ವಿನಯ್ ಕುಲಕರ್ಣಿ ವಿಚಾರಣೆ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ
ಚಿತ್ರದುರ್ಗ, ನವೆಂಬರ್ 05: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣವನ್ನು ಮತ್ತೆ ಮುನ್ನೆಲೆಗೆ ತಂದಿರುರುವುದೇ ರಾಜಕೀಯ ಪ್ರೇರಿತ ಎಂದು ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ವಿನಯ್ ಕುಲಕರ್ಣಿ ಜೊತೆ ನಾನೂ ಮಾತನಾಡಿದ್ದೇನೆ. ವಿನಯ್ ಕುಲಕರ್ಣಿ ನಾನು ಏನೂ ತಪ್ಪು ಮಾಡಿಲ್ಲ ಎಂದು ನನ್ನ ಬಳಿ ಹೇಳಿದ್ದಾನೆ. ಈಗ ವಿಚಾರಣೆ ಹಂತದಲ್ಲಿರುವಾಗ ನಾನು ಏನೂ ಹೇಳುವುದಿಲ್ಲ" ಎಂದು ಪ್ರತಿಕ್ರಿಯಿಸಿದರು.
ಇದೇ ಸಂದರ್ಭ ಗ್ರಾ.ಪಂ ಚುನಾವಣೆ ಕುರಿತು ಮಾತನಾಡಿ, ಕೊರೊನಾಗೆ ಲಸಿಕೆ ಬರುವ ತನಕ ಗ್ರಾ.ಪಂ ಚುನಾವಣೆ ಅಗತ್ಯವಿಲ್ಲ. ಶಾಲೆಗಳನ್ನು ಪುನರಾರಂಭ ಮಾಡುವುದೂ ಸೂಕ್ತವಲ್ಲ, ಬದಲಾಗಿ ಎಲ್ಲಾ ವಿದ್ಯಾರ್ಥಿಗಳನ್ನು ಈ ಬಾರಿ ಪಾಸ್ ಮಾಡಬೇಕು ಎಂದರು. ವಿದ್ಯುತ್ ದರ ಏರಿಕೆ ಕುರಿತು ಮಾತನಾಡಿದ ಅವರು, ಈ ಕೊರೊನಾ ಸಂಕಷ್ಟದ ಕಾಲದಲ್ಲಿ ವಿದ್ಯುತ್ ದರ ಏರಿಕೆ ಮಾಡಿರುವುದು ಸರಿಯಲ್ಲ ಎಂದರು.

ರಾಜ್ಯದ ಹಣಕಾಸು ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಅಧಿಕಾರಿಗಳಿಗೆ ಸಂಬಳ ಕೊಡಲು ಸರ್ಕಾರದಲ್ಲಿ ಹಣವಿಲ್ಲ ಎಂದು ಹೇಳಿದರು. ಇನ್ನು, ಉಪಚುನಾವಣೆಯಲ್ಲಿ ಹಣ ಖರ್ಚು ಮಾಡದೆ ಗೆಲುವಿನ ಸಮೀಪ ಬಂದಿದ್ದೇವೆ ಎಂಬ ಎಚ್.ಡಿ.ಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಎಚ್.ಡಿ. ಕುಮಾರಸ್ವಾಮಿ ಅವರು ಯಾವಾಗಲೂ ಸತ್ಯಹರಿಶ್ಚಂದ್ರ, ಅವರ ಬಗ್ಗೆ ಮಾತನಾಡುವುದಿಲ್ಲ ಎಂದಷ್ಟೇ ಹೇಳಿದರು.












Click it and Unblock the Notifications