ಶೀಘ್ರವೇ ವಾಣಿವಿಲಾಸ ಸಾಗರ ಜಲಾಶಯದಿಂದ ನಾಲೆಗಳಿಗೆ ನೀರು: ಮುನ್ನೆಚ್ಚರಿಕೆಗೆ ಸೂಚನೆ
ಚಿತ್ರದುರ್ಗ, ಅಕ್ಟೋಬರ್ 14 : ಅಕ್ಟೋಬರ್ 17ರಿಂದ ನವೆಂಬರ್ 11ರವರೆಗೂ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ವಾಣಿ ವಿಲಾಸ ಜಲಾಶಯದಿಂದ ನಾಲೆಗಳ ಮೂಲಕ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಅತೀ ಕಡಿಮೆ ಮಳೆಯಾಗಿ, ತಾಲೂಕು ಬರಗಾಲ ಪೀಡಿತವಾಗಿರುವುದರಿಂದ ಅಚ್ಚುಕಟ್ಟು ವ್ಯಾಪ್ತಿಯಲ್ಲಿರುವ ತೋಟಗಾರಿಕೆ ಹಾಗೂ ಇತರೆ ಕೃಷಿ ಬೆಳೆಗಳಿಗೆ ನೀರು ಅವಶ್ಯವಾಗಿರುತ್ತದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಲಹಾ ಸಮಿತಿ ಸದಸ್ಯರುಗಳು ಹಾಗೂ ಅಧಿಕಾರಿಗಳು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ.
ವಾಣಿ ವಿಲಾಸ ಜಲಾಶಯದಿಂದ ಮೊದಲ ಹಂತದ ನೀರನ್ನು 30 ದಿನಗಳ, ಕಾಲ ನಾಲೆಗಳಿಗೆ ಹರಿಸುವಂತೆ ಸಚಿವ ಡಿ.ಸುಧಾಕರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ನೀರು ನಾಲೆಗಳಲ್ಲಿ ಹರಿಸುವುದರಿಂದ ನಾಲೆಯ ಅಕ್ಕಪಕ್ಕದ ಎಲ್ಲಾ ಗ್ರಾಮಗಳ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ. ಅಲ್ಲದೇ ತೋಟಗಾರಿಕೆ ಬೆಳೆಗಳು ಹಾಗೂ ಅಲ್ಪ ಸ್ವಲ್ಪ ಒಣಗಿರುವ ಬೆಳೆಗಳನ್ನು ಉಳಿಸಿಕೊಳ್ಳಬಹುದು ಎಂದು ಸಲಹಾ ಸಮಿತಿ ಸದಸ್ಯರು ಅಭಿಪ್ರಾಯ ತಿಳಿಸಿದರು.
ಸದಸ್ಯರ ಮನವಿಯ ಮೇರೆಗೆ ಸಲಹಾ ಸಮಿತಿಯ ಅಧ್ಯಕ್ಷರು ದಿನಾಂಕ : 17.10.2023 ರಿಂದ 16,11.2023 ರವರೆಗೆ ನೀರು ಹರಿಸಲು ಸೂಚಿಸಿದರು. ಪ್ರಸ್ತುತ ವಿವಿ ಸಾಗರ ಜಲಾಶಯದಲ್ಲಿ 121.15 ಅಡಿಗಳಷ್ಟು ಮತ್ತು 22.00 ಟಿ.ಎಂ.ಸಿ. ನೀರು ಇದೆ.
ಎಲ್ಲಾ ಇಲಾಖೆಯ ಸಹಯೋಗದೊಂದಿಗೆ ಸಮರ್ಪಕವಾದ ನೀರು ನಿರ್ವಹಣೆ ಮಾಡಲು ಹಾಗೂ ನೀರು ಯಾವುದೇ ಕಾರಣಕ್ಕೆ ಪೋಲಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸಚಿವ ಡಿ.ಸುಧಾಕರ್ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳು ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳಿಗೆ ನೀರು ಹರಿಸುವ ಪೂರ್ವದಲ್ಲಿ ಮುಂಜಾಗ್ರತಾವಾಗಿ ಜನ ಜಾನುವಾರುಗಳಿಗೆ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರವಹಿಸಲು ವ್ಯಾಪಕವಾಗಿ ಜಾಗೃತಿ ಮೂಡಿಸಲು ಸೂಚಿಸಿದರು.
ಈ ಸಭೆಯಲ್ಲಿ ಸಚಿವ ಡಿ.ಸುಧಾಕರ್, ಸಲಹಾ ಸಮಿತಿ ಸದಸ್ಯರುಗಳಾದ ಕೆ.ಟಿ. ತಿಪ್ಪೇಸ್ವಾಮಿ, ಸಿದ್ದರಾಮಣ್ಣ, ಆರ್.ಗೌಡ ಮತ್ತು ರಾಮಕುಮಾರ್ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳಾದ ವಿಜಯಕುಮಾರ್.ಎ.ಎಂ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ವಿ.ವಿ.ಸಾಗರ ಉಪವಿಭಾಗ, ಹಿರಿಯೂರು, ಲೋಕೇಶ್, ಹಿರಿಯ ಸಹಾಯಕ ನಿರ್ದೇಶಕರು - ತೋಟಗಾರಿಕಾ ಇಲಾಖೆ, ಹಿರಿಯೂರು, ಕಿರಣ್, ಸಹಾಯಕ ಕೃಷಿ ಅಧಿಕಾರಿಗಳು, ಹಿರಿಯೂರು ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications