ಚಿತ್ರದುರ್ಗದ ಕೋಟೆ ಮೇಲೆ ಗೆಲುವಿನ ಬಾವುಟ ಯಾರು ಹಾರಿಸುವರು?
ಚಿತ್ರದುರ್ಗ, ಮಾರ್ಚ್ 31 : ಚಿತ್ರದುರ್ಗದ ಕೋಟೆ ಮೇಲೆ ಗೆಲುವಿನ ಬಾವುಟ ಹಾರಿಸಲು ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಭರ್ಜರಿಯಾಗಿ ಪ್ರಚಾರ ಆರಂಭಿಸಿವೆ. ಏಪ್ರಿಲ್ 18ರಂದು ಲೋಕಸಭಾ ಚುನಾವಣೆ ಮತದಾನ ನಡೆಯಲಿದೆ.
ಚಿತ್ರದುರ್ಗದ ಹಾಲಿ ಸಂಸದರು ಕಾಂಗ್ರೆಸ್ನ ಬಿ.ಎನ್.ಚಂದ್ರಪ್ಪ. ಈ ಬಾರಿಯೂ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಅವರು ಕಣದಲ್ಲಿದ್ದಾರೆ. ಬಿಜೆಪಿಯಿಂದ ಎ.ನಾರಾಯಣಸ್ವಾಮಿ ಅವರು ಅಭ್ಯರ್ಥಿಯಾಗಿದ್ದಾರೆ.
ಚಿತ್ರದುರ್ಗ ಕ್ಷೇತ್ರದ ಚುನಾವಣಾ ಪುಟ
ಬಿಜೆಪಿ ಪರವಾಗಿ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 8ರಂದು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಅವರು ಸಮಾವೇಶದ ಜವಾಬ್ದಾರಿಯನ್ನು ಹೊತ್ತಿದ್ದು, ಸಮಾವೇಶದ ಸಿದ್ಧತೆ ಬಗ್ಗೆ ಜಿಲ್ಲೆಯ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.
ಲೋಕಸಭೆ ಚುನಾವಣೆ 2019: ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಪರಿಚಯ
2009ರಲ್ಲಿ ಜನಾರ್ದನ ಸ್ವಾಮಿ ಅವರು ಮೊದಲ ಬಾರಿಗೆ ಕ್ಷೇತ್ರದಲ್ಲಿ ಕಮಲ ಅರಳಿಸಿದರು. ಆದರೆ, ನರೇಂದ್ರ ಮೋದಿ ಅವರ ಅಲೆ ಇದ್ದರೂ 2014ರ ಲೋಕಸಭಾ ಚುನಾವಣೆಯಲ್ಲಿ ಅವರು ಸೋತರು. ಕ್ಷೇತ್ರವನ್ನು ಕಾಂಗ್ರೆಸ್ ವಶಕ್ಕೆ ಪಡೆದುಕೊಂಡಿತು. ಈ ಬಾರಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆಗಿರುವುದು ಯಾರಿಗೆ ಸಹಾಯಕವಾಗಲಿದೆ? ಕಾದು ನೋಡಬೇಕು.
ಬಿಜೆಪಿಗೆ ಗೆಲುವಿನ ತವಕ
ಕಳೆದ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಅಲೆ ಇದ್ದರೂ ಬಿಜೆಪಿ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ವಿಫಲವಾಗಿತ್ತು. ಈ ಬಾರಿ ಕ್ಷೇತ್ರವನ್ನು ವಶಪಡಿಸಿಕೊಳ್ಳಬೇಕು ಎಂಬ ಪಣ ತೊಟ್ಟಿದೆ. ಏಪ್ರಿಲ್ 8ರಂದು ನರೇಂದ್ರ ಮೋದಿ ಅವರು ಚಿತ್ರದುರ್ಗದಲ್ಲಿ ಮೋದಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದು, ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಬಿಜೆಪಿ, ಮೈತ್ರಿಕೂಟ ಬಲಾಬಲ
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚಿತ್ರುದುರ್ಗ ಜಿಲ್ಲೆಯ 6, ತುಮಕೂರು ಜಿಲ್ಲೆಯ ಪಾವಗಡ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿವೆ. ಪಾವಗಡ ಮತ್ತು ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್, ಶಿರಾದಲ್ಲಿ ಜೆಡಿಎಸ್ ಶಾಸಕರು ಇದ್ದಾರೆ. ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು, ಹಿರಿಯೂರು ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದಾರೆ.
ಗೂಳಿಹಟ್ಟಿ ಶೇಖರ್ ಬಲ
2014ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ನಿಂದ ಕಣಕ್ಕಿಳಿದಿದ್ದ ಗೂಳಿಹಟ್ಟಿ ಶೇಖರ್ ಅವರು 2 ಲಕ್ಷ ಮತಗಳನ್ನು ಪಡೆದಿದ್ದರು. ಈಗ ಅವರು ಬಿಜೆಪಿ ಶಾಸಕರಾಗಿದ್ದಾರೆ. ಆದ್ದರಿಂದ, ಬಿಜೆಪಿಗೆ ಗೆಲುವಿಗೆ ಸಹಾಯಕವಾಗಲಿದೆ ಎಂಬ ನಿರೀಕ್ಷೆ ಇದೆ.
ಬಿ.ಎನ್.ಚಂದ್ರಪ್ಪ ಪ್ರಚಾರ
ಹಾಲಿ ಸಂಸದ ಬಿ.ಎನ್.ಚಂದ್ರಪ್ಪ ಅವರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರವನ್ನು ನಡೆಸುತ್ತಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಅವರಿಗೆ ಸಹಾಯಕವಾಗುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಇರುವುದು ಅವರ ಗೆಲುವಿನ ನಿರೀಕ್ಷೆಯನ್ನು ಹೆಚ್ಚಿಸಲಿದೆ.
2014ರ ಫಲಿತಾಂಶ
2014ರ ಲೋಕಸಭಾ ಚುನಾವಣೆಯಲ್ಲಿ ಬಿ.ಎನ್.ಚಂದ್ರಪ್ಪ ಅವರು 4,64,511 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಬಿಜೆಪಿಯ ಜನಾರ್ದನ ಸ್ವಾಮಿ ಅವರು 3,70,433 ಮತಗಳನ್ನು ಪಡೆದಿದ್ದರು. ಜೆಡಿಎಸ್ನ ಗೂಳಿಹಟ್ಟಿ ಶೇಖರ್ 2,02,108 ಮತ ಪಡೆದಿದ್ದರು.