ಕಾಡುಗೊಲ್ಲರನ್ನು ಎಸ್ಟಿಗೆ ಸೇರಿಸಿ; ಕೇಂದ್ರ ಸಚಿವ ನಾರಾಯಣಸ್ವಾಮಿ ನಿಯೋಗದ ಮನವಿ
ಚಿತ್ರದುರ್ಗ, ಸೆ. 28 : ಮಧ್ಯ ಕರ್ನಾಟಕದಲ್ಲಿ ಹೆಚ್ಚಾಗಿ ಕಂಡುಬರುವ ಕಾಡಗಿಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ರಾಜ್ಯ ಶಿಕ್ಷಣ ಸಚಿವ ನಾಗೇಶ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ. ರವಿ ನೇತೃತ್ವದ ನಿಯೋಗ ಮನವಿ ಮಾಡಿದೆ.
ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಅನೇಕ ದಶಕಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ ಹೀಗಾಗಿ ಇವರನ್ನು ಎಸ್ಟಿಗೆ ಸೇರಿಸಬೇಕು ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೂ ಮನವಿ ನೀಡಲಾಯಿತು.
ಬೆಟ್ಟ ಕುರುಬ ಜನಾಂಗ ಎಸ್ಟಿಗೆ ಸೇರ್ಪಡೆ: ಪ್ರಲ್ಹಾದ್ ಜೋಶಿ ಪ್ರಕಟ, ಸಿದ್ದರಾಮಯ್ಯ ಸಂತಸ
ಕಾಡುಗೊಲ್ಲರ ಬಗ್ಗೆ ಮೈಸೂರು ವಿಶ್ವವಿದ್ಯಾಲಯದಿಂದ ಸಂಶೋಧನೆ
ಈಗಾಗಲೇ ಕಾಡುಗೊಲ್ಲರ ಬಗ್ಗೆ ಮೈಸೂರು ವಿಶ್ವವಿದ್ಯಾಲಯದಿಂದ ಸಂಶೋಧನೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರದಲ್ಲಿ ಕಡತಗಳಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ರಾಜ್ಯ ಶಿಕ್ಷಣ ಸಚಿವ ನಾಗೇಶ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ. ರವಿ ನೇತೃತ್ವದ ನಿಯೋಗ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಾಗೂ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರ ಕಾಡುಗೊಲ್ಲ ಕುಲಶಾಸ್ತ್ರಿಯ ಅಧ್ಯಯನ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿದೆ. ಈ ವರದಿಯನ್ನು ಆಧರಿಸಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದ್ದಾರೆ. ಇದರ ಜೊತೆಗೆ ಬುಡಕಟ್ಟು ಸಮುದಾಯದ ಹಿಂದಿನ ಮತ್ತು ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದಾರೆ.
ಮನವಿ ಪರಿಶೀಲಿಸಿ ನ್ಯಾಯ ಒದಗಿಸುವ ಕೆಲಸ ಮಾಡುವ ಭರವಸೆ
ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ರಾಜ್ಯ ಶಿಕ್ಷಣ ಸಚಿವ ನಾಗೇಶ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದ ನಿಯೋಗ ಸಚಿವ ಅರ್ಜುನ್ ಮುಂಡಾ ಹಾಗೂ ಬಿಎಲ್. ಸಂತೋಷ್ ಅವರಿಗೆ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ.
ಇನ್ನು ಈ ಮನವಿಗೆ ಇಬ್ಬರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಈ ಸಮುದಾಯ ತೀರಾ ಹಿಂದುಳಿದಿದ್ದು, ಮೀಸಲಾತಿ ಅವಶ್ಯಕತೆ ಇದೆ ಎಂದು ಸ್ಥಿತಿಗತಿಗಳ ಬಗ್ಗೆ ತಿಳಿಸಲಾಗಿದೆ. ಮನವಿಯನ್ನು ಪರಿಶೀಲನೆ ಮಾಡಿ ಕಾಡುಗೊಲ್ಲ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಲಾಗುವುದು ಎಂದು ಬಿಎಲ್. ಸಂತೋಷ್ ಭರವಸೆ ನೀಡಿದ್ದಾರೆ.
ಪ್ರತ್ಯೇಕವಾಗಿ ಹಟ್ಟಿಗಳಲ್ಲಿ ವಾಸಿಸುತ್ತಿರುವ ಕಾಡುಗೊಲ್ಲರು
ಚಿತ್ರದುರ್ಗ, ತುಮಕೂರು, ದಾವಣಗೆರೆ, ಬೆಂಗಳೂರು, ಹಾಸನ ಸೇರಿದಂತೆ ಮತ್ತಿತರರ ಭಾಗಗಳಲ್ಲಿ ಹೆಚ್ಚು ವಾಸಿಸುವ ಈ ಸಮುದಾಯ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದೆ. ವಿಶಿಷ್ಟ ಆಚರಣೆಗಳು ಈ ಸಮುದಾಯದಲ್ಲಿವೆ. ಕಾಡುಗೊಲ್ಲರು ತನ್ನದೇ ಆದ ಬುಡಕಟ್ಟು ಲಕ್ಷಣಗಳನ್ನು ಹೊಂದಿದ್ದಾರೆ.
ಊರಿನಿಂದ ಪ್ರತ್ಯೇಕವಾಗಿ ಹಟ್ಟಿಗಳಲ್ಲಿ ವಾಸಿಸುತ್ತಿರುವ ಸಮುದಾಯಕ್ಕೆ ಮೀಸಲಾತಿ ಅವಶ್ಯಕತೆ ಇದೆ. ಪರಿಶಿಷ್ಟ ಪಂಗಡ ಮೀಸಲಾತಿ ಜೊತೆಗೆ ಗೊಲ್ಲರ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು ಎಂಬುದು ಸಮುದಾಯದ ಪ್ರಮುಖ ಬೇಡಿಕೆಯಾಗಿದೆ.
30 ವರ್ಷಗಳಿಂದ ಹೋರಾಡುತ್ತಿದ್ದ ಬೆಟ್ಟ ಕುರುಬ ಸಮುದಾಯ
ಈ ತಿಂಗಳ ಮಧ್ಯಭಾಗದಲ್ಲಿ ಕರ್ನಾಟಕದ ಬೆಟ್ಟ ಕುರುಬ ಜನಾಂಗಕ್ಕೆ ಸೇರಿದ 12 ಜಾತಿಗಳನ್ನ ಪರಿಶಿಷ್ಟ ಪಂಗಡ ಸಮುದಾಯದ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ವಿಚಾರವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿತ್ತು.
ರಾಜ್ಯದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿತ್ತು. ಕಾರಣಾಂತರಗಳಿಂದ ಈ ಜನಾಂಗದವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಈ ಜನಾಂಗದವರು ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು ಎನ್ನಲಾಗಿದೆ. ಇದೇ ಮಾದರಿಯಲ್ಲಿ ಕಾಡು ಗೊಲ್ಲರನ್ನು ಕೂಡ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂಬ ಕೂಗು ಕೇಳಿಬಂದಿದೆ.
ಮನವಿ ಸಲ್ಲಿಸಿದ ಸಂದರ್ಭದಲ್ಲಿ ರಾಜ್ಯ ಕಾಡುಗೊಲ್ಲ ಸಂಘದ ರಾಜ್ಯಾಧ್ಯಕ್ಷ ಬಿಬಿಎಂಪಿ ರಾಜಣ್ಣ, ಬಿಜೆಪಿ ಮುಖಂಡ ಸಿದ್ದೇಶ್ ಯಾದವ್, ಜಿಪಂ ಮಾಜಿ ಅಧ್ಯಕ್ಷ ಮೀಸೆ ಮಹಾಲಿಂಗಪ್ಪ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.