ವಾಣಿ ವಿಲಾಸ ಸಾಗರಕ್ಕೆ ಡಿಸೆಂಬರ್ನಲ್ಲಿ ಭದ್ರಾ ನೀರು
ಚಿತ್ರದುರ್ಗ, ಆಗಸ್ಟ್ 12 : 'ಭದ್ರಾ ಮೇಲ್ದಂಡೆ ಯೋಜನೆಯಡಿ ವಾಣಿವಿಲಾಸ ಸಾಗರ ಜಲಾಶಯಕ್ಕೆ ಡಿಸೆಂಬರ್ನಲ್ಲಿ ನೀರು ಪೂರೈಕೆ ಮಾಡಲಾಗುತ್ತದೆ' ಎಂದು ಕಾರ್ಮಿಕ ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಹೇಳಿದರು.
ಸಚಿವರು ಚಿತ್ರದುರ್ಗದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, 'ಚಿತ್ರದುರ್ಗ ಜಿಲ್ಲೆ ಮತ್ತು ತುಮಕೂರಿನ ಪಾವಗಡ ತಾಲೂಕು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿವೆ' ಎಂದರು.
ಭದ್ರಾ ಮೇಲ್ದಂಡೆ ಕಾಮಗಾರಿ ವಿಳಂಬಕ್ಕೆ ಕಾಂಗ್ರೆಸ್ ಕಾರಣ
'ಈ ಪ್ರದೇಶದಲ್ಲಿ ಅಂತರ್ಜಲ ಮಟ್ಟ ಕುಸಿದು ಹೋಗಿದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವುದು ಇದಕ್ಕಿರುವ ಪರಿಹಾರ. ನವೆಂಬರ್ನಲ್ಲಿ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ' ಎಂದು ತಿಳಿಸಿದರು.
'ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯನ್ನು ವಿವಿಧ ಪ್ಯಾಕೇಜ್ಗಳಲ್ಲಿ ಕೈಗೊಳ್ಳಲಾಗಿದೆ. ಅಜ್ಜಂಪುರದಲ್ಲಿ ಸುರಂಗ ಮಾರ್ಗ ಕೊರೆಯುವ ಕೆಲಸ ಪ್ರಗತಿಯಲ್ಲಿದೆ. ಉಳಿದ 88 ಕಿ.ಮೀ. ಸುರಂಗ ಮಾರ್ಗವನ್ನು ವೇಗವಾಗಿ ಪೂರ್ಣಗೊಳಿಸಲಾಗುತ್ತದೆ' ಎಂದು ಭರವಸೆ ನೀಡಿದರು.
ಕೊಪ್ಪಳ ನಗರಕ್ಕೆ ಇನ್ನು ಕುಡಿಯುವ ನೀರಿನ ಸಮಸ್ಯೆ ಇಲ್ಲ
ಯೋಜನೆಯ ಕಾಮಗಾರಿ ಕುರಿತು ಅಧಿಕಾರಿಗಳ ಜೊತೆ ಸಚಿವರು ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು ಭೂಸ್ವಾಧೀನ ತಡವಾಗಿದ್ದರಿಂದ ಯೋಜನೆ ವಿಳಂಬವಾಗಿದೆ ಎಂದು ಮಾಹಿತಿ ನೀಡಿದರು.
'ಭದ್ರಾ ಮೇಲ್ದಂಡೆ ಯೋಜನಾ ವೆಚ್ಚವನ್ನು 12,340 ಕೋಟಿಯಿಂದ 2,409 ಕೋಟಿ ರೂ.ಗಳಿಗೆ ಏರಿಕೆ ಮಾಡಲಾಗಿದೆ. ಈ ಯೋಜನೆಯಡಿ 2,25,515 ಹೆಕ್ಟೇರ್ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ' ಎಂದು ಸಚಿವರು ಮಾಹಿತಿ ನೀಡಿದರು.