂಡತಿಗೆ ದಾನ ಪತ್ರ ಮಾಡಲಾಗಿದೆ. 2013ರಿಂದ 2018ರ ವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆದಾಗ ನಡೆದ ಹಗರಣಗಳ ಮುಚ್ಚಿಹಾಕಲು ಲೋಕಾಯುಕ್ತ ಅಧಿಕಾರ ಮೊಟಕುಗೊಳಿಸಿ ಎಸಿಬಿ ತಂದರು ಎಂದು ಆರೋಪ ಮಾಡಿದರು.
ಇದೀಗ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ಕೊಟ್ಟಮೇಲೆ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಇದು ನ್ಯಾಯ ಸಮ್ಮತವಲ್ಲ. ಅವರು ತಮ್ಮದು ಸ್ವಚ್ಛ ರಾಜಕಾರಣ ಎನ್ನುವುದಾದರೆ, ಮೊದಲು ರಾಜೀನಾಮೆ ಕೊಡಲಿ. ಯಡಿಯೂರಪ್ಪನವರ ಮೇಲೆ ಆರೋಪ ಬಂದಾಗ ರಾಜೀನಾಮೆಗೆ ಒತ್ತಾಯಿಸಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡಲಿ. ಸ್ವಯಂಕೃತ ಅಪರಾಧದಿಂದ ಸರ್ಕಾರ ಹೋಗುವ ಲಕ್ಷಣಗಳಿವೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಜಯಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎನ್.ಹನುಮಂತರಾಯಪ್ಪ, ಕೆ.ಚಿದಾನಂದ, ಹೆಗ್ಗೆರೆ ಮಂಜುನಾಥ್, ರಾಜೇಂದ್ರ ಮುಂತಾದವರು ಹಾಜರಿದ್ದರು.
ರಾಜ್ಯಪಾಲರ ವಿರುದ್ಧ ಪಂಜಿನ ಮೆರವಣಿಗೆ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಹಿನ್ನೆಲೆ ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು.
ಮೈಸೂರು- ಊಟಿ ಹೆದ್ದಾರಿ, ಚಾಮರಾಜನಗರದ ರಸ್ತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ರಾಜ್ಯಪಾಲರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಸಿಎಂ ಸಿದ್ದರಾಮಯ್ಯಗೆ ಜೈಕಾರ ಹಾಕುತ್ತಾ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಕೂಡಲೇ ರಾಜ್ಯಪಾಲರನ್ನು ವಜಾ ಮಾಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.












Click it and Unblock the Notifications