ಜನಾರ್ದನ ರೆಡ್ಡಿ ಬಗ್ಗೆ ಬಿಜೆಪಿ ನಾಯಕರಿಗೆ ತಿಪ್ಪೇಸ್ವಾಮಿ ಪ್ರಶ್ನೆ!
ಚಿತ್ರದುರ್ಗ, ನವೆಂಬರ್ 08 : 'ಜನಾರ್ದನ ರೆಡ್ಡಿ ಅವರಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಹೇಳಿದರೆ ಜನರು ನಂಬುತ್ತಾರೆಯೇ?' ಎಂದು ಮೊಳಕಾಲ್ಮೂರು ಕ್ಷೇತ್ರದ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಬಿಜೆಪಿ ನಾಯಕರನ್ನು ಪ್ರಶ್ನಿಸಿದರು.
ಮಂಗಳೂರಿನಲ್ಲಿ ಗುರುವಾರ ಬೆಳಗ್ಗೆ ಮಾತನಾಡಿದ್ದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, 'ಮಾಜಿ ಸಚಿವ ಜನಾರ್ದನ ರೆಡ್ಡಿಗೂ ನಮಗೂ ಏನೂ ಸಂಬಂಧವಿಲ್ಲ. ಅವರು ನಮ್ಮ ಪಕ್ಷದವರೂ ಅಲ್ಲ' ಎಂದು ಹೇಳಿಕೆ ನೀಡಿದ್ದರು.
ಜನಾರ್ದನ ರೆಡ್ಡಿ ಪ್ರಕರಣ: ಬಿಜೆಪಿ ನಾಯಕರ ಬಾಯಿಗೆ ಹೈಕಮಾಂಡ್ ಬೀಗ
ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮೊಳಕಾಲ್ಮೂರು ಕ್ಷೇತ್ರದ ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು, 'ಮೊಳಕಾಲ್ಮೂರು ಕ್ಷೇತ್ರದಲ್ಲಿ ನನಗೆ ಟಿಕೆಟ್ ತಪ್ಪಿಸಿದ್ದು ಜನಾರ್ದನ ರೆಡ್ಡಿ. ಅವರಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದರೆ ಜನರು ನಂಬುವುದಿಲ್ಲ' ಎಂದರು.
ಗಾಲಿ ರೆಡ್ಡಿ ಬಿಜೆಪಿಯಲ್ಲಿಲ್ಲ, ಪ್ರಕರಣದ ಬಗ್ಗೆ ನನಗೆ ತಿಳಿದಿಲ್ಲ: ಬಿಎಸ್ವೈ
'ಕಳೆದ ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಅವರು ಭಾಗಿಯಾಗಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಆದರೆ, ಶಾಸಕನಾಗಿದ್ದ ನನಗೆ ಟಿಕೆಟ್ ನೀಡದೆ ಮೋಸ ಮಾಡಿದರು. ಬಳಿಕ ಶ್ರೀರಾಮುಲು, ಜನಾರ್ದನ ರೆಡ್ಡಿ ನನ್ನ ವಿರುದ್ಧ ಪ್ರಚಾರ ಮಾಡಿದರು. ಈಗ ಬಿಜೆಪಿಗೂ ಅವರಿಗೂ ಸಂಬಂಧವಿಲ್ಲ ಎಂದರೆ ಹೇಗೆ?' ಎಂದು ಬಿಜೆಪಿ ನಾಯಕರನ್ನು ಪ್ರಶ್ನೆ ಮಾಡಿದರು.
'ನಕಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿ ಶ್ರೀರಾಮುಲು ಅವರನ್ನು ಗೆಲ್ಲಿಸಲಾಗಿದೆ. ಮೂಲತಃ ಆಂಧ್ರಪ್ರದೇಶದವರಾದ ಶ್ರೀರಾಮುಲು ಅವರು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಜಯಗಳಿಸಿದ್ದಾರೆ. ಈ ಮೂಲಕ ರಾಜ್ಯದ ನಾಯಕ ಸಮುದಾಯಕ್ಕೆ ಮೋಸ ಮಾಡಿದ್ದಾರೆ' ಎಂದು ತಿಪ್ಪೇಸ್ವಾಮಿ ಆರೋಪ ಮಾಡಿದರು.
ಯಡಿಯೂರಪ್ಪ ಹೇಳಿದ್ದೇನು? : ಜನಾರ್ದನ ರೆಡ್ಡಿಗಾಗಿ ಸಿಸಿಬಿ ಹುಡುಕಾಟ ನಡೆಸುತ್ತಿರುವ ಬಗ್ಗೆ ಕೇಳಿದ್ದ ಪ್ರಶ್ನೆಗೆ ಉತ್ತರ ನೀಡಿದ್ದ ಯಡಿಯೂರಪ್ಪ ಅವರು, 'ಜನಾರ್ದನ ರೆಡ್ಡಿಗೂ ಬಿಜೆಪಿಗೂ ಏನು ಸಂಬಂಧ?. ಅವರು ನನ್ನ ಪಕ್ಷದವರೂ ಅಲ್ಲ. ಹಾಗಾಗಿ ಆ ವಿಷಯದ ಕುರಿತು ಯಾವುದೇ ಹೇಳಿಕೆ ನೀಡುವುದಿಲ್ಲ' ಎಂದು ಹೇಳಿದ್ದರು.