Vani Vilasa Sagara: ಆಗಸ್ಟ್ 04ರಂದು ವಾಣಿ ವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ ಎಷ್ಟಿದೆ ಗೊತ್ತಾ.?
Vani Vilasa Sagara: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭದಟದಿಂದ ಜಲಾಶಯಗಳು ತುಂಬಿ ಹರಿಯುತ್ತಿವೆ. ಹಾಗಾದರೆ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ ಜಲಾಶಯದ ಪ್ರಸ್ತುತ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯರಾಯನ ಆರ್ಭಟಿಸುತ್ತಿದ್ದಾನೆ. ಇತ್ತ ಮಧ್ಯ ಕರ್ನಾಟಕದ ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಯಲ್ಲಿ ಮಳೆಗಾಗಿ ರೈತರು ಮುಗಿಲು ನೋಡುತ್ತಿದ್ದಾರೆ. ಈಗಾಗಲೇ ರಾಜ್ಯದ ಬಹುತೇಕ ಜಲಾಶಯಗಳು ಉಕ್ಕಿ ಹರಿಯುತ್ತಿವೆ. ಆದರೆ ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿಯಾಗಿರುವ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯಕ್ಕೆ ಒಳಹರಿವು ತಗ್ಗಿದೆ.

ಇಂದಿನ ವರದಿಯಲ್ಲಿ ಜಲಾಶಯಕ್ಕೆ 346 ಕ್ಯೂಸೆಕ್ ಒಳಹರಿವು ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 114.65 ಅಡಿ ಇದೆ. ಜಲಾಶಯಕ್ಕೆ ಕಳೆದ ಐದಾರು ದಿನಗಳಿಂದ ಒಳಹರಿವು ಹರಿದು ಬರುತ್ತಿದೆ. ಕಳೆದ ಸೋಮವಾರ 974 ಕ್ಯೂಸೆಕ್ ನೀರು ಹರಿದು ಬಂದಿತ್ತು. ನಂತರ ಒಳಹರಿವು ಹೆಚ್ಚಳವಾಯಿತು.
ನಂತರ ಒಂದೇ ದಿನ ಜಲಾಶಯಕ್ಕೆ 4,737 ಕ್ಯೂಸೆಕ್ ಒಳಹರಿವು ಹೆಚ್ಚಳವಾಗುವ ಮೂಲಕ ರೈತರಲ್ಲಿ ಮತ್ತೊಂದಿಷ್ಟು ಭರವಸೆ ಮೂಡಿಸಿತು. ಆದರೆ ಜಲಾಶಯದ ಮೇಲ್ಭಾಗದಲ್ಲಿ ಮಳೆ ಕಡಿಮೆಯಾದ್ದರಿಂದ ಡ್ಯಾಂಗೆ ಒಳಹರಿವು ಕಡಿಮೆಯಾಯಿತು. 30 ಟಿಎಂಸಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ವಾಣಿವಿಲಾಸ ಸಾಗರ ಕಳೆದ 2022ರಲ್ಲಿ ಎರಡನೇ ಬಾರಿಗೆ ಕೋಡಿ ಬಿದ್ದಿತ್ತು. ಈ ಬಾರಿ ಜಲಾಶಯ ಭರ್ತಿಯಾಗಲು ಇನ್ನು 15 ಅಡಿ ನೀರು ಬರಬೇಕಿದೆ. ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಹೆಚ್ಚು ಮಳೆಯಾದರೆ ಈ ಜಲಾಶಯಕ್ಕೆ ಅನುಕೂಲ ಆಗಲಿದೆ.
ವಾಣಿ ವಿಲಾಸ ಸಾಗರ ಜಲಾಶಯದಲ್ಲಿ 1933ರಲ್ಲಿ 135.25 ಅಡಿ ನೀರು ಸಂಗ್ರಹ ಆಗಿದ್ದು, 1934ರಲ್ಲಿ 130.24 ಅಡಿ ನೀರು ಹರಿದು ಬಂದಿತ್ತು. 1957ರಲ್ಲಿ 125.05 ಅಡಿ, 1958ರಲ್ಲಿ 124.50 ಅಡಿ, 2021ರಲ್ಲಿ 125.50 ಅಡಿ, 2022ರಲ್ಲಿ 135 ಅಡಿ ನೀರು ಸಂಗ್ರಹ ಆಗುವ ಮೂಲಕ ಹೊಸ ದಾಖಲೆ ಸೃಷ್ಟಿಸಿತ್ತು.
ಚಿಕ್ಕಮಗಳೂರು ಜಿಲ್ಲೆಯ ಬಾಬು ಬುಡನ್ ಗಿರಿ ಕಂದಕಗಳಲ್ಲಿ ಜನಿಸುವ ವೇದಾ ಎಂಬ ನದಿ ಕಡೂರಿನ ಬಳಿ ಅವತಿ ಎಂಬ ನದಿಯನ್ನು ಸೇರಿ ಅವು ಮುಂದೆ ವೇದಾವತಿ ನದಿಯಾಗಿ ಹರಿಯುತ್ತದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ವಾಣಿವಿಲಾಸಪುರ ಬಳಿ ಎರಡು ಗುಡ್ಡಗಳ ಮಧ್ಯೆ ನಿರ್ಮಿಸಿರುವ ಜಲಾಶಯವೇ ಮಾರಿಕಣಿವೆ ಡ್ಯಾಂ. ಇನ್ನೂ ವಾಣಿವಿಲಾಸ ಸಾಗರವನ್ನು ಆರ್ಕಿಟೆಕ್ಚರಲ್ ಮಾಸ್ಟರ್ ಪೀಸ್ ಎಂದು ಗುರುತಿಸಲಾಗಿದೆ.












Click it and Unblock the Notifications