ವಿವಿ ಸಾಗರ ಜಲಾಶಯದ ಹಿನ್ನೀರಿನಲ್ಲಿ ವಿದ್ಯಾರ್ಥಿಗಳಿಗೆ ಈಜು ತರಬೇತಿ
ಚಿತ್ರದುರ್ಗ, ಅಕ್ಟೋಬರ್ 1: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ವಾಣಿವಿಲಾಸ ಸಾಗರ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಈಜು ತರಬೇತಿ ಶಿಬಿರ ನಡೆಯುತ್ತಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ವತಿಯಿಂದ ಜಲ ಸಾಹಸ ಕ್ರೀಡಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಹೊಸದುರ್ಗ ತಾಲ್ಲೂಕಿನ ವಿವಿಧ ಶಾಲೆಗಳ, 5ನೇ ತರಗತಿಯಿಂದ 10ನೇ ತರಗತಿವರೆಗಿನ ಪ್ರಾಥಮಿಕ ಮತ್ತು ಪ್ರೌಢಶಾಲೆಯ 100 ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಈಜು ತರಬೇತಿ ನೀಡಲು ಉದ್ದೇಶಿಸಲಾಗಿದೆ. ಮೂರು ತಂಡಗಳನ್ನಾಗಿ ಮಾಡಿ ತರಬೇತಿ ನೀಡಲಾಗುತ್ತಿದೆ. ಒಂದು ತಂಡದಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮುಂದೆ ಓದಿ...
ಸ್ವಯಂ ರಕ್ಷಣೆಗೆ ಈಜು ತರಬೇತಿ
ಜಲ ಸಾಹಸ ಕ್ರೀಡಾ ತರಬೇತಿ ಶಿಬಿರದಲ್ಲಿ ಶಾಸಕ ಗೂಳಿಹಟ್ಟಿ ಡಿ.ಶೇಖರ್ ಭಾಗವಹಿಸಿ ಮಾತನಾಡಿ, ಹೊಸದುರ್ಗ ತಾಲ್ಲೂಕಿನಲ್ಲಿ ಪ್ರತಿ ವರ್ಷ ಮಳೆ ಹೆಚ್ಚಾಗಿ ಸಾಕಷ್ಟು ಅನಾಹುತಗಳು ಸಂಭವಿಸಿವೆ. ನರಸೀಪುರ ಸಮೀಪದ ಗೂಳಿಹಟ್ಟಿ ದೊಡ್ಡಹಳ್ಳದಲ್ಲಿ ಆರನೇ ತರಗತಿಯ ಇಬ್ಬರು ಬಾಲಕರು ಹಳ್ಳದಲ್ಲಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಬಹಳಷ್ಟು ಬಾಲಕರು ಕೆರೆಕಟ್ಟೆ, ಹಳ್ಳಗಳಲ್ಲಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನು ಮನಗೊಂಡು ಈಜು ತರಬೇತಿ ನೀಡಿದರೆ ಅವರು ಸ್ವಯಂ ರಕ್ಷಣೆ ಮಾಡಿಕೊಳ್ಳಲು ಸಹಾಯಕವಾಗುತ್ತದೆ ಎಂಬ ಉದ್ದೇಶದಿಂದ ವಾಣಿ ವಿಲಾಸ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಜಲ ಸಾಹಸ ಕ್ರೀಡಾ ತರಬೇತಿ ಶಿಬಿರ ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಈಜು ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.
ಈಜುಕೊಳಗಳನ್ನು ಆರಂಭಿಸಲು ಕೆಎಸ್ಎ ಒತ್ತಾಯ
ತರಬೇತಿಯಿಂದ ಮಕ್ಕಳಲ್ಲಿ ಧೈರ್ಯ
ವಿದ್ಯಾರ್ಥಿಗಳು ಉತ್ತಮವಾಗಿ ಈಜಿನ ತರಬೇತಿ ಪಡೆಯುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನುಕೂಲವಾಗುತ್ತದೆ ಎಂದೂ ಹೇಳಿದರು. ಯುವಜನ ಸೇವಾ ಮತ್ತು ಕ್ರೀಡಾ ಅಧಿಕಾರಿ ದಿವಾಕರ್ ಮಾತನಾಡಿ, ಈಜು ತರಬೇತಿಯಿಂದ ಮಕ್ಕಳಿಗೆ ಧೈರ್ಯ ಬರುತ್ತದೆ. ಇದರಿಂದ ಆತ್ಮವಿಶ್ವಾಸವೂ ವೃದ್ಧಿಯಾಗುತ್ತದೆ. ಮಕ್ಕಳ ಉಜ್ವಲ ಭವಿಷ್ಯಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು.
ನೂರು ವಿದ್ಯಾರ್ಥಿಗಳಿಗೆ ತರಬೇತಿ
ಹೊಸದುರ್ಗ ತಾಲ್ಲೂಕಿನ ವಿವಿಧ ಶಾಲೆಗಳ 100 ವಿದ್ಯಾರ್ಥಿಗಳಿಗೆ ಮೂರು ತಂಡಗಳಂತೆ ವಿಂಗಡಿಸಿ ಒಂದು ತಂಡಕ್ಕೆ 10 ದಿನಗಳಂತೆ ಒಂದು ತಿಂಗಳ ಕಾಲ ತರಬೇತಿ ನೀಡಲಾಗುತ್ತಿದೆ. ಮೊದಲನೇ ತಂಡಕ್ಕೆ ಸೆ.28 ರಿಂದ ಅಕ್ಟೋಬರ್ 7ರವರೆಗೆ 10 ದಿನಗಳ ಕಾಲ ತರಬೇತಿ ನೀಡಲಾಗುತ್ತಿದೆ. ಅ.8 ರಿಂದ ಎರಡನೇ ತಂಡದ ತರಬೇತಿ ಪ್ರಾರಂಭವಾಗುತ್ತದೆ. ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ತರಬೇತಿ ನಡೆಯಲಿದೆ. ತರಬೇತಿ ಜೊತೆಗೆ ಉಚಿತ ಊಟ, ವಸತಿ ಸೌಕರ್ಯ ಕಲ್ಪಿಸಲಾಗಿದೆ. ಮಕ್ಕಳ ಸಂಖ್ಯೆ ಹೆಚ್ಚಾಗಿರುವುದರಿಂದ ತರಬೇತಿ ಅವಧಿ ವಿಸ್ತರಣೆಯಾಗುವ ಸಾಧ್ಯತೆ ಇದೆ. ಈಜು ತರಬೇತಿ ಜೊತೆಗೆ ಮನರಂಜನೆ ಆಟಗಳು, ಸ್ಪರ್ಧಾತ್ಮಕ ಚಟುವಟಿಕೆಗಳು, ವಿವಿಧ ಕ್ರೀಡೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಜೀವದ ಹಂಗು ತೊರೆದು ಪ್ರಾಣ ಉಳಿಸಿದ ಮಕ್ಕಳಿಗೆ ಪ್ರಶಸ್ತಿ ಪ್ರದಾನ
ವಿದ್ಯಾರ್ಥಿಗಳಿಗೆ ವಿಮೆ
ಹೊಸದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹಳ್ಳ, ಕೆರೆಕಟ್ಟೆಗಳು ತುಂಬಿರುವುದರಿಂದ ಆಕಸ್ಮಿಕವಾಗಿ ಮಕ್ಕಳು ಜಾರಿ ಬಿದ್ದು, ಅವಘಡಗಳು ಸಂಭವಿಸಿವೆ. ಇಂತಹ ಅವಘಡಗಳು ಮುಂದಿನ ದಿನಗಳಲ್ಲಿ ಸಂಭವಿಸಬಾರದು ಎಂಬ ಉದ್ದೇಶದಿಂದ ಶಾಲಾ ವಿದ್ಯಾರ್ಥಿಗಳಿಗೆ ಈಜು ತರಬೇತಿ ನೀಡಲಾಗುತ್ತಿದೆ. ಈಜು ತರಬೇತಿ ಶಿಬಿರದಲ್ಲಿ ಭಾಗವಹಿಸಿರುವ ಎಲ್ಲ ವಿದ್ಯಾರ್ಥಿಗಳಿಗೆ ವಿಮೆ ಮಾಡಿಸಲಾಗಿದೆ. ಈ ಸಂದರ್ಭದಲ್ಲಿ ಹೊಸದುರ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಅಕಾಡೆಮಿಯ ತರಬೇತಿದಾರರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Recommended Video