ಬೀಜ, ಗೊಬ್ಬರದ ಕೃತಕ ಅಭಾವ ಸೃಷ್ಠಿಸಿದರೆ ಕಠಿಣ ಕ್ರಮ: ಕೃಷಿ ಸಚಿವ
ಚಿತ್ರದುರ್ಗ, ಜೂನ್ 8: "ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೃತಕ ಅಭಾವ ಸೃಷ್ಠಿ ಮಾಡುವವರನ್ನು ಪತ್ತೆ ಮಾಡಿ ಅಂತಹವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು'' ಎಂದು ರಾಜ್ಯ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು.
ಚಿತ್ರದುರ್ಗ ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಮುಂಗಾರು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಲಭ್ಯತೆ ಹಾಗೂ ಪೂರ್ವಸಿದ್ಧತೆ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಹಾಗೂ ಕೃಷಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವರ್ಷ ಉತ್ತಮ ಮಳೆಯಾಗುವ ಸಾಧ್ಯತೆ
"ಬಿತ್ತನೆ ಬೀಜ ಹಾಗೂ ಗೊಬ್ಬರದ ಕೃತಕ ಅಭಾವ ಸೃಷ್ಠಿಸುವವರನ್ನು ಪತ್ತೆ ಮಾಡಿ ಯಾರ ಮುಲಾಜಿಗೂ ಒಳಗಾಗದೇ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು'' ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
"ಕಳೆದ ವರ್ಷಕ್ಕಿಂತ ಈ ವರ್ಷ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಕೃಷಿ ಇಲಾಖೆ ವತಿಯಿದ ಬಿತ್ತನೆ ಬೀಜ, ಗೊಬ್ಬರ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಈ ವರ್ಷ 110 ಮಿ.ಮೀ ಮಳೆ ಹೆಚ್ಚಾಗಿದೆ. ಬಿತ್ತನೆ ಬೀಜದಲ್ಲಿ ಶೇಂಗಾ, ತೋಗರಿ ಸೇರಿದಂತೆ ಒಟ್ಟು 8303 ಟನ್ ಬೀಜ ದಾಸ್ತಾನು ಇದೆ. ಗೊಬ್ಬರ ಕೂಡ ಸಾಕಷ್ಟು ಪ್ರಮಾಣದಲ್ಲಿ ಇದ್ದು, ಯಾವುದೇ ರೀತಿಯಲ್ಲಿ ಗೊಬ್ಬರದ ತೊಂದರೆ ಇಲ್ಲ. ಯೂರಿಯಾ, ಪೋಟ್ಯಾಶ್ ಸೇರಿದಂತೆ 21,331 ಟನ್ ಗೊಬ್ಬರ ಜಿಲ್ಲೆಯಲ್ಲಿ ದಾಸ್ತಾನು ಇದೆ. ಹಾಗಾಗಿ ಬಿತ್ತನೆ ಬೀಜ, ಗೊಬ್ಬರ ವಿತರಣೆಗೆ ಕೃಷಿ ಇಲಾಖೆ ಸಂಪೂರ್ಣ ಸಿದ್ಧವಾಗಿದೆ'' ಎಂದು ಕೃಷಿ ಸಚಿವರು ಹೇಳಿದರು.
ಬಹುಬೆಳೆ ಬೆಳೆಯಲು ಸಲಹೆ
ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಯೋಜನೆಯಡಿಯಲ್ಲಿ 17,000 ಪ್ಯಾಕೇಟ್ ತೊಗರಿ ಬೀಜ ಹಾಗೂ 5,000 ಶೇಂಗಾ ಚೀಲಗಳನ್ನು ಒಟ್ಟು 22,000 ಕುಟುಂಬಗಳಿಗೆ 1.63 ಕೋಟಿ ರೂ. ಬೆಲೆಯ ಶೇಂಗಾ ಮತ್ತು ತೊಗರಿಯನ್ನು ಉಚಿತವಾಗಿ ಚಿತ್ರದುರ್ಗ ಜಿಲ್ಲೆಯ ರೈತರಿಗೆ ನೀಡುವ ಕೆಲಸ ಮಾಡಲಾಗುತ್ತಿದೆ. ಇದೇ ರೀತಿಯಾಗಿ ರಾಜ್ಯಾದ್ಯಂತ ವಿತರಣೆ ಮಾಡಲಾಗುತ್ತಿದೆ. ರೈತರು ಬಹುಬೆಳೆಗಳನ್ನು ಬೆಳೆಯಬೇಕು. ಹಿರಿಯೂರು ಮತ್ತು ಚಳ್ಳಕೆರೆ ತಾಲ್ಲೂಕಿನಲ್ಲಿ ಕೇವಲ ಶೇಂಗಾ ಬೆಳೆಯನ್ನು ಬೆಳೆಯಲಾಗುತ್ತಿದೆ. ಹಾಗಾಗಿ ರೈತರು ಒಂದೇ ಬೆಳೆಗೆ ಸೀಮಿತವಾಗಬಾರದು ಎಂಬ ಉದ್ದೇಶ ಹೊಂದಲಾಗಿದೆ ಎಂದರು.
300 ಕೋಟಿ ರೂ. ಬಿಡುಗಡೆ
ರಾಗಿ ಮತ್ತು ಭತ್ತದ ಬೆಂಬಲ ಬೆಲೆಗೆ ಸಂಬಂಧಿಸಿದಂತೆ ಈಚೆಗೆ ಸಭೆ ನಡೆಸಿ ರಾಜ್ಯದ ಮುಖ್ಯಮಂತ್ರಿಗಳು ಈಗಾಗಲೇ 300 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದ್ದಾರೆ. ನೇರವಾಗಿ ಹಣ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ. ಬೆಳೆವಿಮೆ ಪರಿಹಾರ ಬಿಡುಗಡೆಯಾಗಿದೆ. ಈಗಾಗಲೇ ವರದಿ ನೀಡಲಾಗಿದ್ದು, ಇನ್ನೂ ನಾಲ್ಕೈದು ದಿನಗಳಲ್ಲಿ ಉಳಿದ ಹಣವೂ ಬಿಡುಗಡೆಯಾಗಲಿದೆ ಎಂದು ಸಚಿವರು ತಿಳಿಸಿದರು.
Recommended Video
ಆಹಾರ ಉತ್ಪಾದನೆಯಲ್ಲಿ ರಾಜ್ಯ ನಂ.1
ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಸಹ ಕಳೆದ ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ ಕೃಷಿ ಇಲಾಖೆ ವತಿಯಿಂದ 153 ಲಕ್ಷ ಮೆಟ್ರಿಕ್ ಟನ್ ಆಹಾರ ಬೆಳೆಯುವುದರ ಮೂಲಕ ಕರ್ನಾಟಕ ರಾಜ್ಯ ನಂ.1 ಸ್ಥಾನದಲ್ಲಿದ್ದು, ಶೇ.10ರಷ್ಟು ಆಹಾರ ಉತ್ಪಾದನೆಯಾಗಿದೆ. ಕೋವಿಡ್ ನಿಯಂತ್ರಣವನ್ನು ಸರ್ಕಾರ ಶಿಸ್ತುಬದ್ಧವಾಗಿ ನಿರ್ವಹಿಸುತ್ತಿದೆ ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಸಂಸದ ಎ.ನಾರಾಯಣಸ್ವಾಮಿ, ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಪೂರ್ಣಿಮಾ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ವೈ.ಎ ನಾರಾಯಣಸ್ವಾಮಿ, ಚಿದಾನಂದ ಎಂ ಗೌಡ, ಅಪರ ಕೃಷಿ ನಿರ್ದೇಶಕ ದಿವಾಕರ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ, ಜಂಟಿ ಕೃಷಿ ನಿರ್ದೇಶಕ ರಮೇಶ್ ಕಮಾರ್ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.