ಎತ್ತಿನಹೊಳೆ ಯೋಜನೆಯಿಂದ ವಿವಿ ಸಾಗರಕ್ಕೆ ನೀರು: ರಮೇಶ್ ಜಾರಕಿಹೊಳಿ
ಚಿತ್ರದುರ್ಗ, ಮೇ 12: ಬರದ ನಾಡು ಚಿತ್ರದುರ್ಗ ಜಿಲ್ಲೆಯ ಜಲದಾಹ ತೀರಿಸುವ ಉದ್ದೇಶದಿಂದಾಗಿ ಎತ್ತಿನಹೊಳೆ ಯೋಜನೆಯಿಂದ ನೀರು ಒದಗಿಸುವ ಸಂಕಲ್ಪ ಹೊಂದಲಾಗಿದೆ. ಈ ಕುರಿತು ಈಗಾಗಲೇ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಎತ್ತಿನಹೊಳೆ ಯೋಜನೆಯಿಂದಲೂ ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಜಲಾಯಶಕ್ಕೆ ನೀರು ಸಿಗಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.
ಇಂದು ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದ ಅವರು, "ಚಿತ್ರದುರ್ಗ ಶಾಖಾ ಕಾಲುವೆಯು ಭದ್ರಾ ಮೇಲ್ದಂಡೆ ಯೋಜನೆಯ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಈ ಕಾಲುವೆಯು ಅಜ್ಜಂಪುರದ ಬಳಿಯ ಉದ್ದೇಶಿತ ಸುರಂಗ ಮಾರ್ಗದ ನಂತರ ಪ್ರಾರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ಮತ್ತು ತರೀಕೆರೆ ತಾಲ್ಲೂಕುಗಳಲ್ಲಿ, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಹಿರಿಯೂರು, ಚಿತ್ರದುರ್ಗ ಮತ್ತು ಚಳ್ಳಕೆರೆ ತಾಲ್ಲೂಕುಗಳಲ್ಲಿ ಮತ್ತು ದಾವಣಗೆರೆ ಜಿಲ್ಲೆಯ ಜಗಳೂರಿನ ಮುಖಾಂತರ ಅಂದಾಜು 135.00 ಕಿ.ಮೀ ದೂರ ಹಾದು ಹೋಗಿದೆ. ಸುಮಾರು 1,25,465 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವನ್ನು ಹೊಂದಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಅಚ್ಚುಕಟ್ಟು ಪ್ರದೇಶದ 37 ಕೆರೆಗಳನ್ನು ತುಂಬಿಸಲು ಯೋಜಿಸಲಾಗಿದೆ" ಎಂದು ಹೇಳಿದರು.
ಸಚಿವ ರಮೇಶ್ ಜಾರಕಿಹೊಳಿಗೆ ಘೇರಾವ್ ಹಾಕಿದ ಹೆಬ್ಬೂರು ಗ್ರಾಮಸ್ಥರು
ಚಿತ್ರದುರ್ಗ ಶಾಖಾ ಕಾಲುವೆಯ ಕಿ.ಮೀ 61.230 ರಿಂದ 90.000 ವರೆಗೆ ಪಂಕ್ತಿಕರಣಕ್ಕೆ ಅನುಮೋದನೆ ನೀಡಲಾಗಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ವಿಭಾಗದ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗ ಶಾಖಾ ಕಾಲುವೆಯ ಕಿ.ಮೀ 61.230 ರಿಂದ 67.230 ರಿಂದ 67.416 ಕಿ.ಮೀ ವರೆಗೆ ದೊಡ್ಡಕಿಟ್ಟದಹಳ್ಳಿ, ಕೆಂಚೇನಹಳ್ಳಿ, ನಾಕೀಕೆರೆ ಗ್ರಾಮಗಳ ಮೂಲಕ ಕಿ.ಮೀ 67.419 ರಿಂದ 73.375 ವರೆಗೆ ಬೂದಿಪುರ, ಮಾಳಗೇರನಹಳ್ಳಿ, ಗೂಳಿಹೊಸಹಳ್ಳಿ, ಶಂಕರನಹಳ್ಳಿ, ಕಿ.ಮೀ 73.375 ರಿಂದ 81.ದದ820 ಕಿ.ಮೀ ವರೆಗೆ ಲಕ್ಕಿಹಳ್ಳಿ ಕಾಯ್ದಿರಿಸಿದ ಅರಣ್ಯ ಪ್ರದೇಶ ಹಾಗೂ ಹಿರಿಯೂರು ತಾಲ್ಲೂಕಿನ ಕಿ.ಮೀ 81.920 ರಿಂದ 90.00 ಕಿ.ಮೀ ವರೆಗೆ ಗೋಗುದ್ದು, ಕೊಳಾಳು ಮತ್ತು ಭರಂಪುರ ಗ್ರಾಮಗಳ ಜಮೀನುಗಳಲ್ಲಿ ಕಾಲುವೆಯು ಹಾದು ಹೋಗುತ್ತದೆ.
ಈ ಸಂದರ್ಭದಲ್ಲಿ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಹೊಸದುರ್ಗ ಶಾಸಕ ಗೂಳಿಹಟ್ಟಿ ಡಿ.ಶೇಖರ್ ಹಾಗೂ ವಿಶ್ವೇಶ್ವರಯ್ಯ ಜಲ ನಿಮಗದ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ರಾವ್ ಪೇಶ್ವೆ, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ರಾಘವನ್, ಅಧೀಕ್ಷಕ ಇಂಜಿನಿಯರ್ ವೇಣುಗೋಪಾಲ್, ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಹಾಸ್ ಇತರೆ ಅಧಿಕಾರಿಗಳು ಇದ್ದರು.