ಚಿತ್ರದುರ್ಗದಲ್ಲಿ ಅಕಾಲಿಕ ಮಳೆಗೆ ಕಡಲೆ ಬೆಳೆ ಸಂಪೂರ್ಣ ನಾಶ
ಚಿತ್ರದುರ್ಗ, ಜನವರಿ 7: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗಿದ್ದು, ಬುಧವಾರ ರಾತ್ರಿ 8 ಗಂಟೆಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿಯೂ ಸಹ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಗೆ ಕಡಲೆ ಬೆಳೆ ಸಂಪೂರ್ಣ ನಾಶವಾಗಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಬ್ಬೂರು ಗ್ರಾಮದ ರೈತ ಕಾಂತರಾಜು ಬೆಳೆದ ಒಟ್ಟು ಹತ್ತು ಎಕರೆಯಲ್ಲಿ, 3 ಎಕರೆ ಕಡ್ಲೆ ಬೆಳೆ ಸಂಪೂರ್ಣ ನಾಶವಾಗಿದೆ. ಹೊಲದಲ್ಲಿ ಸಂಪೂರ್ಣವಾಗಿ ನೀರು ನಿಂತು ಬೆಳೆ ನಾಶವಾಗಿ, ರೈತ ಆತಂಕಪಡುವ ಸ್ಥಿತಿಗೆ ತಲುಪಿಸಿದೆ.
ಇದೇ ಗ್ರಾಮದ ಹಲವಾರು ರೈತರ ಹೊಲದಲ್ಲಿ ನೀರು ನಿಂತಿರುವುದರಿಂದ ಬೆಳೆ ಕೈಸೇರುವುದು ಬಹುತೇಕ ಅನುಮಾನವಾಗಿದೆ. ನಿರಂಜನ್ ಮೂರ್ತಿ ಇವರು 25 ಎಕರೆಯಲ್ಲಿ ಕಡ್ಲೆ ಬೆಳೆ ಬೆಳೆದಿದ್ದು, ಸುಮಾರು 5 ಎಕರೆಯ ಹೊಲದಲ್ಲಿ ಸಂಪೂರ್ಣವಾಗಿ ನೀರು ನಿಂತು, ಬೆಳೆ ಜಲಾವೃತಗೊಂಡಿದೆ.

ಸಾಲ ಸೂಲ ಮಾಡಿ, ಲಕ್ಷಾಂತರ ಹಣ ಖರ್ಚು ಮಾಡಿ ಬೆಳೆ ಬೆಳೆದಿರುವ ರೈತರು ಇದೀಗ ಕಂಗಲಾಗಿದ್ದಾರೆ. ಒಂದು ಎಕರೆಯಲ್ಲಿ 7 ಕ್ವಿಂಟಾಲ್ ಕಡಲೆ ಬೆಳೆಯುತ್ತೆವೆ. ಉತ್ತಮ ಫಸಲು ಬಂದಿದ್ದು, ಈಗ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗಿದೆ. ಸರ್ಕಾರ ಇದಕ್ಕೆ ಪರಿಹಾರ ಒದಗಿಸಬೇಕು ಎಂದು ರೈತರು ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ. ಕೃಷಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಇನ್ನೆರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇದ್ದು, ಇಂದು ಸಹ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬುಧವಾರ ರಾತ್ರಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ. ರಾತ್ರಿ ಸುರಿದ ಮಳೆಗೆ ಸಣ್ಣದಾಗಿ ರಸ್ತೆಯಲ್ಲಿ ನೀರು ಹರಿದಿದ್ದು, ಅಲ್ಲಲ್ಲಿ ಸಣ್ಣ ಪುಟ್ಟ ಗುಂಡಿಗಳು ತುಂಬಿವೆ ಎನ್ನಲಾಗಿದೆ.

ಇದಲ್ಲದೆ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.












Click it and Unblock the Notifications