Breaking: ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಮುರುಘಾ ಶ್ರೀ ಶಿಫ್ಟ್
ಚಿತ್ರದುರ್ಗ, ಸೆಪ್ಟೆಂಬರ್ 2: ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಶರಣರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡುವುದಕ್ಕೆ ನಿರ್ಧರಿಸಲಾಗಿದೆ ಎಂದು ಜಿಲ್ಲಾ ಸರ್ಜನ್ ಡಾ. ಬಸವರಾಜ್ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಶಿವಮೂರ್ತಿ ಶರಣರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರ ತಂಡವು, ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗುತ್ತಿರುವುದನ್ನು ಗಮನಿಸಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಮಾಹಿತಿ ನೀಡಿದರು.
Breaking: ಚಿತ್ರದುರ್ಗ ಮುರುಘಾ ಶರಣರಿಗೆ 14 ದಿನ ನ್ಯಾಯಾಂಗ ಬಂಧನ
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಶ್ರೀಗಳ ಆರೋಗ್ಯದಲ್ಲಿ ಹೆಚ್ಚು ಏರುಪೇರು ಉಂಟಾಗಿದ್ದು ಅವರನ್ನು ರಸ್ತೆ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತದೆ ಎಂದು ಹೇಳಿದರು.
ಶಿವಮೂರ್ತಿ ಶರಣರಿಗೆ ಎದೆನೋವು:
ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಶುಕ್ರವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿತು. ಎದೆ ನೋವಿನಿಂದ ಬಳಲುತ್ತಿದ್ದ ಶ್ರೀಗಳಿಗೆ ಬೆಳಿಗ್ಗೆಯಿಂದಲೇ ಚಿಕಿತ್ಸೆ ನೀಡಲಾಗಿದ್ದು, ಅದರಲ್ಲಿ ಹೃದಯರೋಗ ಇರುವುದು ಹಾಗೂ ರಕ್ತದೊತ್ತಡ ಹೆಚ್ಚು ಇರುವುದರಿಂದ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಬೇಕಾಗಿದೆ. ದಾವಣಗೆರೆ ನಾರಾಯಣ ಹೃದಯದ ವೈದ್ಯರು ಬಂದು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸಲಹೆ ನೀಡಿದ್ದಾರೆ. ಆದರೆ ಏರ್ ಲಿಫ್ಟ್ ಮೂಲಕ ಶ್ರೀಗಳನ್ನು ಶಿಫ್ಟ್ ಮಾಡಲು ಸಾಧ್ಯವಿಲ್ಲ, ಹೀಗಾಗಿ ರಸ್ತೆ ಮಾರ್ಗದ ಮೂಲಕವೇ ಸ್ಥಳಾಂತರ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಚಿತ್ರದುರ್ಗ ಆಸ್ಪತ್ರೆಗೆ ಶ್ರೀ ದಾಖಲು:
ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ಎಲ್ಲ ರೀತಿಯ ಆರೋಗ್ಯ ಪರೀಕ್ಷೆ ವೇಳೆ ಅವರ ಆರೋಗ್ಯದಲ್ಲಿ ಏರುಪೇರು ಆಗುತ್ತಿರುವುದು ಕಂಡು ಬಂತು. ತದನಂತರದಲ್ಲಿ ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆಯನ್ನೂ ನೀಡಲಾಯಿತು.
ಪೋಕ್ಸೋ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಗುರುವಾರವಷ್ಟೇ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಜೈಲು ಸೇರಿದ ಶ್ರೀಗಳಿಗೆ ಕೈದಿ ಸಂಖ್ಯೆ 2261 ಅನ್ನು ನೀಡಲಾಗಿತ್ತು. ಇದರ ಮಧ್ಯೆ ಶುಕ್ರವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದೆ.
ಮುರುಘಾ ಶರಣರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನೆಲೆ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಶುಕ್ರವಾರ ಬೆಳಗ್ಗೆ 9.10 ಗಂಟೆಗೆ ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.