ಚಿತ್ರದುರ್ಗ ಜಿಲ್ಲೆಯಲ್ಲಿ ಈಗಲೇ ಆಕ್ಸಿಜನ್ ಬೆಡ್ ವ್ಯವಸ್ಥೆಗೆ ತಯಾರಿ
ಚಿತ್ರದುರ್ಗ, ಜನವರಿ 7: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮವಾಗಿ 80 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಹಿರಿಯೂರು 35, ಧರ್ಮಪುರ 20, ಮರಡಿಹಳ್ಳಿ ಕೋವಿಡ್ ಆಸ್ಪತ್ರೆಯಲ್ಲಿ 25 ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇದರ ಜೊತೆಗೆ ಸಿಸಿಸಿಯಲ್ಲಿ 100ಕ್ಕೂ ಹೆಚ್ಚು ಬೆಡ್ ಲಭ್ಯವಿದ್ದು, 500 ಹೆಚ್ಚುವರಿ ಬೆಡ್ಗಳನ್ನು ಕಾಯ್ದಿರಿಸಲಾಗಿದೆ.
ಉಳಿದಂತೆ ಚಳ್ಳಕೆರೆ, ಹೊಸದುರ್ಗ, ಹೊಳಲ್ಕೆರೆ, ಚಿತ್ರದುರ್ಗ, ಮೊಳಕಾಲ್ಮೂರು ತಾಲ್ಲೂಕಗಳಲ್ಲಿ ಆಸ್ಪತ್ರೆ ಸಿಬ್ಬಂದಿಗಳು ಮೂರನೇ ಅಲೆ ಕೋವಿಡ್ ಎದುರಿಸಲು ಎಲ್ಲ ವ್ಯವಸ್ಥೆ ಮಾಡಿಕೊಂಡು ಸಿದ್ಧಮಾಡಿಕೊಳ್ಳಲಾಗಿದೆ.

ವಾರಾಂತ್ಯ ಕರ್ಫ್ಯೂನಲ್ಲಿ ಏನಿರುತ್ತೆ? ಏನಿರಲ್ಲ?
ಮಹಾಮಾರಿ ಕೊರೊನಾ ಮೂರನೇ ಅಲೆ ನಿಯಂತ್ರಿಸುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಮಾರ್ಗಸೂಚಿಯಂತೆ ಜನವರಿ 19ರವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಫ್ಯೂ ಸೇರಿದಂತೆ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ.
ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 8ರಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ತುರ್ತು ಮತ್ತು ಅಗತ್ಯ ಚಟುವಟಕೆಗಳನ್ನು ಹೊರತುಪಡಿಸಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಎಲ್ಲ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು, ಸರ್ಕಾರದ ಅಧೀನ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಕೋವಿಡ್- 19 ಮತ್ತು ಅಗತ್ಯ ಸೇವೆಗಳನ್ನು ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಓಡಾಟಕ್ಕೆ ಯಾವುದೇ ಅಡ್ಡಿ ಇಲ್ಲ. ಎಲ್ಲ ಸಾರ್ವಜನಿಕ ಉದ್ಯಾನವನಗಳ ಬಾಗಿಲು ಬಂದ್, ಎಲ್ಲ ರೀತಿಯ ಉದ್ಯಮಗಳು ಮತ್ತು ಐಟಿ ಉದ್ಯಮಗಳಿಗೆ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ. ಎಲ್ಲ ಉದ್ಯೋಗಿಗಳ ಓಡಾಟಕ್ಕೆ ಅವಕಾಶವಿದೆ. ಸಿಬ್ಬಂದಿ ಕೆಲಸ ಮಾಡುವ ಸಂಸ್ಥೆಗಳ ಗುರುತಿನ ಚೀಟಿ ಹೊಂದಿರಬೇಕು.

ರೋಗಿಗಳು ಮತ್ತು ಅವರನ್ನು ನೋಡಿಕೊಳ್ಳುವವರಿಗೆ ತುರ್ತು ಸಂದರ್ಭದಲ್ಲಿ ಓಡಾಟಕ್ಕೆ ಅವಕಾಶವಿದೆ. ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಹೋಗುವವರಿಗೆ ಅವಕಾಶವಿದ್ದು, ಆಹಾರ, ದಿನಸಿ ಹಣ್ಣು- ತರಕಾರಿ, ಮೀನು, ಮಾಂಸ, ಹಾಲಿನ ಬೂತ್ ಮತ್ತು ಪ್ರಾಣಿಗಳ ಆಹಾರಗಳ ಮಾರಾಟ ಮಳಿಗೆಗಳು ತೆರೆಯಲು ಅವಕಾಶವಿದೆ.
ನ್ಯಾಯಬೆಲೆ ಅಂಗಡಿ, ಬೀದಿ ವ್ಯಾಪಾರಿಗಳಿಗೂ ಅವಕಾಶವಿದೆ. ಮನೆಗಳಿಗೆ ವಿವಿಧ ಪದಾರ್ಥ ಮತ್ತು ವಸ್ತುಗಳನ್ನು ತಂದು ಕೊಡುವುದಕ್ಕೆ ಅವಕಾಶವಿದೆ. ಹೋಟೆಲ್ ಮತ್ತು ರೆಸ್ಟೊರೆಂಟ್ಗಳಿಂದ ಆಹಾರ ಪಾರ್ಸೆಲ್ ಮಾತ್ರ, ಕುಳಿತು ತಿನ್ನಲು ಅವಕಾಶ ಇರುವುದಿಲ್ಲ. ಬಸ್, ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅವಕಾಶವಿದ್ದು, ಟಿಕೆಟ್ ತೋರಿಸಬೇಕಾಗಿದೆ. ಹೊರಾಂಗಣ ಮದುವೆಗಳಿಗೆ 200 ಜನರಿಗೆ ಒಳಾಂಗಣ ಮದುವೆಗೆ 100 ಜನರನ್ನಷ್ಟೇ ಮಿತಿಗೊಳಿಸಲಾಗಿದೆ.
ಕೋವಿಡ್- 19 ನಿರ್ವಹಣೆಯ ಕ್ರಮಗಳನ್ನು ಮತ್ತು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯನ್ನು ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51ರಿಂದ 60ರ ಉಪಬಂಧಗಳು ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಗುರುವಾರ 4 ಮಂದಿಗೆ ಕೋವಿಡ್ ದೃಢಪಟ್ಟಿರುವುದು ವರದಿಯಾಗಿದೆ. ಚಿತ್ರದುರ್ಗ 3 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 1 ಪ್ರಕರಣಗಳು ದಾಖಲಾಗಿವೆ. ಓರ್ವ ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಉಳಿದಂತೆ ಚಳ್ಳಕೆರೆ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ತಾಲ್ಲೂಕುಗಳಲ್ಲಿ ಯಾವುದೇ ಕೋವಿಡ್ ಪ್ರಕರಣಗಳು ವರದಿಯಾಗಿಲ್ಲ. ಜಿಲ್ಲೆಯಲ್ಲಿ ಇದುವರೆಗೂ ಒಟ್ಟು ಸೋಂಕಿತರ ಸಂಖ್ಯೆ 36,794ಗೆ ಏರಿಕೆಯಾಗಿದೆ.
ಇದರಲ್ಲಿ 36552 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇನ್ನೂ 30 ಜನ ಸೋಂಕಿತರು ಮಾತ್ರ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ 212 ಜನ ಮೃತಪಟ್ಟಿದ್ದಾರೆ.












Click it and Unblock the Notifications