ತಮ್ಮ ವಿರುದ್ಧದ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ಮುರುಘಾ ಶರಣರು
ಚಿತ್ರದುರ್ಗ ಸೆಪ್ಟೆಂಬರ್ 06: ಅತ್ಯಾಚಾರದ ಆರೋಪದ ಮೇಲೆ ಫೋಕ್ಸೋ ಪ್ರಕರಣದಲ್ಲಿ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ತಮ್ಮ ಕುರಿತು ಸುದ್ದಿಗಳನ್ನು ಪ್ರಕಟಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ. ಈ ಹಿಂದೆ ಕೂಡ ಹಲವಾರು ಗಣ್ಯರು ತಮ್ಮ ವಿರುದ್ಧ ಸುದ್ದಿ ಪ್ರಕಟಣೆಯಾಗದಂತೆ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆಯನ್ನು ತಂದಿರುವುದಿದೆ. ಇವರಲ್ಲಿ ಪ್ರಭಾವಿ ರಾಜಕಾರಣಿಗಳು, ಹಲವು ಗಣ್ಯರು, ಶಾಸಕರು, ಅಧಿಕಾರಿಗಳೇ ಹೆಚ್ಚು.
ಅತ್ಯಾಚಾರ ಆರೋಪದ ಮೇಲೆ ಮುರುಘಾ ಶ್ರೀಗಳನ್ನು ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಹೀಗಾಗಿ ಶ್ರೀಗಳನ್ನು ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಇನ್ನೂ ಇವರ ಜಾಮೀನು ಅರ್ಜಿ ವಿಚಾರಣೆ ಸೆ.7ಕ್ಕೆ ನಿಗದಿಯಾಗಿದೆ.
ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಬಂಧನದ ವೇಳೆ ಎದೆನೋವು ಕಾಣಿಸಿಕೊಂಡಿತ್ತು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀ ಆರೋಗ್ಯದಲ್ಲಿ ವಿಪರೀತ ಏರುಪೇರಾಗಿರುವ ಹಿನ್ನೆಲೆಯಲ್ಲಿ ಐಸಿಯುಗೆ ಸ್ಥಳಾಂತರಿಸಲಾಗಿತ್ತು.
ಗುರುವಾರ ಮಧ್ಯರಾತ್ರಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ನಂತರ ಸ್ವಾಮೀಜಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶುಕ್ರವಾರ ಬೆಳಗ್ಗೆ ಜೈಲಿನ ಸಿಬ್ಬಂದಿ ಉಪಾಹಾರಕ್ಕೆಂದು ಉಪ್ಪಿಟ್ಟು ಮತ್ತು ಹಾಲನ್ನು ನೀಡಿದ್ದರು. ಹಾಲನ್ನಷ್ಟೇ ಸೇವನೆ ಮಾಡಿದ ಶ್ರೀಗಳು ಉಪ್ಪಿಟ್ಟನ್ನು ನಿರಾಕರಿಸಿದ್ದರು. ಇದಾದ ಸ್ವಲ್ಪ ಹೊತ್ತಿನಲ್ಲಿಯೇ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಜೈಲಿನ ಸಿಬ್ಬಂದಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಮುರುಘಾ ಶ್ರೀಗಳಿಗೆ ವೈದ್ಯರು ಇಸಿಜಿ ಹಾಗೂ ಎಕೋ ಪರೀಕ್ಷೆ ನಡೆಸಿದ್ದಾರೆ. ಇದೀಗ ಆರೋಗ್ಯದಲ್ಲಿ ತೀವ್ರ ಏರುಪೇರಾದ ಕಾರಣದಿಂದ ಐಸಿಯುಗೆ ಸ್ಥಳಾಂತರ ಮಾಡಿ ಚಿಕಿತ್ಸೆ ನೀಡಲಾಗಿದೆ.