ಆಗ್ನೇಯ ಪದವೀಧರ ಚುನಾವಣೆ: ಪಕ್ಷೇತರನಾಗಿ ಡಿ.ಟಿ ಶ್ರೀನಿವಾಸ್?
ಚಿತ್ರದುರ್ಗ, ಮಾರ್ಚ್ 17: ಇದೇ ವರ್ಷದ ಜೂನ್ ತಿಂಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ ನ ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಿಸಿದ್ದು, ಹಿರಿಯೂರಿನ ಡಿ.ಟಿ.ಶ್ರೀನಿವಾಸ್ ಗೆ ಟಿಕೆಟ್ ತಪ್ಪಿದೆ. ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಪಕ್ಷೇತರನಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.
Recommended Video
ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಿರಾ ವಿಧಾನ ಸಭಾ ಕ್ಷೇತ್ರದ ಖಾಸಗಿ ಶಾಲೆ ನಡೆಸುತ್ತಿರುವ ಎಂ. ಚಿದಾನಂದ್ ಗೌಡ ಬಿಜೆಪಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿರಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಲ್ಲಿ ಇವರು ಒಬ್ಬರಾಗಿದ್ದರು. ಇದೀಗ ಪರಿಷತ್ ಚುನಾವಣೆಗೆ ಟಿಕೆಟ್ ಇವರಿಗೆ ಲಭಿಸಿದೆ.
ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ನ ಪ್ರಬಲ ಆಕಾಂಕ್ಷಿಯಾಗಿದ್ದ ಹಿರಿಯೂರು ಬಿಜೆಪಿ ಶಾಸಕಿ ಕೆ. ಪೂರ್ಣಿಮಾ ಪತಿ ಡಿ.ಟಿ ಶ್ರೀನಿವಾಸ್ ಟಿಕೆಟ್ ಪಡೆಯಲು ಸಾಕಷ್ಟು ಕಸರತ್ತು ನಡೆಸಿದ್ದರು. ಇದೀಗ ಟಿಕೆಟ್ ತಪ್ಪಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸದ್ಯ ಡಿ.ಟಿ ಶ್ರೀನಿವಾಸ್ ನವರು ಬೆಂಗಳೂರಿನ S.E.A. Group of institutions ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಗೊಲ್ಲ ಸಂಘದ ಅಧ್ಯಕ್ಷರು ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗ ಬಿಜೆಪಿ ಮೋರ್ಚಾ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಇವರು ಚಿತ್ರದುರ್ಗ, ತುಮಕೂರು, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ (ಹರಿಹರ ದಿಂದ ಚಿಕ್ಕಬಳ್ಳಾಪುರ ವರೆಗೆ) ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವಲ್ಲಿ ಸಾಕಷ್ಟು ಶ್ರಮಿಸಿದ್ದರು. ಈಗಾಗಲೇ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಒಳಪಡುವ ಜಿಲ್ಲೆಗಳಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ ಚುನಾವಣೆಯಲ್ಲಿ ಬೆಂಬಲಿಸುವಂತೆ ಸಭೆಗಳನ್ನು ನಡೆಸಿದ್ದಾರೆ.