ಹಿರಿಯೂರು ಬಿಜೆಪಿ ಶಾಸಕಿ ಕಾರು ಚಾಲಕ ಬಂಧನ, ಕಾರು ವಶಕ್ಕೆ
ಚಿತ್ರದುರ್ಗ, ಫೆಬ್ರವರಿ 22 : ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ಶಾಸಕರ ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದರು.
ಶುಕ್ರವಾರ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಠಾಣೆ ಪೊಲೀಸರು ಶಾಸಕಿ ಕಾರು ಚಾಲಕ ಮಲ್ಲಿಕಾರ್ಜುನ್ ಎಂಬಾತನನ್ನು ಬಂಧಿಸಿದ್ದು, ಶಾಸಕಿಯ ಟೊಯೋಟಾ ಫಾರ್ಚೂನರ್ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಗುರುವಾರ ಹಿರಿಯೂರಿನ ಪ್ರವಾಸಿ ಮಂದಿರದಲ್ಲಿ ಶಾಸಕಿಯ ಕಾರು ಅಬ್ದುಲ್ ರೆಹಮಾನ್ ಎಂಬುವವರಿಗೆ ಗುದ್ದಿತ್ತು. ಈ ಕುರಿತು ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಬಂಧಿಸಲಾಗಿದೆ.
ಗುರುವಾರ ಮಧ್ಯಾಹ್ನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರನ್ನು ಪ್ರವಾಸಿ ಮಂದಿರಕ್ಕೆ ಬಿಟ್ಟು ಕಾರನ್ನು ರಿವರ್ಸ್ ತೆಗೆದುಕೊಳ್ಳುವಾಗ ಅಬ್ದುಲ್ ರೆಹಮಾನ್ ಎಂಬುವವರಿಗೆ ಡಿಕ್ಕಿ ಹೊಡೆಯಲಾಗಿತ್ತು. ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
'ಕಾರು ವ್ಯಕ್ತಿಗೆ ಡಿಕ್ಕಿಯಾಗಿಲ್ಲ, ನನ್ನ ವಿರೋಧಿಗಳು ನನ್ನ ಬಗ್ಗೆ ಅಪಪ್ರಚಾರ ಮಾಡಲು ಈ ರೀತಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ' ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ಕೊಟ್ಟಿದ್ದರು.












Click it and Unblock the Notifications