ಭೋವಿ ನಿಗಮದಲ್ಲಿ ಅಕ್ರಮ ಮಾಡಿದ್ಯಾರು? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಚಿತ್ರದುರ್ಗ, ಜುಲೈ, 20: ಭೋವಿ ಅಭಿವೃದ್ಧಿ ನಿಗಮದ ಮಂಡಳಿಯಲ್ಲಿ ಅಕ್ರಮ ಮಾಡಿದ್ಯಾರು ಎನ್ನುವ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 47 ಕೋಟಿ 10 ಲಕ್ಷ ರುಪಾಯಿ ಪ್ರಕರಣದಲ್ಲಿ ಜೈಲಿಗೆ ಹೋದವರು ಯಾರು? ಎಂದು ಪ್ರಶ್ನಿಸಿದರು. ಅಲ್ಲದೆ, ನಾವು ಯಾರನ್ನೂ ಬೆದರಿಸುವ ಕೆಲಸ ಮಾಡುತ್ತಿಲ್ಲ. ವಾಸ್ತು ಸ್ಥಿತಿ ಬಗ್ಗೆ ಸದನದಲ್ಲಿ ಇಟ್ಟಿದ್ದೇವೆ ಅಷ್ಟೇ. ಮಾಜಿ ಎಂಎಲ್ಸಿ ವೀರಯ್ಯ ಹಾಗೂ ಶಂಕ್ರಪ್ಪ ಅನ್ನೋರು ಜೈಲಿಗೆ ಹೋಗಿದ್ದಾರೆ. ಅದನ್ನ ಯಾಕೆ ಇವರು ಪ್ರಸ್ತಾಪ ಮಾಡುತ್ತಿಲ್ಲ? ಎಂದು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು.

ಅದು ಸಾರ್ವಜನಿಕ ದುಡ್ಡು ಅಲ್ಲವೇ, ಏಕೆ ಮಾತನಾಡುತ್ತಿಲ್ಲ? ಅವರು ಕೊಳ್ಳೆ ಹೊಡೆದಿದ್ದು ಜನರ ದುಡ್ಡು ಅಲ್ವಾ? ಇದಕ್ಕೆಲ್ಲ ಉತ್ತರ ಬರುತ್ತಿಲ್ಲ ಅವರಿಂದ. ನಮ್ಮನ್ನು ಮಾತ್ರ ಟೀಕೆ ಮಾಡುತ್ತಾರೆ ಎಂದು ಬಿಜೆಪಿಯವರನ್ನು ತರಾಟೆಗೆ ತೆಗೆದುಕೊಂಡರು.
ವಿಜಯೇಂದ್ರಗೆ ಸಿಎಂ ಟಾಂಗ್: ವಾಲ್ಮೀಕಿ ಹಗರಣ ಪ್ರಕರಣ ಸದ್ದು ಜೋರಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಹಾಗಾದರೆ, ಬಿಜೆಪಿಯವರು ಹಗರಣಗಳ ಒಪ್ಪಿಕೊಳ್ತಾರಾ? ಅವರು ಮಾಡಿದ ಹಗರಣಗಳ ಬಗ್ಗೆ ಕೆಲವು ತನಿಖೆ ನಡೆಯುತ್ತಿದೆ.
ಅವರು ಹಗರಣ ಮಾಡಿದಾಗ ED ಯಾರು ಬರಲಿಲ್ಲ. ಈಗ ಮಾತ್ರ ಓಡೋಡಿ ಬಂದ್ರು.. ಯಾಕೆ ?. ಎಸ್ಐಟಿ ಮೂಲಕ ತನಿಖೆ ಮಾಡಿಸುತ್ತಿದ್ದೇವೆ. ಆದರೂ ED ಬಂದಿದೆ. ಎಲ್ಲಾ ಮಾಡಿ ಈಗ ಮುಚ್ಚಿ ಹಾಕ್ತಾರೆ ಅಂತಾ ಹೇಳ್ತಿದ್ದಾರೆ ಎಂದರು.
ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಹೊರವಲಯದಲ್ಲಿರುವ ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದಲ್ಲಿ ಹಮ್ಮಿಕೊಂಡಿದ್ದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ವಿದ್ಯೆಯ ಅವಕಾಶ ಇಲ್ಲದವರು ಕುಲ ಕಸುಬನ್ನಷ್ಟೇ ಮಾಡಿಕೊಂಡು ಹಿಂದುಳಿದರು. ಶೋಷಿತ ಸಮುದಾಯಗಳ ವಿಮೋಚನೆಗೆ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಮೇದಾವಿಯಾದರು ಎಂದು ವಿವರಿಸಿದರು.
ಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದರು.
ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದರು. ಎಸ್ಸಿ ಅಥವಾ ಎಸ್ಟಿ ಸಮುದಾಯಗಳ ಜನಸಂಖ್ಯೆ ರಾಜ್ಯದಲ್ಲಿ ಶೇಕಡ 24ರಷ್ಟು ಇದ್ದಾರೆ. ಈ ಜನಸಂಖ್ಯೆಗೆ ಸಮವಾಗಿ ಅಭಿವೃದ್ಧಿ ಆಯವ್ಯಯದ ಶೇಕಡ 24ರಷ್ಟು ಹಣವನ್ನು ಈ ಸಮುದಾಯಗಳ ಏಳಿಗೆಗಾಗಿ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಭೋವಿ ಸಮುದಾಯದ ಪ್ರತಿನಿಧಿಯನ್ನು ಕೆಪಿಎಸ್ಸಿ ಸದಸ್ಯರನ್ನಾಗಿ ಮಾಡಿದ್ದು ನಮ್ಮ ಸರ್ಕಾರ ಎಂದರು.
ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಮಗವಾಗಿ ಮರುನಾಮಕರಣ ಮಾಡುಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನು ಈಡೇರಿಸಲಾಗುವುದು ಎಂದರು. ಸಿದ್ಧರಾಮೇಶ್ವರ ಅಧ್ಯಯನ ಪೀಠಕ್ಕಾಗಿ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದರು.
ಈ ವೇಳೆ ಸಚಿವರಾದ ಶಿವರಾಜ್ ತಂಗಡಗಿ, ಡಿ.ಸುಧಾಕರ್, ಸತೀಶ್ ಜಾರಕಿಹೊಳಿ, ಶಾಸಕರಾದ ರಘುಮೂರ್ತಿ, ವೀರೇಂದ್ರ ಪಪ್ಪಿ, ಹೆಚ್.ವಿ.ವೆಂಕಟೇಶ್, ಶ್ರೀನಿವಾಸ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದರಾದ ಚಂದ್ರಣ್ಣ ಸೇರಿ ಹಲವು ಮಂದಿ ಸಮಾಜದ ಮುಖಂಡರು ಮತ್ತು ಸಮುದಾಯದ ಶ್ರೀಗಳು ಹಾಗೂ ನಾನಾ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.












Click it and Unblock the Notifications