ಮುರುಘಾ ಶ್ರೀ ವಿರುದ್ಧ 2ನೇ ಪೋಕ್ಸೋ ಪ್ರಕರಣ: ನ್ಯಾಯಾಧೀಶರ ಮುಂದೆ ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲು
ಚಿತ್ರದುರ್ಗ, ಅಕ್ಟೋಬರ್ 25: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಜಿಲ್ಲಾ ನ್ಯಾಯಾಧೀಶರ ಎದುರು ಬಾಲಕಿಯರ ಸಿಆರ್ಪಿಸಿ 164ರ ಅನ್ವತ ಹೇಳಿಕೆ ದಾಖಲಿಸಲಾಗಿದೆ.
ಮುರುಘಾ ಮಠದಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಮುರುಘಾ ಶರಣರು ತನ್ನಿಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅಕ್ಟೋಬರ್ 14ರಂದು ಮೈಸೂರಿನಲ್ಲಿ ದೂರು ನೀಡಿದ್ದರು. ಆ ದೂರಿನನ್ವಯ ಮಂಗಳವಾರ ಸಂತ್ರಸ್ತ ಬಾಲಕಿಯರನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಧೀಶರ ಮುಂದೆ ಬಾಲಕಿಯರು ಹೇಳಿಕೆಗಳನ್ನು ದಾಖಲಿಸಿದ್ದಾರೆ.
ಈಗಾಗಲೆ ಸೆಪ್ಟೆಂಬರ್ನಲ್ಲಿ ಮುರುಘಾ ಶರಣರ ವಿರುದ್ಧ ಮೊದಲ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇನ್ನೂ ಜಾಮೀನು ಸಿಗದೇ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಇದೀಗ 2ನೇ ಪೋಕ್ಸೋ ಪ್ರಕರಣ ದಾಖಲಾಗಿದ್ದು ಮತ್ತೊಂದು ಸಂಕಷ್ಟ ಎದುರಾಗಿದೆ.

ಪ್ರಸ್ತುತ ದೂರು ನೀಡಿರುವ ಅಡುಗೆ ಸಹಾಯಕಿ ಮೈಸೂರಿನ ಒಡನಾಡಿ ಸಂಸ್ಥೆಯ ಆಶ್ರಯದಲ್ಲಿ ಉಳಿದುಕೊಂಡಿದ್ದರು. ಮಂಗಳವಾರ ಸಿಆರ್ಪಿಸಿ 164 ಅಡಿ ಸಂತ್ರಸ್ತ ಬಾಲಕಿಯರು ನ್ಯಾಯಾದೀಶರ ಮುಂದೆ ತಮಗೆ ಆಗಿರುವ ಅನ್ಯಾಯಗಳ ಬಗ್ಗೆ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮತ್ತು 7ನೇ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಕೂಡ ಮುಂದೂಡಲಾಗಿದೆ. ಮುರುಘಾ ಶರಣದ ಸಹಾಯಕ ಮಹಾಲಿಂಗ ಈ ಪ್ರಕರಣದ 6ನೇ ಆರೋಪಿಯಾಗಿದ್ದರೆ, ಬಾಣಸಿಗ ಕರಿಬಸಪ್ಪ 7ನೇ ಆರೋಪಿಯಾಗಿದ್ದಾರೆ. ಇವರಿಬ್ಬರ ಅರ್ಜು ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಲಾಗಿದೆ.
ಆರೋಪಿಗಳ ಪರವಾಗಿ ವಕೀಲ ಪ್ರತಾಪ್ ಜೋಗಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಸಂತ್ರಸ್ತ ಬಾಲಕಿಯರ ಪರ ವಕೀಲರು ಇದಕ್ಕೆ ತಕರಾರು ಅರ್ಜಿ ಸಲ್ಲಿಸಿದರು. ಸಂತ್ರಸ್ತರ ಸಮ್ಮುಖದಲ್ಲಿಯೇ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಈ ಕುರಿತು ಯಾವುದೇ ತೀರ್ಮಾನ ಪ್ರಕಟಿಸಿದ ನ್ಯಾಯಾಧೀಶರು, ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿದರು.

ನವೆಂಬರ್ 3ರವರೆಗೆ ನ್ಯಾಯಾಂಗ ಬಂಧನ
ಇನ್ನು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರು ಜಾಮೀನು ಕೋರಿ ಸಲ್ಲಿಸಿದ್ದರು. ಕಳೆದ ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಾಲಯ ಮೊದಲ ಆರೋಪಿ ಮುರುಘಾ ಶರಣರು ಹಾಗೂ 2ನೇ ಆರೋಪಿ ವಾರ್ಡನ್ ರಶ್ಮಿಯ ನ್ಯಾಯಾಂಗ ಬಂಧನವನ್ನು ನವೆಂಬರ್ 3ರವರೆಗೆ ವಿಸ್ತರಣೆ ಮಾಡಿತ್ತು.












Click it and Unblock the Notifications